ಕೃಷಿ ಕಾಯ್ದೆ ವಿರುದ್ಧ ಹೋರಾಡಿದ ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಪಂಜಾಬ್ ಸಿಎಂ ಆದೇಶ
ನವದೆಹಲಿ, ಅಕ್ಟೋಬರ್ 2: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈಲ್ವೇ ಹಳಿಗಳ ಮೇಲೆ ಧರಣಿ ಕುಳಿತ ರೈತ ಸಂಘಟನೆಗಳ ಸದಸ್ಯರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಆದೇಶಿಸಿ ರೈಲ್ವೆ ಭದ್ರತಾ ಪಡೆಗೆ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಪತ್ರ ಬರೆದಿದ್ದಾರೆ.
ರೈಲ್ವೆ ಭದ್ರತಾ ಪಡೆಯ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ತಕ್ಷಣ ಆದೇಶವನ್ನು ಪಾಲಿಸಬೇಕು. ಪ್ರತಿಭಟನಾ ನಿರತ ರೈತರ ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಚರಣ್ಜಿತ್ ನಿರ್ದೇಶನ ನೀಡಿದ್ದಾರೆ.
ಪ್ರಧಾನಿ ಎದುರು ಕೃಷಿ ಕಾಯ್ದೆ ರದ್ದು ಸೇರಿ 3 ಬೇಡಿಕೆಯಿಟ್ಟ ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್
ನವದೆಹಲಿಯಲ್ಲಿ ಶುಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪಂಜಾಬ್ ನೂತನ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಭೇಟಿಯಾದ ಮರುದಿನವೇ ಈ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ. ನಿನ್ನೆಯ ಪ್ರಧಾನಿ ಭೇಟಿ ಬಳಿಕ ಮಾತನಾಡಿದ್ದ ಸಿಎಂ ಚನ್ನಿ, ವಿವಾದಿತ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿರುವ ಬಗ್ಗೆ ಹೇಳಿದ್ದರು.
ವಿವಾದಿತ ಕೃಷಿ ಕಾಯ್ದೆ ವಾಪಸ್ ಪಡೆಯಲು ಮನವಿ
ಪ್ರಧಾನಿ ಭೇಟಿ ಸಂದರ್ಭದಲ್ಲಿ ಮೂರು ಬೇಡಿಕೆಗಳನ್ನು ಇಟ್ಟಿದ್ದು, ನರೇಂದ್ರ ಮೋದಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಹೇಳಿಕೊಂಡಿದ್ದಾರೆ. ಈ ಪೈಕಿ "ಒಂದು ಪಂಜಾಬಿನಲ್ಲಿ ಅಕ್ಟೋಬರ್ 10ರ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಭತ್ತ ಖರೀದಿ ಪ್ರಕ್ರಿಯೆ ಆರಂಭಿಸುವುದು. ಎರಡು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದು ಹಾಗೂ ಪ್ರತಿಭಟನಾನಿರತ ರೈತರೊಂದಿಗೆ ಸಂಧಾನ ಮಾತುಕತೆಯ ಮೂಲಕ ರಾಜ್ಯದ ರೈತರ ಸಮಸ್ಯೆಗಳನ್ನು ಬಗೆಹರಿಸುವುದು" ಎಂಬ ಬೇಡಿಕೆಗಳನ್ನು ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿಟ್ಟಿದ್ದಾರೆ.
"ದೇಶಕ್ಕಾಗಿ ಹೋರಾಡಿದ ಪಂಜಾಬಿಗರ ಸಮಸ್ಯೆ ಬಗೆಹರಿಸಿ"
"ರೈತರೊಂದಿಗೆ ಮಾತುಕತೆ ನಡೆಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಲ್ಲಿ ನಾನು ಮನವಿ ಮಾಡಿಕೊಂಡೆನು. ಪಂಜಾಬ್ ಯಾವಾಗಲೂ ರಾಷ್ಟ್ರಕ್ಕಾಗಿ ಹೋರಾಟ ನಡೆಸುತ್ತಿದ್ದು, ತಕ್ಷಣ ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಮನವಿ ಮಾಡಿಕೊಂಡಿದ್ದೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಾಳ್ಮೆಯಿಂದ ನಮ್ಮ ಸಮಸ್ಯೆಗಳನ್ನು ಆಲಿಸಿದ್ದು, ಅವರೂ ಸಹ ವಾಸ್ತವದ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಮಾತನಾಡಿದ್ದಾರೆ," ಎಂದು ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ
ಕಳೆದ 2020ರ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.
ರೈತರು ವಿರೋಧಿಸುತ್ತಿರುವ ವಿವಾದಿತ ಕೃಷಿ ಕಾಯ್ದೆಗಳು?
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು.