ಕೊರೊನಾ ಕಾಟದ ನಡುವೆ ಜಾರಿಯಾಗುತ್ತಾ ಸಂಪೂರ್ಣ ಲಾಕ್ಡೌನ್?
ಚೆನ್ನೈ, ಏಪ್ರಿಲ್ 05: ತಮಿಳುನಾಡು ವಿಧಾನಸಭಾ ಚುನಾವಣೆ ಬಳಿಕ ಸಂಪೂರ್ಣ ಲಾಕ್ಡೌನ್ ಘೋಷಿಸಲಾಗುತ್ತದೆ ಎಂದು ಊಹಾಪೋಹದ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ರಾಜ್ಯದ ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಏಪ್ರಿಲ್ 6ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಮತದಾನದ ನಂತರದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ. ಕೊವಿಡ್-19 ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ಅನಿವಾರ್ಯವಲ್ಲದ ಚಟುವಟಿಕೆಗಳ ಮೇಲೆ ನಿರ್ಬಂಧ ವಿಧಿಸಲಾಗುವುದು ಎಂದು ಅವರು ತಿಳಿಸಿದರು.
ಕೊವಿಡ್ 19: ಏಪ್ರಿಲ್ 5ರಂದು ವಿಶ್ವದಲ್ಲಿ ಎಷ್ಟು ಮಂದಿಗೆ ಸೋಂಕು?
ಮಹಾರಾಷ್ಟ್ರದಲ್ಲಿ ಸೃಷ್ಟಿಯಾಗಿರುವ ಆತಂಕಕಾರಿ ಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಈ ಹಿನ್ನೆಲೆ ಅನಗತ್ಯ ಮತ್ತು ಅನಿವಾರ್ಯವಲ್ಲದ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಸ್ಪಷ್ಟವಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದು
ತಮಿಳುನಾಡಿನಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನಿಯಮಗಳನ್ನು ಜಾರಿಗೊಳಿಸುತ್ತೇವೆ. ಈ ನಿಯಮಗಳಿಗೆ ಸಾರ್ವಜನಿಕರ ಸಹಕಾರವೂ ಅಷ್ಟೇ ಪ್ರಮುಖವಾಗಿರುತ್ತದೆ. ತಜ್ಞರ ಸಮಿತಿ ಸಭೆಯ ನಂತರದಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ನಾಗರಿಕರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕೊವಿಡ್-19 ನಿಯಮಗಳನ್ನು ಪಾಲನೆ ಮಾಡಿದರೆ ಸಾಕು ಎಂದು ರಾಧಾಕೃಷ್ಣನ್ ಹೇಳಿದ್ದಾರೆ.
ಮದುವೆ, ಸಭೆ, ಸಮಾರಂಭಗಳಿಂದ ಅಂತರವಿರಲಿ
ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕ ಹೆಚ್ಚಾಗಿರುವ ಹಿನ್ನೆಲೆ ಸಾರ್ವಜನಿಕ ಪ್ರದೇಶಗಳಲ್ಲಿ ಗುಂಪು ಸೇರುವುದರಿಂದ ದೂರವಿರಿ. ಮದುವೆ, ಅಂತ್ಯ ಸಂಸ್ಕಾರ, ಸಭೆ, ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳಿರಿ. ಇದರ ಜೊತೆಗೆ ಅನಗತ್ಯ ಪ್ರಯಾಣವನ್ನು ಮಾಡದಿರುವುದು ಉತ್ತಮ ಎಂದು ಸಲಹೆ ನೀಡಲಾಗಿದೆ.
ಕೊವಿಡ್-19 ಕಂಟೇನ್ಮೆಂಟ್ ಝೋನ್ ಮೇಲೆ ಕಣ್ಣು
ತಮಿಳುನಾಡಿನಲ್ಲಿ ಪ್ರಸ್ತುತ 925 ಕಂಟೇನ್ಮೆಂಟ್ ಝೋನ್ ಗಳನ್ನು ಗುರುತಿಸಲಾಗಿದ್ದು, ಈ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿದೆ. ಇದರ ಜೊತೆ ಕೊವಿಡ್-19 ನಿಯಂತ್ರಣಕ್ಕೆ ಈ ವಲಯಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ವಿಧಾನಸಭಾ ಚುನಾವಣೆ ನಂತರ ಪ್ರತಿ ಮನೆ ಮನೆಗೆ ತೆರಳಿ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗುವುದು. ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ 3,672 ಹೊಸ ಕೊರೊನಾ ಕೇಸ್
ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲೇ 3,672 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ ಮಹಾಮಾರಿಗೆ 11 ಮಂದಿ ಪ್ರಾಣ ಬಿಟ್ಟಿದ್ದು, 1,842 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 9,03,479 ಕೊರೊನಾವೈರಸ್ ಸೋಂಕಿತ ಪ್ರಕರಣ ವರದಿಯಾಗಿವೆ. ಈ ಪೈಕಿ 8,66,913 ಸೋಂಕಿತರು ಗುಣಮುಖರಾಗಿದ್ದು, 12,789 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 23,777 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Recommended Video