ಬಿಎಸ್ಎಫ್ ಅಧಿಕಾರ ವ್ಯಾಪ್ತಿ ವಿಸ್ತರಣೆ ಬಳಿಕ ಪಂಜಾಬ್ ಗಡಿಯಲ್ಲಿ 7 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ
ನವದೆಹಲಿ. ಅಕ್ಟೋಬರ್ 15: ಕೇಂದ್ರ ಸರ್ಕಾರವು ಪಂಜಾಬ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಅಂತಾರಾಷ್ಟ್ರೀಯ ಗಡಿಗಳಲ್ಲಿ ಬಿಎಸ್ಎಫ್ ಅಧಿಕಾರ ವ್ಯಾಪ್ತಿಯನ್ನು 15 ಕಿ.ಮೀ.ನಿಂದ 50 ಕಿ.ಮೀ.ವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ. ಇದು ಎರಡು ರಾಜ್ಯಗಳ ಸರ್ಕಾರಗಳ ವಿರೋಧಕ್ಕೆ ಕಾರಣವಾಗಿದೆ. ಇದರ ಬಗ್ಗೆ ಈಗ ರಾಜಕೀಯ ಜಟಾಪಟಿ ಕೂಡ ನಡೆಯುತ್ತಿದೆ.
ಇದರ ಮಧ್ಯೆಯೇ ಪಂಜಾಬ್ ಗಡಿಯಲ್ಲಿ ಈಗ ಬಿಎಸ್ಎಫ್ ಮತ್ತು ಪಂಜಾಬ್ ಪೊಲೀಸರ ಜೊತೆಗೆ ಜಂಟಿ ಕಾರ್ಯಾಚರಣೆ ನಡೆಸಿದ್ದು, 7 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದೆ.
ಪಂಜಾಬ್ನಲ್ಲಿ ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿ ವಿಸ್ತರಣೆಗೆ ಸಂಬಂಧಿಸಿದಂತೆ ರಾಜಕೀಯ ಬಿಕ್ಕಟ್ಟು ಎದುರಾಗಿರುವುದರ ಮಧ್ಯೆಯೇ ಬಿಎಸ್ಎಫ್ ಮತ್ತು ಪಂಜಾಬ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕೋಟ್ಯಂತರ ಮೌಲ್ಯದ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ. ಅಂತಾರಾಷ್ಟ್ರೀಯ ಗಡಿಯಿಂದ ಕೆಲವು ಕಿ.ಮೀ ದೂರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ತಪು ಹೊರವಲಯದಲ್ಲಿರುವ ಗಡಿ ಭದ್ರತಾ ಬೇಲಿ ಬಳಿ ಪಂಜಾಬ್ ಪೊಲೀಸರ ಮಾದಕದ್ರವ್ಯ ನಿಯಂತ್ರಣ ಕೋಶದೊಂದಿಗೆ ಜಂಟಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಬಿಎಸ್ಎಫ್ ಅಧಿಕಾರಿಗಳು ಹೇಳಿದ್ದಾರೆ. "ಕಾರ್ಯಾಚರಣೆಯ ಸಮಯದಲ್ಲಿ, ತಂಡವು ಸುಮಾರು 6.6 ಕೆಜಿ ತೂಕದ ಹೆರಾಯಿನ್ ಮತ್ತು 1.13 ಕೆಜಿ ತೂಕದ ಸಕ್ಕರೆಯ ನಾಲ್ಕು ಪ್ಯಾಕೆಟ್ಗಳನ್ನು ವಶಪಡಿಸಿಕೊಂಡಿದೆ" ಎಂದು ಹಿರಿಯ ಬಿಎಸ್ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವರ್ಷ ಜನವರಿಯ ನಂತರ ಇದು ಎರಡನೇ ಯಶಸ್ವಿ ಕಾರ್ಯಾರಣೆ ಎಂದು ಬಿಎಸ್ಎಫ್ ಅಧಿಕಾರಿಗಳು ಹೇಳಿದ್ದಾರೆ. "ಫಿರೋಜ್ಪುರದ ಪ್ರದೇಶದಲ್ಲಿ ಈ ವರ್ಷ ಒಟ್ಟಾರೆ 94.786 ಕೆಜಿ ಹೆರಾಯಿನ್ ಅನ್ನು ಜಫ್ತಿ ಆಗಿದೆ," ಎಂದು ಅಧಿಕಾರಿ ಹೇಳಿದ್ದಾರೆ. ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಅಂತಾರಾಷ್ಟ್ರೀಯ ಗಡಿಯಿಂದ ಈಗಿರುವ 15 ಕಿಮೀಗಳ ಬದಲಾಗಿ, 50 ಕಿಮೀ ವ್ಯಾಪ್ತಿಯಲ್ಲಿ ಶೋಧ, ವಶಪಡಿಸಿಕೊಳ್ಳುವಿಕೆ ಮತ್ತು ಬಂಧನಕ್ಕೆ ಬಿಎಸ್ಎಫ್ಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ಇತ್ತೀಚೆಗೆ ಬಿಎಸ್ಎಫ್ ಕಾಯ್ದೆಗೆ ತಿದ್ದುಪಡಿ ತಂದಿದೆ.
ಈ ನಿರ್ಧಾರವನ್ನು ಪಂಜಾಬ್ನ ಕಾಂಗ್ರೆಸ್ ಸರ್ಕಾರವು ವಿರೋಧಿಸಿದೆ, ಜೊತೆಗೆ ಪಶ್ಚಿಮ ಬಂಗಾಳದ ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಇದು ರಾಜ್ಯದ ಹಕ್ಕುಗಳ ಮೇಲೆ "ಕೇಂದ್ರ ಸರ್ಕಾರದ ದಾಳಿ " ಮತ್ತು ದೇಶದ ಒಕ್ಕೂಟದ ವ್ಯವಸ್ಥೆಯ ಮೇಲಿನ ದಾಳಿ ಎಂದು ಪಂಜಾಬ್ ಹಾಗೂ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳು ಹೇಳಿವೆ.
"ಅಂತಾರಾಷ್ಟ್ರೀಯ ಗಡಿಗಳಿಂದ 50 ಕಿ.ಮೀ ವ್ಯಾಪ್ತಿಯವರೆಗೂ ಬಿಎಸ್ಎಫ್ಗೆ ಹೆಚ್ಚುವರಿ ಅಧಿಕಾರವನ್ನು ನೀಡುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ಬಲವಾಗಿ ಖಂಡಿಸುತ್ತೇವೆ. ಇದು ಒಕ್ಕೂಟ ವ್ಯವಸ್ಥೆಯ ಮೇಲೆ ನಡೆದ ನೇರ ದಾಳಿಯಾಗಿದೆ. ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯುವಂತೆ ನಾನು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಒತ್ತಾಯಿಸುತ್ತೇನೆ,'' ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಟ್ವೀಟ್ ಮಾಡಿದ್ದಾರೆ. ಆದರೆ, ಶೀಘ್ರವೇ ಕಾಂಗ್ರೆಸ್ ತೊರೆಯುವುದಾಗಿ ಘೋಷಿಸಿರುವ ಮಾಜಿ ಸಿಎಂ ಅಮರೀಂದರ್ ಸಿಂಗ್ ಈ ಅವರು ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿದ್ದಾರೆ.
ಪಂಜಾಬ್ನಲ್ಲಿ ಬಿಜೆಪಿಯ ಮಾಜಿ ಮಿತ್ರ ಶಿರೋಮಣಿ ಅಕಾಲಿದಳ ಕೂಡ ತಿದ್ದುಪಡಿಯನ್ನು ವಿರೋಧಿಸಿದೆ. ಎಸ್ಎಡಿ ಅಧ್ಯಕ್ಷ ಸುಖ್ಬೀರ್ ಬಾದಲ್ ಬಿಎಸ್ಎಫ್ನ ಅಧಿಕಾರವಧಿ ವಿಸ್ತರಣೆಯ ಕುರಿತು ಗುರುವಾರ ರಾಜಭವನದ ಹೊರಗೆ ನಡೆದ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸುಖಬೀರ್ ಬಾದಲ್ರನ್ನು ಪೊಲೀಸರು ಬಂಧಿಸಿದ್ದಾರೆ. "ಕೇಂದ್ರದ ಕ್ರಮಕ್ಕೆ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ 'ಸೌಮ್ಯವಾಗಿ ಶರಣಾಗಿದ್ದಾರೆ' ಎಂದು ಬಾದಲ್ ಆರೋಪಿಸಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ಆದೇಶವು ಚುನಾವಣಾ ವಿಷಯವಾಗಲಿದೆ," ಎಂದಿದ್ದಾರೆ.
ಕೇಂದ್ರ ಗೃಹ ಸಚಿವಾಲಯವು ಅಕ್ಟೋಬರ್ 11ರಂದು ಬಿಎಸ್ಎಫ್ನ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಜುಲೈ 2014ರ ನಿಯಮಕ್ಕೆ ತಿದ್ದುಪಡಿ ಮಾಡಿ ಗಡಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಬಿಎಸ್ಎಫ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡಿದೆ.
ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ, ಬಿಎಸ್ಎಫ್ ಈ ಮೊದಲು 15 ಕಿ.ಮೀವರೆಗೆ ಮಾತ್ರ ಡ್ರಗ್ಸ್, ಕಳ್ಳಸಾಗಣೆ ಸೇರಿದಂತೆ ವಿವಿಧ ಅಪರಾಧಗಳ ವಿರುದ್ಧ ಕ್ರಮಕೈಗೊಳ್ಳುವ ಅಧಿಕಾರ ನೀಡಲಾಗಿತ್ತು. ಆದರೆ, ಕೇಸ್ ದಾಖಲಿಸಿದ ಬಳಿಕ ಆ ಕೇಸ್ ಅನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರ ಮಾಡಬೇಕಾಗಿತ್ತು. ಈಗ ಅಂತಾರಾಷ್ಟ್ರೀಯ ಗಡಿಯಿಂದ 50 ಕಿ.ಮೀ ವ್ಯಾಪ್ತಿಯಲ್ಲಿ ಡ್ರಗ್ಸ್, ಕಳ್ಳಸಾಗಣೆ ಸೇರಿದಂತೆ ವಿವಿಧ ಅಪರಾಧಗಳ ವಿರುದ್ಧ ಕ್ರಮಕೈಗೊಳ್ಳುವ ಅಧಿಕಾರವನ್ನು ಬಿಎಸ್ಎಫ್ಗೆ ನೀಡಲಾಗಿದೆ.
ಇದು ಈಗ ಪಂಜಾಬ್, ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿದೆ. ಗುಜರಾತ್ ರಾಜ್ಯವು ಪಾಕಿಸ್ತಾನದೊಂದಿಗೆ ಗಡಿಯನ್ನು ಹಂಚಿಕೊಂಡಿದ್ದು, ಬಿಎಸ್ಎಫ್ ಅಧಿಕಾರ ವ್ಯಾಪ್ತಿಯ ಮಿತಿಯನ್ನು 80 ಕಿ.ಮೀ.ನಿಂದ 50 ಕಿ.ಮೀ.ಗೆ ಇಳಿಸಲಾಗಿದೆ. ಆದರೆ ರಾಜಸ್ಥಾನದಲ್ಲಿ ಮಿತಿಯನ್ನು 50 ಕಿ.ಮೀ ಆಗಿ ಬದಲಾಯಿಸಲಾಗಿದೆ. ರಾಜಸ್ಥಾನ ಮತ್ತು ಪಂಜಾಬ್ ಕೂಡ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿವೆ. ಅಸ್ಸಾಂ ಬಾಂಗ್ಲಾದೇಶದೊಂದಿಗೆ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿದೆ.
"ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗೆ 6,300 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸುಮಾರು 2.65 ಲಕ್ಷ ಬಿಎಸ್ಎಫ್ ಅರೆಸೇನಾ ಪಡೆ ಕಾವಲು ಕಾಯುತ್ತಿದ್ದಾರೆ. ಬಿಎಸ್ಎಫ್ ಅಧಿಕಾರಿಗಳು ಹೇಳುವ ಪ್ರಕಾರ, ಈ ತಿದ್ದುಪಡಿಯು ಗಡಿಯಾಚೆಗಿನ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಯಲು ಸಹಾಯ ಮಾಡುತ್ತದೆ ಮತ್ತು ಹೊಸ ತಿದ್ದುಪಡಿಯು ಪಂಜಾಬ್, ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ಥಾನ ಮತ್ತು ಅಸ್ಸಾಂನ ಗಡಿ ರಾಜ್ಯಗಳಲ್ಲಿ ತನ್ನ ಕಾರ್ಯಾಚರಣೆಗೆ 'ಏಕರೂಪತೆಯನ್ನು' ತರುತ್ತದೆ. ಅಲ್ಲಿ ಬಿಎಸ್ಎಫ್ ಈಗ 50 ಕಿ.ಮೀ ಒಳಗೆ ಕಾರ್ಯನಿರ್ವಹಿಸಬಹುದು," ಎಂದು ಹೇಳಿದ್ದಾರೆ.
ಆದರೆ, ಬಿಎಸ್ಎಫ್ ಅಧಿಕಾರಿಗಳೇ ಪ್ರಕರಣದ ತನಿಖೆ ನಡೆಸಿ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲ್ಲ. ಪ್ರಕರಣ ದಾಖಲಾದ ಬಳಿಕ ಪ್ರಕರಣವನ್ನು ಸ್ಥಳೀಯ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುತ್ತದೆ ಎಂದು ಬಿಎಸ್ಎಫ್ ಅಧಿಕಾರಿಗಳು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications