ಪಂಜಾಬ್ ಚುನಾವಣೆ: ಸೀಟು ಹಂಚಿಕೆ ಬಗ್ಗೆ ಅಮಿತ್ ಶಾ ಜೊತೆ ಕ್ಯಾಪ್ಟನ್ ಚರ್ಚೆ
ಚಂಡೀಘರ್, ಡಿಸೆಂಬರ್ 27: ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷ ಮತ್ತು ಪಂಜಾಬ್ ಲೋಕ ಕಾಂಗ್ರೆಸ್(PLC) ಪಕ್ಷದ ನಡುವೆ ಸೀಟು ಹಂಚಿಕೆ ಕುರಿತು ಚರ್ಚೆ ಜೋರಾಗಿದೆ.
ಪಿಎಲ್ ಸಿ ಮುಖ್ಯಸ್ಥ ಹಾಗೂ ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಥಾನ ಹಂಚಿಕೆ ಬಗ್ಗೆ ಚರ್ಚೆ ನಡೆಸಿದರು. ನವದೆಹಲಿ ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ, ಪಂಜಾಬ್ ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್ ಶೇಖಾವತ್ ಉಪಸ್ಥಿತರಿದ್ದರು.
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಪಂಜಾಬ್ ಲೋಕ ಕಾಂಗ್ರೆಸ್ ಮತ್ತು ಬಿಜೆಪಿ ಜೊತೆಗೆ ಮೈತ್ರಿ ಘೋಷಿಸಿದ ಒಂದೇ ವಾರದಲ್ಲಿ ಈ ರಾಜಕೀಯ ಬೆಳವಣಿಗೆ ನಡೆಯುತ್ತಿವೆ. ಎರಡು ಪಕ್ಷಗಳ ನಡುವೆ ಸೀಟು ಹಂಚಿಕೆ ಕುರಿತು ಮಾತುಕತೆ ಶುರುವಾಗಿದೆ.

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ರಚಿಸಿಕೊಂಡಿರುವ ಬಿಜೆಪಿ ಹೆಚ್ಚು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ತಿಳಿದು ಬಂದಿದೆ. ಮೈತ್ರಿಕೂಟದಲ್ಲಿ 117 ಕ್ಷೇತ್ರಗಳ ಪೈಕಿ ಬಿಜೆಪಿಯೇ 70ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿಸ್ಪರ್ಧಿಸಲಿದೆ. ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷಕ್ಕೆ 30 ರಿಂದ 35 ಕ್ಷೇತ್ರಗಳನ್ನು ಬಿಟ್ಟುಕೊಡಲಾಗುತ್ತಿದ್ದು, ದಿಂಡಾ ಒಕ್ಕೂಟಕ್ಕೆ 10 ರಿಂದ 15 ಕ್ಷೇತ್ರಗಳನ್ನು ನೀಡುವ ಸಾಧ್ಯತೆಗಳಿವೆ. ಪಂಜಾಬ್ನಲ್ಲಿ ಜನವರಿ ಮೊದಲ ವಾರದಲ್ಲಿ ಚುನಾವಣಾ ಮೆರವಣಿಗೆ ಮೂಲಕ ಪ್ರಧಾನಿ ಮೋದಿ ಮೈತ್ರಿ ಪ್ರಚಾರಕ್ಕೆ ಚಾಲನೆ ನೀಡುವ ಸಾಧ್ಯತೆಯಿದೆ.
ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಕ್ಯಾಪ್ಟನ್ ಉಲ್ಲೇಖ:
ಪಂಜಾಬ್ ಕಾಂಗ್ರೆಸ್ ಜೊತೆಗಿನ ಭಿನ್ನಾಭಿಪ್ರಾಯದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕ್ಯಾಪ್ಟನ್ ಅಮರೀಂದರ್ ಸಿಂಗ್, ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ರಚಿಸಿದರು. ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದನ್ನು ಖಚಿತಪಡಿಸಿದ್ದ ಕ್ಯಾಪ್ಟನ್ ಸಿಂಗ್, ಸೀಟು ಹಂಚಿಕೆಯೊಂದೇ ಬಾಕಿ ಉಳಿದಿದೆ ಎಂದು ಹೇಳಿದ್ದರು. "ಯಾರು ಎಲ್ಲಿ ಸ್ಪರ್ಧಿಸುತ್ತಾರೆ ಎಂಬುದನ್ನು ಕಾದು ನೋಡುತ್ತೇವೆ, ಸೀಟು ಆಯ್ಕೆ ಪ್ರಕ್ರಿಯೆಯು ನಮ್ಮ ಮಾನದಂಡದ ಪ್ರಕಾರ ನಡೆಯುತ್ತದೆ ಎಂಬ ವಿಶ್ವಾಸವಿದೆ," ಎಂದು ಸಿಂಗ್ ಹೇಳಿದ್ದರು.
ಮೈತ್ರಿಪಕ್ಷದ ಗೆಲುವು ನಿಶ್ಚಿತ:
"ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿಪಕ್ಷವು ಗೆಲುವು ಸಾಧಿಸುವುದು 101ರಷ್ಟು ನಿಶ್ಚಿತವಾಗಿದೆ. ಇದನ್ನು ನೀವು ಬರೆದಿಟ್ಟುಕೊಳ್ಳಿ," ಎಂದು ಸಿಂಗ್ ಹೇಳಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯನ್ನು ಬಿಜೆಪಿ ಮತ್ತು ಪಂಜಾಬ್ ಲೋಕ ಕಾಂಗ್ರೆಸ್ ಒಟ್ಟಾಗಿ ಎದುರಿಸಲಿದೆ ಎಂಬುದನ್ನು ಖಚಿತಪಡಿಸುತ್ತೇನೆ. ಈ ಮೈತ್ರಿ ಮಾತುಕತೆಗೂ ಪೂರ್ವದಲ್ಲಿ ಏಳು ಸುತ್ತಿನ ಚರ್ಚೆ ನಡೆಸಲಾಗುತ್ತು. ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮುಂದೆ ಹಲವು ವಿಷಯಗಳ ಬಗ್ಗೆ ಮತ್ತಷ್ಟು ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್ ಸ್ಪಷ್ಟಪಡಿಸಿದ್ದಾರೆ.












Click it and Unblock the Notifications