ಸಿಧುಗೆ ಟ್ವೀಟ್ನಲ್ಲಿ ತಿರುಗೇಟು ಕೊಟ್ಟ ಅಮರಿಂದರ್ ಸಿಂಗ್!
ಚಂಡೀಗಢ್, ಸೆಪ್ಟೆಂಬರ್ 28: ಪಂಜಾಬ್ ಕಾಂಗ್ರೆಸ್ನಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನವಜೋತ್ ಸಿಂಗ್ ಸಿಧುಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಮಂಗಳವಾರ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಅತ್ತ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿಗೆ ತೆರಳಿದ್ದಾರೆ.
ನವಜೋತ್ ಸಿಂಗ್ ಸಿಧು ರಾಜೀನಾಮೆ ಕುರಿತು ಟ್ವೀಟ್ ಮಾಡಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್, 'ನಾನು ನಿಮಗೆ ಹೇಳಿದ್ದೆ. ಪಂಬಾಜ್ನಂತಹ ಗಡಿ ರಾಜ್ಯಕ್ಕೆ ಅವರು ತಕ್ಕ ವ್ಯಕ್ತಿಯಲ್ಲ' ಎಂದು ನವಜೋತ್ ಸಿಂಗ್ ಸಿಧುಗೆ ತಿರುಗೇಟು ನೀಡಿದ್ದಾರೆ.

ನವಜೋತ್ ಸಿಂಗ್ ಸಿಧು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮಂಗಳವಾರ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಮುಂದುವರೆಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
I told you so…he is not a stable man and not fit for the border state of punjab.
— Capt.Amarinder Singh (@capt_amarinder) September 28, 2021
ಹಲವು ವಿಚಾರದಲ್ಲಿ ರಾಜಿಯಾಗಿದ್ದು, ಇದೇ ಕಾರಣಕ್ಕೆ ವ್ಯಕ್ತಿತ್ವದಲ್ಲಿ ಕುಸಿತ ಉಂಟಾಗುತ್ತಿದೆ. ಪಂಜಾಬ್ ರಾಜ್ಯದ ಭವಿಷ್ಯ ಮತ್ತು ಪಂಜಾಬ್ನ ಕಲ್ಯಾಣದಲ್ಲಿ ಯಾವುದೇ ಕಾರಣಕ್ಕೂ ರಾಜಿ ಯಾಗುವುದಿಲ್ಲ ಎಂದು ರಾಜೀನಾಮೆ ಪತ್ರದಲ್ಲಿ ನವಜೋತ್ ಸಿಂಗ್ ಸಿಧು ಉಲ್ಲೇಖಿಸಿದ್ದಾರೆ.
ಜುಲೈನಲ್ಲಿ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾಗಿ ನವಜೋತ್ ಸಿಂಗ್ ಸಿಧು ಅಧಿಕಾರವಹಿಸಿಕೊಂಡಿದ್ದರು. ಬಳಿಕ ಮುಖ್ಯಮಂತ್ರಿಯಾಗಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಜೊತೆ ಅಸಮಾಧಾನ ಉಂಟಾಗಿತ್ತು. ಈಗ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ ನೀಡಿದ್ದಾರೆ.
ಪಂಜಾಬ್ ಕಾಂಗ್ರೆಸ್ನಲ್ಲಿನ ಬೆಳವಣಿಗೆ ಹೈಕಮಾಂಡ್ ನಾಯಕರಿಗೆ ತಲೆ ನೋವು ತಂದಿತ್ತು. ಕಳೆದ ವಾರ ವರಿಷ್ಠರು ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ಪಡೆದಿದ್ದರು. ಪಂಜಾಬ್ನ 16ನೇ ಮುಖ್ಯಮಂತ್ರಿಯಾಗಿ ಚರಣ್ಜಿತ್ ಸಿಂಗ್ ಚನ್ನಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.
ಬಳಿಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕಾಂಗ್ರೆಸ್ ತೊರೆದಿದ್ದರು. ಮಂಗಳವಾರ ಅವರು ಅಮಿತ್ ಶಾ, ಜೆ. ಪಿ. ನಡ್ಡಾ ಭೇಟಿಗೆ ತೆರಳಿದ್ದಾರೆ. ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಬಲವಾಗಿ ಹಬ್ಬಿವೆ. ಇತ್ತ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಸಿಧು ತೊರೆದಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಚರಣ್ಜಿತ್ ಸಿಂಗ್ ಚನ್ನಿ ಸೆಪ್ಟೆಂಬರ್ 26ರಂದು ಸಂಪುಟ ವಿಸ್ತರಣೆ ಮಾಡಿದ್ದರು. ಸುಖ್ಜಿಂದರ್ ಸಿಂಗ್ ರಂಧಾವ, ಒ. ಪಿ. ಸೋನಿ ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾರೆ.
ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ ಇಬ್ಬರು ನಾಯಕರಿಗೆ ಉಪ ಮುಖ್ಯಮಂತ್ರಿ ಪಟ್ಟ ನೀಡಲಾಗಿತ್ತು. ಆದರೆ ಕೆಲವು ಸಚಿವರನ್ನು ಕೈ ಬಿಡಲಾಗಿತ್ತು. ಇದು ಪಕ್ಷದಲ್ಲಿನ ಅಸಮಾಧಾನಕ್ಕೆ ಸಹ ಕಾರಣವಾಗಿತ್ತು.
ಪತ್ರಿಕಾಗೋಷ್ಠಿ ನಡೆಸಿದ್ದ ಬಲ್ಬೀರ್ ಸಿಂಗ್ ಸಿಧು ಹಾಗೂ ಗುರುಪ್ರೀತ್ ಸಿಂಗ್ ಕಾಂಗರ್ ತಮ್ಮನ್ನು ಸಂಪುಟದಿಂದ ಕೈ ಬಿಟ್ಟಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು. ಆರು ಬಾರಿ ಶಾಸಕರಾಗಿರುವ ರಾಕೇಶ್ ಪಾಂಡೆ ಸಹ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಅಲ್ಲದೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ರಾಣಾ ಗುರ್ಜಿತ್ ಸಿಂಗ್ರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವುದಕ್ಕೆ ಹಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಒಂದು ಸ್ಥಿತಿಗೆ ಬಂದಿತು ಎನ್ನುವಾಗಲೇ ನವಜೋತ್ ಸಿಂಗ್ ಸಿಧು ರಾಜೀನಾಮೆ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ.
2022ರಲ್ಲಿ ಪಂಜಾಬ್ ರಾಜ್ಯದ ವಿಧಾನಸಭೆ ಚುನಾವಣೆ ನಡೆಯಲಿದೆ. ಅಧಿಕಾರದಲ್ಲಿರುವ ರಾಜ್ಯವನ್ನು ಉಳಿಸಿಕೊಳ್ಳುವ ಬಹುದೊಡ್ಡ ಸವಾಲು ಕಾಂಗ್ರೆಸ್ ಪಕ್ಷದ ಮುಂದಿದೆ. ಆದರೆ ಅದಕ್ಕೂ ಮೊದಲು ರಾಜ್ಯ ಕಾಂಗ್ರೆಸ್ನಲ್ಲಿನ ಬಿಕ್ಕಟ್ಟು ಬಗೆಹರಿಯಬೇಕಿದೆ.












Click it and Unblock the Notifications