ಚಿಕನ್ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ, ಯಡವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಅಮಾನತು
ಚಾಮರಾಜನಗರ, ಜುಲೈ, 20: ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಚಿಕನ್ ಊಟ ಸೇವಿಸಿ 28 ವಿದ್ಯಾರ್ಥಿಗಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲ ಕುಮಾರಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜು ಅವರು ಕುಮಾರಸ್ವಾಮಿ ಅವರನ್ನು ಅಮಾನತುಪಡಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಇವರ ಸ್ಥಾನಕ್ಕೆ ಪ್ರಭಾರ ಪ್ರಾಂಶುಪಾಲರಾಗಿ ಅದೇ ಶಾಲೆಯ ಕಂಪ್ಯೂಟರ್ ಶಿಕ್ಷಕ ಎಂ.ಕುಮಾರಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ನವೀನ್ ಕುಮಾರ್ ರಾಜು, ಆದೇಶದಲ್ಲಿ ಅಮಾನತುಗೊಂಡ ಪ್ರಾಂಶುಪಾಲರೇ ಪ್ರಭಾರ ನಿಲಯಪಾಲಕರಾಗಿ ಕಾರ್ಯನಿರ್ವಹಿಸಿದ್ದರು. ಈ ವೇಳೆ ಅಡುಗೆ ಸಿಬ್ಬಂದಿಯಲ್ಲಿ ಸಮನ್ವಯತೆ ಇಲ್ಲದಿರುವುದು, ವಸತಿ ಶಾಲೆಯಲ್ಲಿ ಶುಚಿತ್ವ ಇಲ್ಲದಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.
ಘಟನೆ ಹಿನ್ನೆಲೆ
ಚಿಕನ್ ಊಟ ಸೇವಿಸಿದ್ದ ಮಕ್ಕಳಿಗೆ ವಾಂತಿ-ಬೇಧಿಯಾಗಿ ಅಸ್ವಸ್ಥಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ನಡೆದಿತ್ತು. ಈ ವೇಳೆ ಒಟ್ಟು 30 ವಿದ್ಯಾರ್ಥಿಗಳಿಗೆ ವಾಂತಿ-ಬೇಧಿಯಾಗಿದ್ದು, ಈ ಪೈಕಿ ತೀವ್ರ ಅಸ್ವಸ್ಥಗೊಂಡಿದ್ದ 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಡ್ರಿಪ್ ಹಾಕಿ ಚಿಕಿತ್ಸೆ ಕೊಡಿಸಲಾಗಿತ್ತು.
ಭಾನುವಾರ ರಾತ್ರಿ ಚಿಕನ್ ಊಟವನ್ನು ಮಾಡಲಾಗಿತ್ತು. ಅದನ್ನು ತಿಂದ ಬಳಿಕ ವಾಂತಿ-ಬೇಧಿ ಶುರುವಾಗಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಸದ್ಯ, ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ಮಧ್ಯಾಹ್ನದ ಊಟ ಸೇವಿಸಿ ಸೈನಿಕರು ಅಸ್ವಸ್ಥ
ಹಾಗೆಯೇ ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ 35 ಮಂದಿ ಸೈನಿಕರು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು. ಇನ್ನು ಅಸ್ವಸ್ಥರಾಗಿದ್ದ ಸೈನಿಕರಿಗೆ ಸಕಲೇಶಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಚಾಲನಾ ತರಬೇತಿಗೆಂದು ಬಂದಿದ್ದ 35 ಜನ ಸೈನಿಕರು ಕುಡುಗರಹಳ್ಳಿ ಬಳಿ ಕ್ಯಾಂಪ್ನಲ್ಲಿ ಮಧ್ಯಾಹ್ನ ತಯಾರಾದ ಆಹಾರವನ್ನು ಸೇವಿಸಿದ್ದರು. ಊಟ ಮಾಡಿದ ನಂತರ ಸೈನಿಕರು ಅಸ್ವಸ್ಥಗೊಂಡಿದ್ದು, ಆಗ ಎಲ್ಲಾ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯವನ್ನು ವಿಚಾರಿಸಿದ್ದರು.












Click it and Unblock the Notifications