ಎಂ ಕರುಣಾನಿಧಿ ಮೊಮ್ಮಗನ ವಿರುದ್ಧ ಎಐಎಡಿಎಂಕೆ ದೂರು
ಚೆನ್ನೈ, ಮಾರ್ಚ್ 24: ಮಾಜಿ ಮುಖ್ಯಮಂತ್ರಿ, ದಿವಂಗತ ಎಂ ಕರುಣಾನಿಧಿ ಕ್ಷೇತ್ರದಿಂದ ಸ್ಪರ್ಧಿಸಲು ಅವರ ಮೊಮ್ಮಗ ಉದಯನಿಧಿ ಸ್ಟಾಲಿನ್ ವಿರುದ್ಧ ಚುನಾವಣಾ ಆಯೋಗಕ್ಕೆ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ದೂರು ನೀಡಿದೆ. ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಪುತ್ರ ಉದಯನಿಧಿ ಅವರು ನಾಮಪತ್ರದ ಜೊತೆಗೆ ಸಲ್ಲಿಸಿರುವ ಆಸ್ತಿ ವಿವರದ ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಎಐಎಡಿಎಂಕೆ ಆರೋಪಿಸಿದೆ.
ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಚೇಪಾಕ್-ತಿರುವಲ್ಲಿಕೇನಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.
ಎಬಿಪಿ-ಸಿ ವೋಟರ್ ಸಮೀಕ್ಷೆ: ತಮಿಳುನಾಡಲ್ಲಿ ಸ್ಟಾಲಿನ್ ಸರ್ಕಾರ ಅಧಿಕಾರಕ್ಕೆ
ಉದಯನಿಧಿ ಸಲ್ಲಿರುವ ಅರ್ಜಿ 26ರಲ್ಲಿ ಆದಾಯ ತೆರಿಗೆ ದಾಳಿ ಕುರಿತ ಮಾಹಿತಿ ತಪ್ಪಾಗಿದೆ. ಆಸ್ತಿ ವಿವರದ ಬಗ್ಗೆ ಪರಿಶೀಲನೆ ಅಗತ್ಯ ಎಂದು ಚುನಾವಣಾ ಆಯೋಗಕ್ಕೆ ಎಐಎಡಿಎಂಕೆ ವಕೀಲರ ವಿಭಾಗದ ಜಂಟಿ ಕಾರ್ಯದರ್ಶಿ ದೂರು ನೀಡಿದ್ದಾರೆ. ಒಂದು ವೇಳೆ ಸಕಾಲದಲ್ಲಿ ಆಯೋಗ ಈ ಬಗ್ಗೆ ಕ್ರಮ ಜರುಗಿಸದಿದ್ದರೆ, ಮದ್ರಾಸ್ ಹೈಕೋರ್ಟಿನಲ್ಲಿ ಈ ಬಗ್ಗೆ ಪ್ರಶ್ನಿಸಲಾಗುವುದು ಎಂದಿದ್ದಾರೆ.
ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಏಕಕಾಲಕ್ಕೆ ಮತದಾನ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಹೊರ ಬರಲಿದೆ. ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಹಾಗೂ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟಗಳು ಪ್ರಮುಖವಾಗಿ ಸೆಣಸಾಟ ನಡೆಸುತ್ತಿವೆ.