ಕೊರೊನಾ ಕಾಟ: ತಮಿಳುನಾಡಿನಲ್ಲಿ ಲಾಕ್ಡೌನ್ ಹೊರತಾಗಿ ಹೊಸ ನಿರ್ಬಂಧ
ಚೆನ್ನೈ, ಏಪ್ರಿಲ್ 18: ತಮಿಳುನಾಡಿನಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ ವೇಗ ಹೆಚ್ಚಾಗುತ್ತಿರುವುದರ ನಡುವೆ ಸೋಮವಾರದಿಂದ ಕಂಟೇನ್ಮೆಂಟ್ ಝೋನ್ ಪ್ರದೇಶಗಳಲ್ಲಿ ಕಠಿಣ ನಿಯಮ ಮತ್ತು ನಿರ್ಬಂಧಗಳನ್ನು ಜಾರಿಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ತಮಿಳುನಾಡಿನಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಆರೋಗ್ಯ ಇಲಾಖೆಯು ಸರ್ಕಾರಕ್ಕೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಭಾನುವಾರ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಕಠಿಣ ನಿರ್ಬಂಧಗಳನ್ನು ಹೇರುವ ಬಗ್ಗೆ ಚರ್ಚೆ ನಡೆಸಿದ್ದಾರೆ.
ರಾಜ್ಯದಲ್ಲಿ 8 ಗಂಟೆ ಬಳಿಕ ರಾತ್ರಿ ನಿಷೇಧಾಜ್ಞೆ, ಸಾರ್ವಜನಿಕ ಸಭೆ-ಸಮಾರಂಭಗಳ ಮೇಲೆ ನಿರ್ಬಂಧದ ಜೊತೆಗೆ ಮನರಂಜನಾ ಪ್ರದೇಶಗಳನ್ನು ಮುಚ್ಚುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ತಮಿಳುನಾಡಿನಲ್ಲಿ ಪೂರ್ಣ ಪ್ರಮಾಣದ ಲಾಕ್ಡೌನ್ ಜಾರಿಗೊಳಿಸುವುದನ್ನು ತಳ್ಳಿ ಹಾಕಿರುವ ಆರೋಗ್ಯಾಧಿಕಾರಿಗಳು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವ ಬಗ್ಗೆ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೊರೊನಾವೈರಸ್ ಸೋಂಕಿನ ಪ್ರಮಾಣ:
ರಾಜ್ಯದಲ್ಲಿ ಒಂದೇ ದಿನ 9344 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 39 ಮಂದಿ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 13071ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 980728ಕ್ಕೆ ಏರಿಕೆಯಾಗಿದೆ.
ತಮಿಳುನಾಡಿನಲ್ಲಿ ಕೊರೊನಾವೈರಸ್ ಸೋಂಕಿನ ನಿಯಂತ್ರಣಕ್ಕೆ ಬೇರೆ ಮಾರ್ಗಗಳಿಲ್ಲ. ನಾವು ಅನಗತ್ಯವಾಗಿ ಗುಂಪು ಸೇರುವುದನ್ನು ಬಿಡ್ಡು ಕೊವಿಡ್-19 ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ಡಾ. ಜೆ ರಾಧಾಕೃಷ್ಣನ್ ತಿಳಿಸಿದ್ದಾರೆ.












Click it and Unblock the Notifications