Breaking: ಹರಿಯಾಣದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆ
ಚಂಡೀಗಢ, ಆಗಸ್ಟ್ 26: ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ಹರಿಯಾಣದಲ್ಲಿ ಅಂಬಾಲಾ ಜಿಲ್ಲೆಯ ಬಾಲಾನಾ ಗ್ರಾಮದಲ್ಲಿ ಇಂದು ಬೆಳಗ್ಗೆ ವರದಿಯಾಗಿದೆ.
ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸ್ ಅಧಿಕಾರಿಗಳು, ಸ್ಥಳದಿಂದ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದಾರೆ.
ಮೃತರನ್ನು ಸಂಗತ್ ರಾಮ್ (65), ಅವರ ಪತ್ನಿ ಮಹೀಂದ್ರಾ ಕೌರ್, ಸುಖ್ವಿಂದರ್ ಸಿಂಗ್ (34) ಮತ್ತು ಅವರ ಪತ್ನಿ ರೀನಾ ಎಂದು ಗುರುತಿಸಲಾಗಿದೆ. ಮೃತರಲ್ಲಿ ಸುಖ್ವಿಂದರ್ ಸಿಂಗ್ ಅವರ ಇಬ್ಬರು ಪುತ್ರಿಯರಾದ ಅಶು (5) ಮತ್ತು ಜಸ್ಸಿ (7) ಕೂಡ ಸೇರಿದ್ದಾರೆ.

"ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಆರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಪರಾಧ ತಂಡದ ಪೊಲೀಸರನ್ನು ಕರೆಯಲಾಗಿದೆ. ಸ್ಥಳದಲ್ಲಿ ಆತ್ಮಹತ್ಯಾ ಪತ್ರ ದೊರೆತಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಅಂಬಾಲಾದ ಉಪ ಪೊಲೀಸ್ ವರಿಷ್ಠಾಧಿಕಾರಿ ಜೋಗಿಂದರ್ ಶರ್ಮಾ ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಇದೇ ರೀತಿಯ ಘಟನೆಯಲ್ಲಿ, ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಒಂದೇ ಕುಟುಂಬದ ಆರು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು.
"ಜಮ್ಮುವಿನ ಸಿದ್ರಾ ಪ್ರದೇಶದ ಅವರದ್ದೇ ನಿವಾಸದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ" ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿತ್ತು.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ಸಹಕಾರದಲ್ಲಿ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications