ಪುಲ್ವಾಮಾ ದಾಳಿ: ಬೆದರಿದ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಪಂಜಾಬ್ ರಕ್ಷಣೆ
ಚಂಡೀಗಢ, ಫೆಬ್ರವರಿ 22: ಪುಲ್ವಾಮಾ ಉಗ್ರರ ದಾಳಿಯ ಬಳಿಕ ಬೆದರಿಕೆಗಳು ಬಂದ ಹಿನ್ನೆಲೆಯಲ್ಲಿ ಸುಮಾರು 300 ಕಾಶ್ಮೀರಿ ವಿದ್ಯಾರ್ಥಗಳು ಉತ್ತರಾಖಂಡ, ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳಿಂದ ಪಂಜಾಬ್ನತ್ತ ರಕ್ಷಣೆಗಾಗಿ ಧಾವಿಸುತ್ತಿದ್ದಾರೆ.
ಇನ್ನೊಂದೆಡೆ ದೇಶದ ಅನೇಕ ಕಡೆ ಹಲ್ಲೆಯ ಭೀತಿ ಎದುರಿಸಿರುವ ಕಾಶ್ಮೀರಿ ವಿದ್ಯಾರ್ಥಿಗಳಿಗೆ ರಕ್ಷಣೆ ಒದಗಿಸಲು ಸರ್ಕಾರಗಳಿಗೆ ಸೂಚಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಿಚಾರಣೆ ನಡೆಸಲಿದೆ.
'ಕಾಶ್ಮೀರಿ ವಿದ್ಯಾರ್ಥಿಗಳು ಪಂಜಾಬ್ಅನ್ನು ಸುರಕ್ಷಿತ ಸ್ಥಳವೆಂದು ಪರಿಗಣಿಸಿದ್ದಾರೆ. ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಈಗಾಗಲೇ 7,000-8000 ಕಾಶ್ಮೀರಿ ವಿದ್ಯಾರ್ಥಿಗಳಿದ್ದಾರೆ. ಡೆಹರಾಡೂನ್ನಲ್ಲಿ ಬೆದರಿಕೆಗಳು ಬಂದಿದ್ದರಿಂದ ಭಯಗೊಂಡ ವಿದ್ಯಾರ್ಥಿಗಳು ರೂಮುಗಳನ್ನು ತೊರೆದು ಮೊಹಾಲಿಗೆ ಧಾವಿಸಿದ್ದಾರೆ. ಅವರಿಗೆ ವಿವಿಧೆಡೆ ಆಶ್ರಯ ಕಲ್ಪಿಸಲಾಗುತ್ತಿದೆ' ಎಂದು ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಸಂಘಟನೆಯ ಅಧ್ಯಕ್ಷ ಖವಾಜಾ ಇತ್ರತ್ ತಿಳಿಸಿದ್ದಾರೆ.

ರಾಜ್ಯಕ್ಕೆ ಬರುವ ಎಲ್ಲ ಕಾಶ್ಮೀರಿ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಗಳಿಗೂ ಪುಲ್ವಾಮಾ ದಾಳಿಗೂ ಸಂಬಂಧವಿಲ್ಲ. ಅವರೆಲ್ಲರಿಗೂ ಸಂಪೂರ್ಣ ಭದ್ರತೆ ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಡೆಹರಾಡೂನ್ನಲ್ಲಿ ಸುಮಾರು 12 ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ಕಾಶ್ಮೀರಿಗಳ ವಿರುದ್ಧ ಪ್ರತಿಭಟನಾ ಮೆರವಣಿಗೆಗಳು ನಡೆದಿವೆ. ಕೆಲವು ಅಂಗಡಿಗಳಲ್ಲಿ ಕಾಶ್ಮೀರಿಗಳನ್ನು ಅವಾಚ್ಯವಾಗಿ ನಿಂದಿಸಲಾಗಿದೆ. ಮನೆ ಖಾಲಿ ಮಾಡಿ ಎಂದು ಮಾಲೀಕರು ಸೂಚಿಸಿದ್ದಾರೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ಅರ್ಜಿ
ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ರಾಜ್ಯಗಳಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಪಿಐಎಲ್ಅನ್ನು ಸುಪ್ರೀಂಕೋರ್ಟ್ ಶುಕ್ರವಾರ ವಿಚಾರಣೆಗೆ ತೆಗೆದುಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿಗಳಾದ ಎಲ್ ಎನ್ ರಾವ್ ಹಾಗೂ ಸಂಜೀವ್ ಖನ್ನಾ ಅವರನ್ನು ಒಳಗೊಂಡ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.
ವಕೀಲ ತಾರೀಖ್ ಅದೀಬ್ ಎಂಬುವವರು ಅರ್ಜಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯಲು ಕೂಡಲೇ ಸರ್ಕಾರಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದ್ದಾರೆ.












Click it and Unblock the Notifications