ಪೆಟ್ರೋಲ್, ಡೀಸೆಲ್ ದರ ಇಳಿಸಲು ಪ್ರತಿಭಟನೆ: ಅಣ್ಣಾಮಲೈ ವಿರುದ್ಧ ಕೇಸ್
ಚೆನ್ನೈ, ಜೂನ್ 1: ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವಂತೆ ಡಿಎಂಕೆ ಸರ್ಕಾರದ ವಿರುದ್ಧ ಚೆನ್ನೈನಲ್ಲಿ ಪ್ರತಿಭಟನೆ ನಡೆಸಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ರಾಜ್ಯದಲ್ಲಿ ಇಂಧನ ದರ ಕಡಿಮೆ ಮಾಡುವಂತೆ ಒತ್ತಾಯಿಸಿ ಮಂಗಳವಾರ ಚೆನ್ನೈನ ಸೈಂಟ್ ಜಾರ್ಜ್ ಕೋಟೆಯಿಂದ ರಾಜ್ಯ ಸಚಿವಾಲಯದ ಕಡೆಗೆ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನೆಡೆಸಿದ್ದರು.
ಅನುಮತಿ ಪಡೆಯದೇ ಬಿಜೆಪಿ ಪ್ರತಿಭಟನಾ ಮೆರವಣಿಗೆ ಮಾಡಿದೆ ಎಂದು ಆರೋಪಿಸಿರುವ ಪೊಲೀಸರು, ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ 5000ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪ್ರತಿಭಟನೆ ವೇಳೆ ಅಣ್ಣಾಮಲೈ ಡಿಎಂಕೆ ಸರ್ಕಾರವನ್ನು ಟೀಕಿಸಿದ್ದರು, "ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಭರವಸೆ ನೀಡಿತ್ತು. ಕೇಂದ್ರ ಸರ್ಕಾರ ಈಗಾಗಲೇ ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಕಡಿಮೆ ಮಾಡಿದೆ. ರಾಜ್ಯ ಸರ್ಕಾರ ಕೂಡ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿಮೆ ಮಾಡಿ ಬೆಲೆ ಕಡಿಮೆ ಮಾಡುವ ಮೂಲಕ ರಾಜ್ಯದ ಜನರಿಗೆ ನೀಡಿರುವ ಭರವಸೆ ಈಡೇರಿಸಬೇಕು" ಎಂದು ಒತ್ತಾಯಿಸಿದ್ದರೆ.
ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದ್ದರು ಮೌನವಾಗಿದ್ದ ಬಿಜೆಪಿ, ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ ಮಾಡುತ್ತಿದ್ದಂತೆ ರಾಜ್ಯ ಸರ್ಕಾರಗಳನ್ನು ಬೆಲೆ ಕಡಿಮೆ ಮಾಡುವಂತೆ ಒತ್ತಾಯಿಸುತ್ತಿದೆ.
ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸಲಿ; "ಪೆಟ್ರೋಲ್ ದರವನ್ನು 5 ರೂಪಾಯಿ, ಡೀಸೆಲ್ ದರವನ್ನು 4 ರೂಪಾಯಿ ಇಳಿಸುವುದಾಗಿ ಡಿಎಂಕೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಪ್ರಧಾನಿ ನರೇಂದ್ರ ಮೋದಿ ಎರಡು ಬಾರಿ ಇಂಧನ ಬೆಲೆ ಇಳಿಸಿದ್ದಾರೆ. ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆ ಈಡೇರಿಸಬೇಕು" ಎಂದು ಅಣ್ಣಾಮಲೈ ಒತ್ತಾಯಿಸಿದ್ದರು.

ಹೆಚ್ಚಿನ ಇಂಧನ ಬೆಲೆ ಹೆಚ್ಚಳದಿಂದ ಜನರನ್ನು ಪಾರುಮಾಡಲು, ಕೇಂದ್ರವು ಮೇ 21 ರಂದು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 8 ರೂಪಾಯಿ ಮತ್ತು ಡೀಸೆಲ್ಗೆ 6 ರೂಪಾಯಿಗಳಷ್ಟು ಕಡಿತಗೊಳಿಸಿತು.
ರಾಜಕೀಯ ಲಾಭಕ್ಕಾಗಿ ಪ್ರತಿಭಟನೆ; ಅಣ್ಣಾಮಲೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್, "ರಾಜ್ಯ ಅಭಿವೃದ್ಧಿಗಾಗಿ ನಾವು ಕೆಲಸ ಮಾಡುತ್ತಿರುವಾಗ, ಅಣ್ಣಾಮಲೈ ಕೇವಲ ರಾಜಕೀಯ ಮಾಡುತ್ತಿದ್ದಾರೆ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.












Click it and Unblock the Notifications