ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ವೇಳೆ ಕೇಂದ್ರ ಸಚಿವೆ ಬಂಧನ
ಚಂಡೀಘರ್, ಅಕ್ಟೋಬರ್.01: ಕೃಷಿ ಸಂಬಂಧಿತ ಕಾಯ್ದೆ ವಿರುದ್ಧ ಗುರುವಾರ ರಾತ್ರಿ ಚಂಡೀಘರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೇಂದ್ರದ ಮಾಜಿ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
"ಕೇಂದ್ರ ಸರ್ಕಾರದ ವಿರುದ್ಧ ಹಾಗೂ ರೈತರ ಪರ ಧ್ವನಿ ಎತ್ತಿದ್ದಕ್ಕೆ ಪೊಲೀಸರು ನನ್ನನ್ನು ಬಂಧಿಸಿದ್ದಾರೆ. ಆದರೆ ಇದರಿಂದ ನಮ್ಮ ಹೋರಾಟವನ್ನು ನಿಲ್ಲಿಸುವುದಕ್ಕೆ ಸಾಧ್ಯವಿಲ್ಲ" ಎಂದು ಮಾಜಿ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್ ಟ್ವೀಟ್ ಮಾಡಿದ್ದಾರೆ.
"ಪಂಜಾಬ್ ನಲ್ಲಿ ಒಂದೇ ಒಂದು ರೈಲ್ವೆ ಸಂಚಾರಕ್ಕೂ ಬಿಡುವುದಿಲ್ಲ"
"ದೇಶದಲ್ಲಿ ರೈತರ ಹಕ್ಕುಗಳ ಬಗ್ಗೆ ಮಾತನಾಡಿದ್ದಕ್ಕಾಗಿ ನಾವು ಬಂಧಿಸಲ್ಪಟ್ಟಿದ್ದೇವೆ. ಹೀಗಿದ್ದರೂ ಸತ್ಯದ ಪರವಾದ ನಮ್ಮ ಹೋರಾಟವನ್ನು ತಡೆಯುವುದಕ್ಕೆ ಆಗುವುದಿಲ್ಲ. ಒತ್ತಡ ನೀತಿಯ ಮೂಲಕ ನಮ್ಮ ಪ್ರತಿಭಟನೆ ಹತ್ತಿಕ್ಕಲು ಸಾಧ್ಯವಿಲ್ಲ" ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಪಂಜಾಬ್ ನಲ್ಲಿ ಶಿರೋಮಣಿ ಅಕಾಲಿ ದಳ ಹೋರಾಟ:
ಕೃಷಿ ಸಂಬಂಧಿತ ಕಾಯ್ದೆಯನ್ನು ವಿರೋಧಿಸಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(NDA)ದಿಂದ ಹೊರ ಬಂದಿರುವ ಶಿರೋಮಣಿ ಅಕಾಲಿ ದಳವು ಕೇಂದ್ರ ಸರ್ಕಾರದ ವಿರುದ್ಧ ಹೋರಾಟವನ್ನು ಮುಂದುವರಿಸಿದೆ. ಪಂಜಾಬ್ ನಾದ್ಯಂತ ವಿವಿಧ ರೈತ ಪರ ಸಂಘಟನೆಗಳು ಪ್ರತಿಭಟನೆ ಮತ್ತು ರೈಲ್ ರೋಖೋ ಚಳುವಳಿಗಳನ್ನು ನಡೆಸುತ್ತಿವೆ. ಇದರ ನಡುವೆ ಅಮೃತಸರ್ ನಿಂದ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಬಾದಲ್ ಮತ್ತು ಬತಿಂದಾ ಪ್ರದೇಶದಿಂದ ಕೇಂದ್ರದ ಮಾಜಿ ಸಚಿವ ಹರ್ ಸಿಮ್ರತ್ ಕೌರ್ ಬಾದಲ್ ಪ್ರತಿಭಟನೆ ನಡೆಸಿಕೊಂಡು ಬರುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಮಾಜಿ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್ ರನ್ನು ಬಂಧಿಸಿದ್ದಾರೆ.
ಫಿಲೌರ್ ನಲ್ಲಿ ರೈಲ್ ರೋಖೋ ಚಳುವಳಿ:
ಪಂಜಾಬ್ ಜಲಂಧರ್ ನಲ್ಲಿರುವ ಫಿಲೌರ್ ನಲ್ಲಿ ರೈಲ್ ರೋಖೋ ಚಳುವಳಿಯನ್ನು ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಕೃಷಿ ಸಂಬಂಧಿತ ಮಸೂದೆಗಳನ್ನು ವಾಪಸ್ ಪಡೆದುಕೊಳ್ಳುವವರೆಗೂ ರೈತರ ಹೋರಾಟ ಮುಂದುವರಿಯಲಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ಅಮ್ರೀಕ್ ಸಿಂಗ್ ಹೇಳಿದ್ದಾರೆ. "ಕೇಂದ್ರ ಸರ್ಕಾರಕ್ಕೆ ನಾವು ಎಚ್ಚರಿಕೆ ಸಂದೇಶವನ್ನು ರವಾನಿಸುತ್ತಿದ್ದೇವೆ. ಕೃಷಿ ಮಸೂದೆಗಳನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಪಂಜಾಬ್ ಪ್ರಜೆಗಳು ಅವರಿಗೆ ಮತವನ್ನೇ ಹಾಕುವುದಿಲ್ಲ. ರೈತ ವಿರೋಧಿ ಕಾಯ್ದೆ ವಾಪಸ್ ತೆಗೆದುಕೊಳ್ಳುವವರೆಗೂ ನಾವು ಹೋರಾಟ ನಡೆಸುತ್ತಲೇ ಇರುತ್ತೇವೆ" ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ಅಮ್ರೀಕ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ರೈತರ ವಿರೋಧಕ್ಕೆ ಕಾರಣವಾಗಿರುವ ಕಾಯ್ದೆಗಳು:
ಸಂಸತ್ ನಲ್ಲಿ ತೀವ್ರ ಸದ್ದು ಗದ್ದಲಕ್ಕೆ ಕಾರಣವಾದ ಕೃಷಿ ಸಂಬಂಧಿತ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳೆದ ಸಪ್ಟೆಂಬರ್.27ರಂದು ಅನುಮೋದನೆ ನೀಡಿದ್ದರು. ಇದರಿಂದ ಮೂರು ಮಸೂದೆಗಳು ಇದೀಗ ಕಾಯ್ದೆಗಳಾಗಿ ಬದಲಾಗಿವೆ. ಈ ಮೂರು ಕೃಷಿ ಸಂಬಂಧಿತ ಕಾಯ್ದೆಗಳು ಯಾವುವು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
1. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ
2. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ
3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ