ಮಲೆ ಮಾದೇಶ್ವರ ಯುಗಾದಿ ಜಾತ್ರೆ; ಭಕ್ತರಿಗೆ ಪ್ರವೇಶ ನಿರ್ಬಂಧ
ಚಾಮರಾಜನಗರ, ಏಪ್ರಿಲ್ 5; ಕೋವಿಡ್ 2ನೇ ಅಲೆ ಹಡುವಿಕೆ ತಡೆಯಲು ಕರ್ನಾಟಕ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರನ ಬೆಟ್ಟದಲ್ಲಿ ನಡೆಯುವ ಯುಗಾದಿ ಜಾತ್ರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ.
ಹನೂರು ತಾಲೂಕಿನಲ್ಲಿರುವ ಮಲೆಮಹದೇಶ್ವರನ ಬೆಟ್ಟಕ್ಕೆ ಏಪ್ರಿಲ್ 10 ರಿಂದ 13ರ ತನಕ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಚಾಮರಾಜನಗರ ಜಿಲ್ಲಾಡಳಿತ ಈ ಕುರಿತು ಆದೇಶ ಹೊರಡಿಸಿದೆ.
ಯುಗಾದಿ ಜಾತ್ರೆಯ ವಿಶೇಷ ಪೂಜಾ ಕಾರ್ಯಗಳಿಗೆ ಅರ್ಚಕರು, ಸಿಬ್ಬಂದಿ, ಸ್ಥಳೀಯರು ಮತ್ತು ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶವಿಲ್ಲ.

ದೇವಾಲಯಕ್ಕೆ ಭಕ್ತಾದಿಗಳ ಪ್ರವೇಶವನ್ನು ನಿಷೇಧಿಸಿ, ಸರಳ ಮತ್ತು ಸಂಪ್ರದಾಯಿಕವಾಗಿ ಜಾತ್ರಾ ಮಹೋತ್ಸವ ನಡೆಸಬೇಕು ಎಂದು ಜಿಲ್ಲಾಡಳಿತ ತನ್ನ ಆದೇಶದಲ್ಲಿ ತಿಳಿಸಿದೆ.
ಶಿವರಾತ್ರಿಯಲ್ಲೂ ನಿಷೇಧ; ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರನ ಬೆಟ್ಟದಲ್ಲಿ ನಡೆಯುವ ಮಹಾಶಿವರಾತ್ರಿ ಜಾತ್ರೆಗೆ ಮಲೆಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಥಳೀಯ ಗ್ರಾಮಸ್ಥರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.
ಮಾರ್ಚ್ 10 ರಿಂದ 14ರ ತನಕ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಸಂಪ್ರದಾಯದಂತೆ ನಡೆದಿತ್ತು. ಈ ಜಾತ್ರೆಗೆ ಬೆಟ್ಟದ ತಪ್ಪಲಿನ ಗ್ರಾಮಸ್ಥರಿಗೆ ಮಾತ್ರ ಅವಕಾಶ ಕಲ್ಪಿಸಿ, ಬೇರೆ ಜಿಲ್ಲೆ ಹಾಗೂ ವಿವಿಧ ರಾಜ್ಯಗಳಿಂದ ಬರುವ ಭಕ್ತರಿಗೆ ನಿಷೇಧ ಹೇರಲಾಗಿತ್ತು.
ಏಪ್ರಿಲ್ 4ರ ಭಾನುವಾರದ ವರದಿಯಂತೆ ಚಾಮರಾಜನಗರ ಜಿಲ್ಲೆಯಲ್ಲಿ 15 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 7141ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳು 75.












Click it and Unblock the Notifications