ಪಂಜಾಬ್; ನಕಲಿ ಮದ್ಯ ಪ್ರಕರಣ, 13 ಅಧಿಕಾರಿಗಳ ಅಮಾನತು
ಚಂಡೀಗಢ್, ಆಗಸ್ಟ್ 02: ಪಂಜಾಬ್ನಲ್ಲಿ ನಕಲಿ ಮದ್ಯ ಸೇವಿಸಿ 86 ಜನರು ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು. ಈಗಾಲೇ ಪಂಜಾಬ್ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ನೀಡಿದೆ.
ನಕಲಿ ವಿಷಕಾರಿ ಮದ್ಯ ಸೇವಿಸಿ ಇದುವರೆಗೂ ರಾಜ್ಯದಲ್ಲಿ 86 ಜನರು ಮೃತಪಟ್ಟಿದ್ದಾರೆ. 6 ಪೊಲೀಸರು ಮತ್ತು 7 ಅಬಕಾರಿ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಘಟನೆ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ.

ಶಿರೋಮಣಿ ಅಕಾಲಿ ದಳದ ಸುಖ್ಬೀರ್ ಸಿಂಗ್ ಬಾದಲ್, "ಈ ಘಟನೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮತ್ತು ಅವರ ಶಾಸಕರು ಕಾರಣ. ಕಾಂಗ್ರೆಸ್ ನಾಯಕರು ಸಹ ಅಕ್ರಮ ಮದ್ಯ ಮಾರಾಟದಲ್ಲಿ ಭಾಗಿಯಾಗಿದ್ದಾರೆ" ಎಂದು ಗಂಭೀರ ಆರೋಪ ಮಾಡಿದ್ದಾರೆ.
"ಈ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ರದ್ದುಪಡಿಸಬೇಕು. ಘಟನೆಯ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರು ಸ್ವತಂತ್ರ ತನಿಖೆ ಮಾಡಬೇಕು" ಎಂದು ಸುಖ್ಬೀರ್ ಸಿಂಗ್ ಒತ್ತಾಯಿಸಿದ್ದಾರೆ.
ಬುಧವಾರ ಸಂಜೆಯಿಂದ ನಕಲಿ ಮದ್ಯ ಸೇವಿಸಿ ಪಂಜಾಬ್ನ ವಿವಿಧ ಜಿಲ್ಲೆಗಳಲ್ಲಿ ಹಲವು ಜನರು ಮೃತಪಟ್ಟಿದ್ದಾರೆ. ತಾರ್ನ್ ತರಣ್ ಜಿಲ್ಲೆಯಲ್ಲಿ 63 ಜನರು, ಅಮೃತಸರದಲ್ಲಿ 12, ಗುರುದಾಸ್ಪುರದಲ್ಲಿ 11 ಜನರು ಸಾವನ್ನಪ್ಪಿದ್ದಾರೆ.
ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯನ್ ತನಿಖೆಗೆ ಆದೇಶ ನೀಡಿದ್ದಾರೆ. ಅರವಿಂದ ಕೇಜ್ರಿವಾಲ್ ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.












Click it and Unblock the Notifications