ನೀವು ಜನರ ಹೃದಯ ಗೆದ್ದಿದ್ದೀರಿ: ರಾಹುಲ್ಗೆ ಸ್ಟಾಲಿನ್ ಶ್ಲಾಘನೆ
ಚೆನ್ನೈ, ಮೇ 28: ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿಗೆ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬಾರದು ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಮನವಿ ಮಾಡಿದ್ದಾರೆ. ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರೂ ರಾಹುಲ್ ಜನರ ಹೃದಯ ಗೆದ್ದಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನ ತ್ಯಜಿಸಲು ದೃಢ ನಿರ್ಧಾರ ಕೈಗೊಂಡಿದ್ದಾರೆ ಎಂಬ ವರದಿಗಳ ನಡುವೆ, ಸ್ಟಾಲಿನ್ ಅವರು ದೂರವಾಣಿ ಮೂಲಕ ಕಾಂಗ್ರೆಸ್ನ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಉದ್ದೇಶವನ್ನು ಕೈಬಿಡುವಂತೆ ಅವರು ಮನವಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ್ದರೂ ನೀವು ಜನರ ಹೃದಯ ಗೆದ್ದಿದ್ದೀರಿ ಎಂದು ಸ್ಟಾಲಿನ್ ಅವರು ರಾಹುಲ್ ಗಾಂಧಿಗೆ ಹೇಳಿರುವುದಾಗಿ ಡಿಎಂಕೆ ಪಕ್ಷ ತಿಳಿಸಿದೆ.

ತಮಿಳುನಾಡಿನಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಹೊಂದಿದ್ದ ಡಿಎಂಕೆ ಭರ್ಜರಿ ಜಯಗಳಿಸಿದ್ದಕ್ಕೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಸ್ಟಾಲಿನ್ ಅವರನ್ನು ಅಭಿನಂದಿಸಿದರು.
ಮೇ 30ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸ್ಟಾಲಿನ್ ಭಾಗವಹಿಸಲಿದ್ದಾರೆ.












Click it and Unblock the Notifications