ಪಂಜಾಬ್ ಚುನಾವಣೆ: ಸಿಎಂ ಚನ್ನಿ ಎರಡು ಕ್ಷೇತ್ರಗಳಿಂದ ಕಣಕ್ಕೆ
ನವದೆಹಲಿ, ಜನವರಿ 30: ಪಂಜಾಬ್ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಚನ್ನಿ ಭದೌರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಇಂದು ಪ್ರಕಟಿಸಿದ್ದು, ಪಂಜಾಬ್ ವಿಧಾನಸಭಾ ಚುನಾವಣೆಗೆ ಎಂಟು ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚಮ್ಕೌರ್ ಸಾಹಿಬ್ ಸ್ಥಾನದಿಂದ ಚನ್ನಿ ಸ್ಫರ್ಧಿಸಲಿದ್ದಾರೆ ಎಂದು ಈ ಹಿಂದೆಯೇ ಕಾಂಗ್ರೆಸ್ ಘೋಷಣೆ ಮಾಡಿದೆ.
58 ವರ್ಷದ ಚನ್ನಿ, ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದು, ಸೆಪ್ಟೆಂಬರ್ನಲ್ಲಿ ಅಮರಿಂದರ್ ಸಿಂಗ್ ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸ್ಥಾನವನ್ನು ತೊರೆದ ಬಳಿಕ ಪಂಜಾಬ್ನಲ್ಲಿ ಉನ್ನತ ಹುದ್ದೆಯನ್ನು ಪಂಜಾಬ್ನಲ್ಲಿ ಉನ್ನತ ಹುದ್ದೆಯನ್ನು ಪಡೆದುಕೊಂಡಿದ್ದಾರೆ. ಇನ್ನು ಈಗಾಗಲೇ ರಾಜ್ಯ ಪಕ್ಷದ ಮುಖ್ಯಸ್ಥ ನವಜೋತ್ ಸಿಧು ಜೊತೆಗಿನ ವೈಮನಸ್ಸಿನಿಂದಾಗಿ ಅಮರಿಂದರ್ ಸಿಂಗ್ ಕಾಂಗ್ರೆಸ್ ತೊರೆದಿದ್ದು, ಈಗ ಹೊಸ ಮುಖ್ಯಮಂತ್ರಿ ಚನ್ನಿ ಜೊತೆಗೂ ನವಜೋತ್ ಸಿಧು ವಿವಾದವಿದೆ. ಇಬ್ಬರು ಕೂಡಾ ಮುಖ್ಯಮಂತ್ರಿ ಆಂಕಾಕ್ಷಿಗಳಾಗಿದ್ದಾರೆ.
ನವಜೋತ್ ಸಿಧು ಮತ್ತು ಚರಣ್ಜೀತ್ ಸಿಂಗ್ ಚನ್ನಿ ನಡುವಿನ ಪೈಪೋಟಿ ಮುಂದಿನ ತಿಂಗಳು ನಡೆಯಲಿರುವ ಪಂಜಾಬ್ ಚುನಾವಣೆಗೆ ಕಾಂಗ್ರೆಸ್ ಪ್ರಚಾರಕ್ಕೆ ಧಕ್ಕೆ ತರುವ ಬೆದರಿಕೆಯೊಡ್ಡಿದೆ. ಈ ಹಿನ್ನೆಲೆ ರಾಹುಲ್ ಗಾಂಧಿ ಈ ವಾರದ ಆರಂಭದಲ್ಲಿ ಪಕ್ಷವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಶೀಘ್ರದಲ್ಲೇ ಘೋಷಿಸಲಿದೆ ಎಂದು ಘೋಷಣೆ ಮಾಡಿದ್ದಾರೆ.

"ಇಬ್ಬರು ಮುನ್ನಡೆಸಲು ಸಾಧ್ಯವಿಲ್ಲ, ಒಬ್ಬರು ಮಾತ್ರ ಮುನ್ನಡೆಸಬಹುದು. ಇನ್ನೊಬ್ಬರು ಎಲ್ಲಾ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಇಬ್ಬರ ಹೃದಯದಲ್ಲಿ ಕಾಂಗ್ರೆಸ್ ಚಿಂತನೆಗಳಿವೆ," ಎಂದು ರಾಹುಲ್ ಗಾಂಧಿ ಒತ್ತಿ ಹೇಳಿದ್ದಾರೆ. ಪಂಜಾಬ್ಗೆ ಈಗ ಬೇಕಾಗಿರುವುದು ಶಾಂತಿ ಮತ್ತು ಸಹೋದರತ್ವ ಎಂದು ಕೂಡಾ ರಾಹುಲ್ ಗಾಂಧಿ ತಿಳಿಸಿದ್ದಾರೆ. ನಿರ್ಧಾರ ಕೈಗೊಳ್ಳುವ ಮೊದಲು ಪಕ್ಷವು ಕಾಂಗ್ರೆಸ್ ಕಾರ್ಯಕರ್ತರನ್ನು ಸಂಪರ್ಕಿಸಲಿದೆ ಎಂದು ಕೂಡಾ ರಾಹುಲ್ ಗಾಂಧಿ ತಿಳಿಸಿದ್ದಾರೆ. ಈಗ ಚರಣ್ಜೀತ್ ಸಿಂಗ್ ಚನ್ನಿಯನ್ನು ಎರಡು ಕ್ಷೇತ್ರಗಳಿಂದ ಸ್ಪರ್ಧೆಗೆ ಇಳಿಸಲಾಗಿದೆ.
ಸಮೀಕ್ಷೆ ನಿಜವೇ?: ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರ ಆಮ್ ಆದ್ಮಿ ಪಕ್ಷವೂ ಕೂಡಾ ಈ ಚುನಾವಣಾ ರೇಸ್ನಲ್ಲಿದೆ. ಪಂಜಾಬ್ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ. "ನಮ್ಮ ಸಮೀಕ್ಷೆ ಪ್ರಕಾರ ಚಮ್ಕೌರ್ ಸಾಹಿಬ್ನಿಂದ ಚನ್ನಿ ಜೀ ಸೋಲುತ್ತಾರೆ ಎಂದು ನಾನು ಹೇಳಿದ್ದೆ. ಇಂದು ಕಾಂಗ್ರೆಸ್ ಎರಡು ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ. ಇದರರ್ಥ ಸಮೀಕ್ಷೆ ನಿಜವೇ?," ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿದೆ. ಆದರೆ ಶಿರೋಮಣಿ ಅಕಾಲಿದಳವು ಕೇವಲ 18 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಪಂಜಾಬ್ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. (ಒನ್ಇಂಡಿಯಾ ಸುದ್ದಿ)












Click it and Unblock the Notifications