ಪಂಜಾಬ್ ನಲ್ಲಿ ಪ್ರತಿನಿತ್ಯ 20,000 ಜನರಿಗೆ ಕೊವಿಡ್-19 ತಪಾಸಣೆ
ಚಂಡೀಘರ್, ಜುಲೈ.22: ಕೊರೊನಾವೈರಸ್ ಸೋಂಕು ನಿಯಂತ್ರಣ ಮತ್ತು ಸೋಂಕಿತರ ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು ಮತ್ತು ತಪಾಸಣೆ ವೇಗವನ್ನು ಹೆಚ್ಚಿಸುವುದು ಸದ್ಯದ ಮಟ್ಟಿಗೆ ಎಲ್ಲ ರಾಜ್ಯಗಳ ಎದುರಿಗಿರುವ ಸವಾಲಾಗಿದೆ.
ಪಂಜಾಬ್ ನಲ್ಲಿ ಕೊರೊನಾವೈರಸ್ ಸೋಂಕು ಹಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಶಿಸ್ತುಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ 77 ವಿಶೇಷ ಆಂಬುಲೆನ್ಸ್ ಗಳಿಗೆ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿಧು ಚಾಲನೆ ನೀಡಿದರು.
ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿರುವ ಹಿನ್ನೆಲೆ ಸೋಂಕು ಕಾಣಿಸಿಕೊಳ್ಳುವ ಮೊದಲು ಕೊವಿಡ್-19 ತಪಾಸಣೆ ನಡೆಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿನಿತ್ಯ ರಾಜ್ಯದಲ್ಲಿ 20,000 ಜನರನ್ನು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿಧು ತಿಳಿಸಿದ್ದಾರೆ.

ಪಂಜಾಬ್ ನಲ್ಲಿ ಕೊರೊನಾವೈರಸ್ ಕಂಡೀಷನ್:
ಕೊರೊನಾವೈರಸ್ ಸೋಂಕು ಹರಡುವಿಕೆಯನ್ನು ಕಟ್ಟಿ ಹಾಕುವಲ್ಲಿ ಪಂಜಾಬ್ ಆರಂಭಿಕ ಹಂತದಲ್ಲಿ ಯಶಸ್ವಿಯಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲೂ ಏರಿಕೆಯಾಗುತ್ತಿದೆ. ಈ ಬೆಳವಣಿಗೆ ರಾಜ್ಯದ ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ರಾಜ್ಯದಲ್ಲಿ ಒಟ್ಟು 10,889 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 7389 ಮಂದಿಗೆ ಗುಣಮುಖರಾಗಿದ್ದಾರೆ. ಬಾಕಿ ಉಳಿದ 3237 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮಹಾಮಾರಿಗೆ ಪಂಜಾಬ್ ನಲ್ಲಿ ಇದುವರೆಗೂ 263 ಜನರು ಪ್ರಾಣ ಬಿಟ್ಟಿದ್ದಾರೆ.












Click it and Unblock the Notifications