ಮಲೆ ಮಹದೇಶ್ವರ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿ: ಜಿ.ಪಂ. ಸಿಇಒ ಭೇಟಿ
ಚಾಮರಾಜನಗರ, ಜೂ. 1: ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾದ ಕೆ.ಎಂ. ಗಾಯತ್ರಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿ ಪರಿಶೀಲಿಸಿದರು.
ದೊಡ್ಡಕೆರೆ ಕಲ್ಯಾಣಿ ಒಳಚರಂಡಿ ಯೋಜನೆಯ ಸಂಸ್ಕರಣಾ ಘಟಕ, ಜಡೇಕಲ್ಲು ದೇಗುಲದ ಮುಂಭಾಗದ ಪಾರ್ಕಿಂಗ್, ಅಂತರ ಗಂಗೆಯ ಕಲ್ಯಾಣಿ, ಹೆಲಿಪ್ಯಾಡ್ ನ ಸಿಸಿ ರಸ್ತೆ ಕಾಮಗಾರಿ ಪರಿಶೀಲನೆ ಮಾಡಿದರು. ದೀಪಗಿರಿ ಒಡ್ಡುವಿನಲ್ಲಿ ನಿರ್ಮಾಣವಾಗುತ್ತಿರುವ 108 ಅಡಿಯ ಮಹದೇಶ್ವರ ಪ್ರತಿಮೆ ಕಾಮಗಾರಿ ಸೇರಿದಂತೆ ಪ್ರಾಧಿಕಾರದಿಂದ ಕೈಗೊಳ್ಳಲಾಗಿರುವ ಇತರೆ ಅಭಿವೃದ್ಧಿ ಕೆಲಸ ಪರಿಶೀಲಿಸಿದ ಗಾಯತ್ರಿ, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚನೆ
ಮಹದೇಶ್ವರ ಬೆಟ್ಟವು ಪವಿತ್ರ ಸ್ಥಳವಾಗಿದ್ದು, ಪ್ರತಿದಿನ ಸಾವಿರಾರು ಭಕ್ತರು ಭೇಟಿ ನೀಡಲಿರುವುದರಿಂದ ಕಲ್ಯಾಣಿ ಅಂತರಗಂಗೆ ಮತ್ತು ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಭಕ್ತಾಧಿಗಳು ಹಾಗೂ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಜೂನ್ 5 ವಿಶ್ವ ಪರಿಸರ ದಿನವಾಗಿರುವುದರಿಂದ ಅಂದು ಗ್ರಾಮ ಪಂಚಾಯಿತಿ ಮತ್ತು ಪ್ರಾಧಿಕಾರದ ವತಿಯಿಂದ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸುವಂತೆ ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ
ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ನರೇಗಾ, ಸ್ವಚ್ಛ ಭಾರತ್ ಮಿಷನ್ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳ ಕಡತಗಳನ್ನು ಪರಿಶೀಲಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕುಗ್ರಾಮಗಳ ಶಾಲೆಗಳ ವಿವರ, ಮಹಿಳಾ ಸ್ವ ಸಹಾಯ ಸಂಘಗಳ ಅಭಿವೃದ್ಧಿಗೆ ಕೈಗೊಳ್ಳಬೇಕಾಗಿರುವ ಕಾರ್ಯಸೂಚಿಗಳ ಪಟ್ಟಿ ತಯಾರಿಸುವಂತೆ ನಿರ್ದೇಶನ ನೀಡಿದರು.ಮಹದೇಶ್ವರ ಬೆಟ್ಟದ ವ್ಯಾಪ್ತಿಯಲ್ಲಿ ಗಿರಿಜನರು ಹೆಚ್ಚಾಗಿ ವಾಸವಿದ್ದು, ಇವರಿಗೆ ಎನ್.ಆರ್.ಎಲ್.ಎಂ ಯೋಜನೆಯಡಿ ಮಹಿಳಾ ಸ್ವ ಸಹಾಯ ಸಂಘಗಳನ್ನು ರಚಿಸಿ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಒದಗಿಸುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಆಣೆಹೊಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ ಹಾಗೂ ಮೂಲಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು.
(ಒನ್ಇಂಡಿಯಾ ಸುದ್ದಿ)












Click it and Unblock the Notifications