ಚೆನ್ನೈ ಸ್ಫೋಟ : ಪೊಲೀಸರಿಂದ ಮೂವರು ಶಂಕಿತರ ಬಂಧನ
ಚೆನ್ನೈ, ಮೇ. 1 : ರೈಲು ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಒಬ್ಬರನ್ನು, ನಗರದಲ್ಲಿ ಮತ್ತೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ ಬಾಂಬ್ ಸ್ಫೋಟಗೊಂಡ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿತ್ತು.
2 ಗಂಟೆ : ಚೆನ್ನೈ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿರುವ ಘಟನೆಯನ್ನು ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ. ರೈಲು ಸ್ಫೋಟದ ಬಗ್ಗೆ ತನಿಖೆ ನಡೆಸಲು ದೆಹಲಿಯಿಂದ ತಜ್ಞರನ್ನು ಕಳುಹಿಸುವುದಾಗಿ ಅವರು ಹೇಳಿದ್ದಾರೆ.
12.30 : ಪ್ರಯಾಣಿಕರ ಭದ್ರತೆಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಎಲ್ಲರೂ ಶಾಂತಿ ಕಾಪಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಕರೆ ನೀಡಿದ್ದಾರೆ. ರೈಲು ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟದ ಬಗ್ಗೆ ಪತ್ರಿಕ್ರಿಯೆ ನೀಡಿದ ಅವರು, ದುಷ್ಕರ್ಮಿಗಳನ್ನು ಬಂಧಿಸುವಂತೆ ಭದ್ರತಾ ಪಡೆಗಳಿಗೆ ಸೂಚನೆ ನೀಡಲಾಗಿದೆ. ಪ್ರಯಾಣಿಕರು ಶಾಂತಿ ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

11.30 : ಚೆನ್ನೈ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟಗೊಂಡ ರೈಲಿನಲ್ಲಿಯೇ ಶ್ರೀಲಂಕಾ ಮೂಲದ ಆತ ಪ್ರಯಾಣಿಸುತ್ತಿದ್ದ ಎಂದು ತಿಳಿದುಬಂದಿದೆ. ಕೇಂದ್ರ ಸರ್ಕಾರ ಸ್ಫೋಟದಲ್ಲಿ ಮೃತಪಟ್ಟ ಯುವತಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ. [ಚೆನ್ನೈ: ಬೆಂಗಳೂರಿನ ಪ್ರಯಾಣಿಕ ಹರ್ಷ ಪ್ರತಿಕ್ರಿಯೆ]

ಸಮಯ 11. 15 : ಸಹಾಯವಾಣಿ ಆರಂಭ : ಚೆನ್ನೈ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಹಿನ್ನಲೆಯಲ್ಲಿ ಪ್ರಯಾಣಿಕರ ಬಗ್ಗೆ ಮಾಹಿತಿ ನೀಡಲು ಸಹಾಯವಾಣಿಗಳನ್ನು ಆರಂಭಿಸಲಾಗಿದೆ. ಚೆನ್ನೈ - 044-25357398 ಮತ್ತು ಬೆಂಗಳೂರು 080-22356409, 080-22156553 ನಂಬರ್ ಗಳನ್ನು ಸಂಬಂಧಿಕರ ಬಗ್ಗೆ ಮಾಹಿತಿ ಪಡೆಯಲು ಸಂಪರ್ಕಿಸಬಹುದಾಗಿದೆ.
ಹಿಂದಿನ ಸುದ್ದಿ : ಗುರುವಾರ ಬೆಳ್ಳಂಬೆಳಗ್ಗೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, 6 ಜನರು ಗಾಯಗೊಂಡಿದ್ದಾರೆ. ರೈಲ್ವೆ ನಿಲ್ದಾಣದ 9ನೇ ಫ್ಲಾಟ್ ಫಾರ್ಮ್ ನ 2 ಕಡೆ ಸ್ಫೋಟ ಸಂಭವಿಸಿದೆ.
ಗುರುವಾರ ಮುಂಜಾನೆ 7.30ರ ಸುಮಾರಿಗೆ ಬೆಂಗಳೂರು-ಗುಹವಾತಿ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ ನಂ 9ಕ್ಕೆ ಬರುತ್ತಿದ್ದಂತೆ ಎಸ್ 3 ಮತ್ತು ಎಸ್ 4 ಬೋಗಿಗಳಲ್ಲಿ ಈ ಸ್ಫೋಟ ಸಂಭವಿಸಿದೆ. ಪೊಲೀಸರು, ಬಾಂಬ್ ನಿಷ್ಕ್ರಿಯದಳ ಸ್ಥಳವನ್ನು ಸುತ್ತುವರೆದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಬಗ್ಗೆ ಮಾಹಿತಿ ನೀಡಲು 044 -25357398 ಸಹಾಯವಾಣಿಯನ್ನು ರೈಲು ನಿಲ್ದಾಣದಲ್ಲಿ ಆರಂಭಿಸಲಾಗಿದೆ.

ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರನ್ನು ಆಂಧ್ರಪ್ರದೇಶದ ಗುಂಟೂರು ಮೂಲದ ಸ್ವಾತಿ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಂಬ್ ಸ್ಫೋಟದ ಬಗ್ಗೆ ವರದಿ ನೀಡುವಂತೆ ಕೇಂದ್ರ ಸರ್ಕಾರ ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿದೆ.
ಬೆಂಗಳೂರಿನ ವಿಧಾನಸೌಧ ಮತ್ತು ದೇಶದ ಇತರ ನಗರಗಲ್ಲಿ ಬಾಂಬ್ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಐಎಸ್ಐ ಉಗ್ರ ಜಾಹೀರ್ ಹುಸೇನ್ ನನ್ನು ಚೆನ್ನೈ ಪೊಲೀಸರು ಬುಧವಾರ ಬಂಧಿಸಿದ್ದರು. ಈ ಬಂಧನವಾದ ಒಂದು ದಿನದಲ್ಲಿಯೇ ಬಾಂಬ್ ಸ್ಫೋಟ ಸಂಭವಿಸಿರುವುದು ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. [ಚೆನ್ನೈನಲ್ಲಿ ಐಎಸ್ಐ ಉಗ್ರನ ಬಂಧನ]












Click it and Unblock the Notifications