ಸಂತ್ರಸ್ತ ಕುಟುಂಬದ ಒಬ್ಬ ಸದಸ್ಯನಿಗೆ ನೇಮಕಾತಿ ಪತ್ರ ನೀಡಲು ಸಿಎಂ ಛನ್ನಿ ಸೂಚನೆ
ನವದೆಹಲಿ, ಸಪ್ಟೆಂಬರ್ 28: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್ ನಡೆಸಿದ ದಿನವೇ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಛನ್ನಿ ರಾಜ್ಯ ಸಂಪುಟ ಸಚಿವರೊಂದಿಗೆ ತುರ್ತು ಸಭೆ ನಡೆಸಿದರು.
ಪಂಜಾಬ್ ರಾಜ್ಯ ಸರ್ಕಾರದ ಸಚಿವ ಸಂಪುಟವು ಕೃಷಿ ಕಾಯ್ದೆಗಳ ವಿರುದ್ಧದ ರೈತರ ಹೋರಾಟ ಮತ್ತು ಅವರ ಬೇಡಿಕೆಗಳಿಗೆ ಧ್ವನಿಗೂಡಿಸುವಂತಾ ಒಗ್ಗಟ್ಟಿನ ನಿರ್ಣಯವನ್ನು ಅಂಗೀಕರಿಸಿತು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ಭಾರತ್ ಬಂದ್ ನಡುವೆ ಕೃಷಿ ಕಾಯ್ದೆ ವಿರುದ್ಧ ಧಿಕ್ಕಾರದ ಕೂಗು ಮೊಳಗಿಸಿದ ರೈತರು
ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟದಲ್ಲಿ ಮೃತಪಟ್ಟ ರಾಜ್ಯದ ಪ್ರತಿಯೊಬ್ಬ ರೈತರ ಮನೆಗಳಿಗೆ ಸ್ವತಃ ಸಚಿವರೇ ಭೇಟಿ ನೀಡಬೇಕು. ಪ್ರತಿಯೊಂದು ಸಂತ್ರಸ್ತ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ನೀಡಬೇಕು ಎಂದು ಸಿಎಂ ನೇತೃತ್ವದ ಸಭೆಯಲ್ಲಿ ಸೂಚನೆ ನೀಡಲಾಗಿದೆ.
"10 ವರ್ಷಗಳವರೆಗೂ ಹೋರಾಡಲು ಸಿದ್ಧ":
ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಲು ಆರಂಭಿಸಿ 10 ತಿಂಗಳೇ ಕಳೆದು ಹೋಗಿವೆ. ಮುಂದಿನ 10 ವರ್ಷಗಳವರೆಗೂ ರೈತರು ತಮ್ಮ ಹೋರಾಟ ಮುಂದುವರಿಸುವುದಕ್ಕೆ ಸಿದ್ಧರಿದ್ದೇವೆಯೇ ಹೊರತೂ ಕೇಂದ್ರ ಸರ್ಕಾರದ ಕಪ್ಪು ಕಾಯ್ದೆಗಳ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದಲೂ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
"ಕೃಷಿ ಕಾಯ್ದೆ ಮತ್ತು ರೈತರ ಹೋರಾಟದ ಹಿನ್ನೆಲೆ":
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ.