ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ; ಸಾವಿನ ಸಂಖ್ಯೆ 13ಕ್ಕೆ ಏರಿಕೆ
ಚೆನ್ನೈ, ಡಿಸೆಂಬರ್ 8: ತಮಿಳುನಾಡಿನ ಊಟಿ ಬಳಿಯ ಕುನೂರು ಅರಣ್ಯ ಪ್ರದೇಶದಲ್ಲಿ ಬುಧವಾರ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
Mi-17V5 ಸೇನಾ ಹೆಲಿಕಾಪ್ಟರ್ ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಸೇರಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಇನ್ನು ಬಿಪಿನ್ ರಾವತ್ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಬಿಪಿನ್ ರಾವತ್ ಸೇರಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಈ ಸೇನಾ ಹೆಲಿಕಾಪ್ಟರ್ ಸೇನೆಯ ಐವರು ಹಿರಿಯ ಅಧಿಕಾರಿಗಳ ಸಹಿತ ಸೇನಾ ರಕ್ಷಣಾ ಪಡೆ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಇವರು ಸೇನಾ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಕೇಂದ್ರ ಸಚಿವ ಸಂಪುಟದ ತುರ್ತು ಸಭೆ ಕರೆಯಲಾಗಿದೆ.
ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಬಿಪಿನ್ ರಾವತ್ ಸೇರಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನಾ ಸ್ಥಳದಲ್ಲಿ 8 ಮೃತ ದೇಹಗಳು ಪತ್ತೆಯಾಗಿವೆ. ಇನ್ನು ಮಿ-ಸೀರೀಸ್ ಹೆಲಿಕಾಪ್ಟರ್ ಕೊಯಮತ್ತೂರು ಮತ್ತು ಸುಲೂರ್ ನಡುವೆ ಅಪಘಾತಕ್ಕೀಡಾಗಿದೆ.
ಈವರೆಗಿನ ಲಭ್ಯವಿರುವ ಮಾಹಿತಿಯ ಪ್ರಕಾರ, ಅಪಘಾತವಾದ ಹೆಲಿಕಾಪ್ಟರ್ನಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್. ಎಸ್. ನಾಯಕ, ಲೆಫ್ಟಿನೆಂಟ್ ಹರ್ಜಿಂದರ್ ಸಿಂಗ್, ಎನ್. ಕೆ. ಗುರ್ ಸೇವಕ್ ಸಿಂಗ್, ಎನ್. ಕೆ. ಜಿತೇಂದ್ರ ಸಿಂಗ್, ಎಲ್.ಎನ್. ಕೆ. ವಿವೇಕ್ ಕುಮಾರ್, ಎಲ್.ಎನ್. ಕೆ. ಬಿ. ಸಾಯಿ ತೇಜ, ಎಚ್. ಎ.ವಿ. ಸಾತ್ಪಾಲ್ ಅವರನ್ನು ಹೊತ್ತೊಯ್ಯುತ್ತಿತ್ತು ಎನ್ನಲಾಗಿದೆ.

ರಾಹುಲ್ ಗಾಂಧಿ ಟ್ವೀಟ್
ಸೇನಾ ಹೆಲಿಕಾಪ್ಟರ್ ಪತನದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಹೆಲಿಕಾಪ್ಟರ್ನಲ್ಲಿದ್ದ ಇನ್ನಿತರ ಸಿಬ್ಬಂದಿ ಸುರಕ್ಷಿತವಾಗಿರಲಿ ಎಂದು ಆಶಿಸುತ್ತೇನೆ. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದು, ಈ ಹೆಲಿಕಾಪ್ಟರ್ ಪತನದಿಂದ ಶಾಕ್ ಆಗಿದೆ. ಎಲ್ಲರೂ ಬದುಕಿ ಬರಲಿ, ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಟ್ವೀಟ್ ಮಾಡಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಈಗಾಗಲೇ ತಮಿಳುನಾಡಿಗೆ ಹೊರಟಿದ್ದಾರೆ.












Click it and Unblock the Notifications