ಚಾಮರಾಜನಗರದ ಬಿಜೆಪಿ ಅಭ್ಯರ್ಥಿ ಶನಿವಾರ ಅಂತಿಮ
ಚಾಮರಾಜನಗರ, ಮಾರ್ಚ್ 15 : ಚಾಮರಾಜನಗರದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಯಾರು?. ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಕಣಕ್ಕಿಳಿಯುವ ಸಾಧ್ಯತೆ ಇದ್ದು, ಶನಿವಾರ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಈಗಾಗಲೇ ವಿ.ಶ್ರೀನಿವಾಸ ಪ್ರಸಾದ್ ಚುನಾವಣಾ ರಾಜಕೀಯಿಂದ ದೂರವಾಗಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ವಿ.ಶ್ರೀನಿವಾಸ ಪ್ರಸಾದ್ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಚಾಮರಾಜನಗರ ಕ್ಷೇತ್ರದಿಂದ ಕಣಕ್ಕಿಳಿಯುವ ಕುರಿತು ಚರ್ಚೆ ನಡೆಸಿದರು. 'ಶನಿವಾರ ತಮ್ಮ ನಿರ್ಧಾರವನ್ನು ಪ್ರಕಟಿಸುವುದಾಗಿ' ಹೇಳಿದರು.
ಮಾ.15 ರಂದು ಚಾಮರಾಜನಗರದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ
ಚಾಮರಾಜನಗರ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಒತ್ತಾಯಿಸಿದ್ದಾರೆ. ಕಾಂಗ್ರೆಸ್ನಿಂದ ಹಾಲಿ ಸಂಸದ ಆರ್.ಧ್ರುವನಾರಾಯಣ ಅವರು ಅಭ್ಯರ್ಥಿ.
ಶ್ರೀನಿವಾಸ್ಪ್ರಸಾದ್ ರನ್ನು ಕಣಕ್ಕಿಳಿಸಲು ಅಭಿಮಾನಿಗಳ ಕಸರತ್ತು!
ಚುನಾವಣಾ ಆಯೋಗ ಈಗಾಗಲೇ ಲೋಕಸಭಾ ಚುನಾವಣೆಗೆ ವೇಳಾಪಟ್ಟಿಯನ್ನು ಘೋಷಣೆ ಮಾಡಿದೆ. ಮೊದಲ ಹಂತದಲ್ಲಿ ಅಂದರೆ ಏ.18ರಂದು ಚಾಮರಾಜನಗರ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 19ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ...
7 ಕ್ಷೇತ್ರಗಳಿಗೆ ಪ್ರಬಲ ಅಭ್ಯರ್ಥಿ ಅಂತಿಮಗೊಳಿಸಲು ಬಿಜೆಪಿ ಕಸರತ್ತು
ಚರ್ಚೆ ಸಮಾಧಾನ ತಂದಿದೆ
ಶುಕ್ರವಾರ ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ವಿ.ಶ್ರೀನಿವಾಸ ಪ್ರಸಾದ್ ಅವರು, 'ಚುನಾವಣೆಗೆ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರು, ಮುಖಂಡರು ಒತ್ತಾಯ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರ ಜೊತೆಗಿನ ಮಾತುಕತೆ ಸಮಾಧಾನ ತಂದಿದೆ. ಶನಿವಾರ ನನ್ನ ನಿರ್ಧಾರವನ್ನು ತಿಳಿಸುತ್ತೇನೆ' ಎಂದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ಚುನಾವಣಾ ನಿವೃತ್ತಿ
'ನಂಜನಗೂಡು ಉಪ ಚುನಾವಣೆ ಸಮಯದಲ್ಲಿಯೇ ನಾನು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಮನಸ್ಥಿತಿಯಲ್ಲಿಲ್ಲ. ಆದರೆ, ಚಾಮರಾಜನಗರದಲ್ಲಿ ಒಟ್ಟಾಗಿ ದುಡಿಯೋಣ ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಆದ್ದರಿಂದ, ಈ ಬಗ್ಗೆ ಚಿಂತನೆ ನಡೆಸುತ್ತೇನೆ' ಎಂದು ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ಜಿಲ್ಲಾ ಘಟಕದ ಒತ್ತಡ
ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಆರ್.ಧ್ರುವ ನಾರಾಯಣ್ ಅವರು 2 ಬಾರಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಅವರಿಗೆ ಪ್ರಬಲ ಪ್ರತಿಸ್ಪರ್ಧೆ ನೀಡಬೇಕಾದರೆ ಮಾಜಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಕಣಕ್ಕಿಳಿಸಬೇಕು ಎಂದು ಜಿಲ್ಲಾ ಬಿಜೆಪಿ ಘಟಕ ಒತ್ತಾಯಿಸುತ್ತಿದೆ.
2014ರ ಫಲಿತಾಂಶ
2014ರ ಚುನಾವಣೆಯಲ್ಲಿ ಆರ್.ಧ್ರುವ ನಾರಾಯಣ್ ಅವರು 567782 ಮತಗಳನ್ನು ಪಡೆದಿದ್ದರು. ಬಿಜೆಪಿಯಿಂದ ಎ.ಆರ್.ಕೃಷ್ಣ ಮೂರ್ತಿ ಅವರು ಕಣಕ್ಕಿಳಿದಿದ್ದರು 426600 ಮತ ಪಡೆದಿದ್ದರು. ಜೆಡಿಎಸ್ನಿಂದ ಕೋಟೆ ಶಿವಣ್ಣ ಅಭ್ಯರ್ಥಿಯಾಗಿದ್ದರು 58,760 ಮತ ಪಡೆದಿದ್ದರು. ಈ ಬಾರಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ.