ಮುಂದಿನ ಪ್ರಧಾನಿ ಯಾರಾಗ್ತಾರೆ ಎಂದು ಸ್ಫೋಟಕ ಭವಿಷ್ಯ ನುಡಿದ ಮಾಜಿ ಸಿಎಂ
ಚಾಮರಾಜನಗರ, ಏಪ್ರಿಲ್, 21: ಲೋಕಸಭೆ ಚುನವಾಣೆ ಹಿನ್ನೆಲೆ ಇಂದು (ಏಪ್ರಿಲ್ 21) ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ಪ್ರಧಾನಿ ಬಗ್ಗೆ ಸ್ಫೋಟಕ ಭವಿಷ್ಯವೊಂದನ್ನು ನುಡಿದಿದ್ದಾರೆ.
ಸೂರ್ಯ-ಚಂದ್ರರು ಇರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಹಳೇ ಬಸ್ ನಿಲ್ದಾಣದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ, ಸರ್ಕಾರ ದಿವಾಳಿಯಾಗಿದೆ, ಕೇಂದ್ರದಲ್ಲಿ ಅವರಿಗೆ 50 ಸ್ಥಾನ ಗೆಲ್ಲಲ್ಲು ಸಾಧ್ಯವಿಲ್ಲ. ಸುಮ್ಮನೇ ಪೊಳ್ಳು ಭರವಸೆ ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ನವರು ಬಹಳ ಹಗುರವಾಗಿ ಮಾತನಾಡುತ್ತಿದ್ದಾರೆ. ಆದರೆ, ಮೋದಿಯವರು ಬೆಂಗಳೂರಿಗೆ ಬಂದಾಗ ಲಕ್ಷ ಲಕ್ಷ ಜನರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಆ ಮೂಲಕ ಮೋದಿಯವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮೊದಲು ಅವರ ಪ್ರಧಾನಿ ಅಭ್ಯರ್ಥಿ ಯಾರು ಎಂದು ಹೇಳಲಿ ಎಂದು ಕೈ ಪಕ್ಷದ ವಿರುದ್ಧ ಹರಿಹಾಯ್ದರು.
ಮೋದಿಯವರು ಕಿಸಾನ್ ಸಮ್ಮಾನ್, ಜಲಜೀವನ್ ಮಿಷನ್, ಉಚಿತ ಅಡುಗೆ ಅನಿಲ ಸೇರಿದಂತೆ ಹಲವಾರು ಯೋಜನೆಗಳನ್ನು ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಉಚಿತವಾಗಿ ಕೊಡುವ ಅಕ್ಕಿಯನ್ನು ಕಾಂಗ್ರೆಸ್ನವರು ತಾವು ಕೊಟ್ಟಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ನಾಡಿನೆಲ್ಲೆಡೆ ಜನರ ಬೆಂಬಲ ಮೋದಿಯವರ ಪರ ಹೆಚ್ಚಾಗುತ್ತಿದೆ. ನರೇಂದ್ರ ಮೋದಿಯವರು ಒಂದು ದಿನ ವಿಶ್ರಾಂತಿ ಪಡೆಯದೆ ಶ್ರಮಿಸುತ್ತಿದ್ದಾರೆ. ಆದ್ದರಿಂದ ಚಾಮರಾಜನಗರದಲ್ಲಿ ಬಾಲರಾಜು ಅವರನ್ನು ಗೆಲ್ಲಿಸಿ ಮೋದಿ ಕೈ ಬಲಪಡಿಸಬೇಕು ಎಂದರು.
ನಾವು ಕೊಟ್ಟಂತಹ ಭಾಗ್ಯಲಕ್ಷ್ಮಿ ಯೋಜನೆಯನ್ನು ಸಿದ್ದರಾಮಯ್ಯ ಯಾಕೆ ನಿಲ್ಲಿಸಿದಿರಿ?, ಕಿಸಾನ್ ಸಮ್ಮಾನ್ ಯೋಜನೆಯ ರಾಜ್ಯದ ಪಾಲು 4 ಸಾವಿರ ಯಾಕೆ ನಿಲ್ಲಿಸಿದ್ದೀರಿ? ಮನೆ ಮನೆಗೆ ಹೋಗಿ ಬಿಜೆಪಿ ಪರ ನಮ್ಮ ಅಭ್ಯರ್ಥಿಗೆ ಮತ ಹಾಕಿಸಿ ಎಂದು ಮನವಿ ಮಾಡಿದರು.
ಹುಬ್ಬಳ್ಳಿಯಲ್ಲಿ ಯುವತಿಯ ಹತ್ಯೆಯಾಗಿದೆ. ಆದರೆ, ಕಾಂಗ್ರೆಸ್ನವರು ಒಂದೇ ಕೋಮಿನ ಓಲೈಕೆಯಲ್ಲಿದ್ದಾರೆ. ರಾಜ್ಯ ಸರ್ಕಾರ ಅವರ ಕೈಯಲ್ಲಿ ಸುರಕ್ಷಿತವಾಗಿ ಇಲ್ಲ, ನಾನು ಇಲ್ಲಿ ಬಂದಿದ್ದಕ್ಕೆ ಸಾರ್ಥಕವಾಗಬೇಕಾದರೆ, ನಮ್ಮ ಅಭ್ಯರ್ಥಿ ಗೆಲ್ಲಬೇಕು ಎಂದು ಕೋರಿದರು.
ಕಾಂಗ್ರೆಸ್ ಜಾಹೀರಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಕಾಂಗ್ರೆಸ್ ಕೊಟ್ಟಿರುವ ಜಾಹಿರಾತುಗಳಿಗೆ ಯಾವುದೇ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಚೊಂಬು, ತೆರಿಗೆ ಬಾಕಿ ಜಾಹೀರಾತುಗಳಿಗೆ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಗುಂಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಮೋದಿ ಪರ ಒಲವಿದೆ, ಎಲ್ಲೆಡೆ ಮೋದಿ- ಮೋದಿ ಎನ್ನುತ್ತಿದ್ದಾರೆ. ಈ ಬಾರಿ ಚಾಮರಾಜನಗರ ಸೇರಿದಂತೆ ಎಲ್ಲೆಡೆ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ ಎಂದರು.
ಎನ್ಡಿಎಗೆ ಈ ಬಾರಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಗೊಳ್ಳುವುದು ನಿಶ್ಚಿತ ಎಂದರು. ಇದೇ ವೇಳೆ, ಈಶ್ವರಪ್ಪ ಸ್ಪರ್ಧೆ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.












Click it and Unblock the Notifications