ಬಗೆಹರಿಯದ ಬಿಕ್ಕಟ್ಟು: ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಸಭೆ ಮುಂದೂಡಿಕೆ
ಅಮೃತಸರ್, ಸೆಪ್ಟೆಂಬರ್ 19: ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ರಾಜಕೀಯ ಬೆಳವಣಿಗೆಗಳು ಚುರುಕು ಪಡೆದುಕೊಂಡಿದೆ. ರಾಜ್ಯದ ಚುಕ್ಕಾಣಿ ಹಿಡಿಯಬೇಕಾದ ಮುಂದಿನ ನಾಯಕ ಯಾರು ಎನ್ನುವ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆ ಜೋರಾಗಿದೆ.
ರಾಜ್ಯ ರಾಜಕಾರಣದ ಬೆಳವಣಿಗೆಗಳ ಮಧ್ಯೆ ಭಾನುವಾರ ಬೆಳಗ್ಗೆ 11 ಗಂಟೆಗೆ ನಡೆಯಬೇಕಿದ್ದ ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯನ್ನು ಮುಂದೂಡಲಾಗಿದೆ. ಹೊಸ ಸಿಎಲ್ಪಿ ನಾಯಕನ ಹೆಸರು ಇನ್ನೂ ಅಂತಿಮಗೊಳಿಸದ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿರುವ ಬಗ್ಗೆ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
ಸೆಪ್ಟೆಂಬರ್ 18ರ ಶನಿವಾರ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ ನಂತರ ಪಂಜಾಬ್ನ ಹೊಸ ಮುಖ್ಯಮಂತ್ರಿಯಾಗಲಿರುವ ಹೊಸ ಸಿಎಲ್ಪಿ ನಾಯಕನ ಹೆಸರಿನಲ್ಲಿ ಇನ್ನೂ ಒಮ್ಮತ ಮೂಡಿಲ್ಲ. ಕಾಂಗ್ರೆಸ್ಸಿನ ಮಾಜಿ ಮುಖ್ಯಸ್ಥ ಸುನೀಲ್ ಜಖರ್, ಹಾಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು, ರಾಜಿಂದರ್ ಸಿಂಗ್ ಬಜ್ವಾ ಮತ್ತು ಸುಖ್ಜಿಂದರ್ ಸಿಂಗ್ ರಂಧವಾ ಹೆಸರು ಮುಂಚೂಣಿಯಲ್ಲಿದೆ.

ಪಂಜಾಬಿನಲ್ಲಿ ಕಾಂಗ್ರೆಸ್ ನಾಯಕರ ದಂಡು:
"ಪಂಜಾಬ್ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದರ ಬಗ್ಗೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಅದನ್ನು ಪಾಲಿಸುತ್ತೇವೆ," ಎಂದು ರಾಜ್ಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಈ ಮಧ್ಯೆ ರಾಜ್ಯ ರಾಜಕೀಯ ಬೆಳವಣಿಗೆಗಳ ಮೇಲೆ ನಿಗಾ ಇಡುವುದಕ್ಕೆ ಹಾಗೂ ಮುಂದಿನ ತೀರ್ಮಾನಗಳ ಬಗ್ಗೆ ಚರ್ಚಿಸುವುದಕ್ಕೆ ಕಾಂಗ್ರೆಸ್ ನಾಯಕರ ದಂಡು ರಾಜ್ಯದಲ್ಲಿ ಬೀಡು ಬಿಟ್ಟಿದೆ.
ಪಂಜಾಬ್ ಕಾಂಗ್ರೆಸ್ ಶಾಸಕರು ಶನಿವಾರ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಹೊಸ ಸಿಎಲ್ಪಿ ನಾಯಕರನ್ನು ಆಯ್ಕೆ ಮಾಡಲು ಅಧಿಕಾರ ನೀಡಿದ್ದರು. ಈ ನಿಟ್ಟಿನಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್, ಕೇಂದ್ರ ವೀಕ್ಷಕರಾದ ಅಜಯ್ ಮಾಕೇನ್ ಪಂಜಾಬಿನಲ್ಲಿ ಉಳಿದುಕೊಂಡಿದ್ದಾರೆ.
ಪಂಜಾಬಿನ ಕಾಂಗ್ರೆಸ್ಸಿನಲ್ಲಿ ರಾಜಕೀಯ ಬಿಕ್ಕಟ್ಟು:
ಪಂಜಾಬ್ ವಿಧಾನಸಭೆ ಚುನಾವಣೆಗೆ ಐದು ತಿಂಗಳಿಗಿಂತ ಕಡಿಮೆ ಅವಧಿ ಇರುವಾಗ ಮುಖ್ಯಮಂತ್ರಿ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಅಮರೀಂದರ್ ಸಿಂಗ್ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ನಡುವಿನ ದೀರ್ಘಕಾಲಿಕ ಬಿಕ್ಕಟ್ಟು ನಿರ್ವಹಣೆಯಲ್ಲಿ ಹೈಕಮಾಂಡ್ ವಿಫಲವಾಗಿದೆ. ಆ ಮೂಲಕ ತಮ್ಮನ್ನು ಅವಮಾನಿಸಲಾಗಿದೆ ಎಂದು ಅಮರೀಂದರ್ ಸಿಂಗ್ ದೂಷಿಸಿದ್ದಾರೆ. ನವಜೋತ್ ಸಿಂಗ್ ಸಿಧು ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ ಅವರು, ಕ್ರಿಕೆಟಿಗರೊಬ್ಬರು ರಾಜಕಾರಣಿಯಾಗಿರುವುದು ದೊಡ್ಡ ದುರಂತ ಎಂದು ಕರೆದಿದ್ದಾರೆ.












Click it and Unblock the Notifications