Breaking: ಗಣಿಗಾರಿಕೆ ತಡೆಯಲು ಹೋದ ಪೊಲೀಸ್ ಅಧಿಕಾರಿ ಮೇಲೆ ಹರಿದ ಲಾರಿ
ಚಂಡೀಗಢ್, ಜುಲೈ 19: ಹರ್ಯಾಣದ ನುಹ್ನಲ್ಲಿ ಅಕ್ರಮ ಗಣಿಗಾರಿಕೆ ಮಾಫಿಯಾವನ್ನು ತಡೆಯಲು ಹೋದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಆರೋಪಿಗಳು ಲಾರಿ ಹರಿಸಿ ಕೊಲೆ ಮಾಡಿರುವ ದುರಂತ ಘಟನೆ ನಡೆದಿದೆ.
ಮೃತ ಡಿಎಸ್ಪಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರು ಅರಾವಳಿ ಪರ್ವತ ಶ್ರೇಣಿಯ ಸಮೀಪದ ಪಚಗಾಂವ್ನಲ್ಲಿ ಅಕ್ರಮವಾಗಿ ಕಲ್ಲುಗಳನ್ನು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ಸ್ಥಳಕ್ಕೆ ಭೇಟಿ ನೀಡಿದ್ದರು.
ಪರಿಸರ ಸೂಕ್ಷ್ಮ ಪ್ರದೇಶದ ಕರಡು ಅಧಿಸೂಚನೆ; ಶಾಸಕರ ವಿರೋಧ
ಪೊಲೀಸ್ ಸಿಬ್ಬಂದಿಯನ್ನು ಕಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಲು ಆರಂಭಿಸಿದರು. ಹಿರಿಯ ಅಧಿಕಾರಿ ಆರೋಪಿಗಳ ದಾರಿಯಲ್ಲಿ ಅಡ್ಡ ನಿಂತು ಕಲ್ಲು ತುಂಬಿದ ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಲಾರಿ ಚಾಲಕ ಅಧಿಕಾರಿ ಮೇಲೆಯೇ ಲಾರಿ ಹರಿಸಿದ್ದಾನೆ.
ನಂತರ ಆರೋಪಿಗಳು ಪ್ರದೇಶದಿಂದ ಪರಾರಿಯಾಗಿದ್ದಾರೆ. ಇದೀಗ ಅವರನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಭೀಕರ ಘಟನೆ ಬಗ್ಗೆ ಮಾಹಿತಿ ಪಡೆದ ನುಹ್ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.
2009ರ ಸುಪ್ರಿಂಕೋರ್ಟ್ ಆದೇಶದ ಹೊರತಾಗಿಯೂ, ಅರಾವಳಿ ಪ್ರದೇಶದ ಹಲವಾರು ಸ್ಥಳಗಳಲ್ಲಿ ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ಮುಂದುವರೆದಿದೆ. 'ಅರಾವಳಿ ಬಚಾವೋ ಸಿಟಿಜನ್ಸ್ ಮೂವ್ಮೆಂಟ್' ಹೆಸರಿನ ನಾಗರಿಕರ ಗುಂಪು ಈ ವರ್ಷದ ಆರಂಭದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯನ್ನು ಸಂಪರ್ಕಿಸಿತು. ಈ ಪ್ರದೇಶದಲ್ಲಿ ಕನಿಷ್ಠ 16 ಸ್ಥಳಗಳಲ್ಲಿ ಅಕ್ರಮ ಗಣಿಗಾರಿಕೆ ವ್ಯಾಪಿಸಿದೆ ಎಂದು ಆರೋಪಿಸಿದ್ದರು.
ಅಕ್ರಮ ಗಣಿಗಾರಿಕೆಯ ಹಲವು ದೂರುಗಳ ಬಗ್ಗೆ ಪೊಲೀಸರು ನಿಷ್ಕ್ರಿಯರಾಗಿದ್ದಾರೆ ಎಂದು ಆರೋಪಿಸಿದ್ದರು.
ಬಳಿಕ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು, ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು, ರಾಜ್ಯ ಪೊಲೀಸ್, ಗಣಿಗಾರಿಕೆ ಮತ್ತು ಅರಣ್ಯ ಅಧಿಕಾರಿಗಳ ಪ್ರತಿನಿಧಿಗಳ ಜಂಟಿ ಸಮಿತಿಯನ್ನು ರಚಿಸಿತು. ಅಕ್ರಮ ಗಣಿಗಾರಿಕೆ ನಡೆಯುತ್ತಿದೆಯೇ ಎಂದು ಪರಿಶೀಲಿಸಲು ಈ ಸಮಿತಿಯು ಗುರುತಿಸಲಾದ ಸ್ಥಳಗಳಿಗೆ ಭೇಟಿ ನೀಡಲಿದೆ ಎಂದು ನ್ಯಾಯಪೀಠ ತಿಳಿಸಿತ್ತು.