ಪಂಜಾಬ್ ಚುನಾವಣೆ: ಎಎಪಿ ಸಿಎಂ ಅಭ್ಯರ್ಥಿ ಜ.18ರಂದು ಘೋಷಣೆ
ಚಂಡೀಗಢ, ಜನವರಿ 18: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಇಂದು (ಜನವರಿ 18, 2022) ಪಂಜಾಬ್ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಯಾವ ಪಕ್ಷದಿಂದ, ಯಾರು ಮುಖ್ಯಮಂತ್ರಿ ಅಭ್ಯರ್ಥಿ ಆಗಲಿದ್ದಾರೆ ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಹಲವಾರು ಬಾರಿ ಶೀಘ್ರದಲ್ಲೇ ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷನೆ ಮಾಡಲಾಗುವುದು ಎಂದು ಹೇಳಿದ್ದ ಎಎಪಿ ಈಗ ಕೊನೆಗೂ ಇಂದು ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದೆ.
ಪಂಜಾಬ್ ವಿಧಾನಸಭೆ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ಸೋಮವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಾರಾಗಬೇಕು?: 22 ಲಕ್ಷ ಪ್ರತಿಕ್ರಿಯೆ
ಪಂಜಾಬ್ನಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಗೆಲುವು ಸಾಧಿಸಿದರೆ ಪಕ್ಷದಿಂದ ಯಾರು ಮುಖ್ಯಮಂತ್ರಿ ಆಗಬೇಕು ಎಂಬ ಬಗ್ಗೆ ಎಎಪಿ ಜನರ ಅಭಿಪ್ರಾಯವನ್ನು ಪಡೆದಿದೆ. ಎಎಪಿ, ಗಮನಾರ್ಹವಾಗಿ, ವಿಧಾನಸಭೆ ಚುನಾವಣೆಗೆ ತನ್ನ ಸಿಎಂ ಮುಖವನ್ನು ಆಯ್ಕೆ ಮಾಡುವ ಅಭಿಯಾನದ ಅಡಿಯಲ್ಲಿ ಸುಮಾರು 22 ಲಕ್ಷ ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ. ಕೇಜ್ರಿವಾಲ್ ಜನವರಿ 13 ರಂದು ಪಂಜಾಬ್ನ ಜನರಿಗೆ ತಮ್ಮ ಆದ್ಯತೆಯ ಮುಖ್ಯಮಂತ್ರಿ ಅಭ್ಯರ್ಥಿಗಳ ಹೆಸರನ್ನು ಸೂಚಿಸುವಂತೆ ಕೇಳಿದ್ದರು. ಹಾಗೆಯೇ ಇದಕ್ಕಾಗಿ ಮೊಬೈಲ್ ಸಂಖ್ಯೆಯನ್ನು ಪ್ರಾರಂಭಿಸಿದ್ದರು.
ಭಗವಂತ್ ಮನ್ ಮುಖ್ಯಮಂತ್ರಿ ಅಭ್ಯರ್ಥಿಯೆ?
ಎಎಪಿ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಭಗವಂತ್ ಮನ್ ಹೆಸರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕೆಂದು ತಾನು ಬಯಸಿದ್ದರು ಎಂದು ಈಗಾಗಲೇ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಆದರೆ ವಿಧಾನಸಭೆ ಚುನಾವಣೆಗೆ ತನ್ನ ಸಿಎಂ ಮುಖವನ್ನು ಆಯ್ಕೆ ಮಾಡುವ ಅಭಿಯಾನವನ್ನು ಮಾಡಿದ್ದಾರೆ. ಇನ್ನು ಪಂಜಾಬ್ನಲ್ಲಿ ಸ್ಪರ್ಧೆಯಿಂದ ಕೇಜ್ರಿವಾಲ್ ಕೂಡ ಹೊರಗುಳಿದಿದ್ದಾರೆ. ಸೋಮವಾರದಂದು, ಎಎಪಿ ನಾಯಕ ಮತ್ತು ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹರ್ಪಾಲ್ ಸಿಂಗ್ ಚೀಮಾ ಅವರು ಮುಖ್ಯಮಂತ್ರಿ ಅಭ್ಯರ್ಥಿಯೊಂದಿಗೆ ರಾಜ್ಯ ವಿಧಾನಸಭೆ ಚುನಾವಣೆಗೆ ಹೋಗುವುದು ತಮ್ಮ ಪಕ್ಷ ಮಾತ್ರ ಎಂದು ಹೇಳಿದರು. ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳು ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ ಎಂದು ಕೂಡಾ ತಿಳಿಸಿದ್ದರು.
ಪಂಜಾಬ್ನಲ್ಲಿ ಎಎಪಿ ಈವರೆಗೆ 112 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಂಜಾಬ್ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಇನ್ನೂ ಮೂವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಭಾನುವಾರ ಆಮ್ ಆದ್ಮಿ ಪಕ್ಷ ತನ್ನ ಅಭ್ಯರ್ಥಿಗಳ 10 ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ನಿಂದ ಎಎಪಿಗೆ ಸೇರ್ಪಡೆಯಾದ ಮಾಜಿ ಶಾಸಕ ಜೋಗಿಂದರ್ ಸಿಂಗ್ ಮಾನ್ ಕೂಡಾ ಈ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಜೋಗಿಂದರ್ ಸಿಂಗ್ ಮಾನ್ರನ್ನು ಎಎಪಿಯು ಫಗ್ವಾರಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಪರಿಶಿಷ್ಟ ಜಾತಿ ಸಮುದಾಯದ ನಾಯಕರಾದ ಮಾಜಿ ಶಾಸಕ ಜೋಗಿಂದರ್ ಸಿಂಗ್ ಮಾನ್ ವಿದ್ಯಾರ್ಥಿವೇತನ ಹಗರಣದ ಹಿಂದೆ ಇರುವವರ ವಿರುದ್ಧ ಪಕ್ಷವು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ. ಹಾಗೆಯೇ ಫಗ್ವಾರವನ್ನು ಜಿಲ್ಲೆಯನ್ನಾಗಿ ಮಾಡುವ ಬಹುಕಾಲದ ಬೇಡಿಕೆಯ ವಿಚಾರದಲ್ಲಿ ಕಾಂಗ್ರೆಸ್ ನಿಲುವಿನಿಂದಾಗಿ ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ಪಕ್ಷಕ್ಕೆ ರಾಜೀನಾಮೆ ನೀಡಿ ಎಎಪಿಗೆ ಸೇರ್ಪಡೆ ಆಗಿದ್ದಾರೆ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಪಂಜಾಬ್ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ, ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. (ಒನ್ಇಂಡಿಯಾ ಸುದ್ದಿ)












Click it and Unblock the Notifications