ಮದ್ರಾಸ್ ಹೈಕೋರ್ಟ್ ನಿವೃತ್ತ ಜಡ್ಜ್ ಸಿಎಸ್ ಕರ್ಣನ್ ಬಂಧನ
ಚೆನ್ನೈ, ಡಿ. 2: ಮದ್ರಾಸ್ ಹಾಗೂ ಕಲ್ಕತ್ತಾ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಸಿಎಸ್ ಕರ್ಣನ್ ಅವರನ್ನು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಚೆನ್ನೈ ಪೊಲೀಸರು ಇಂದು ಬಂಧಿಸಿದ್ದಾರೆ.
ಸಿಎಸ್ ಕರ್ಣನ್ ಅವರು ಮಹಿಳೆಯರು ಹಾಗೂ ನ್ಯಾಯಾಂಗ ವ್ಯವಸ್ಥೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋವೊಂದು ಆನ್ ಲೈನ್ ನಲ್ಲಿ ಸದ್ದು ಮಾಡುತ್ತಿದೆ. ಈ ಕುರಿತಂತೆ ಮೂರು ಪ್ರಕರಣ ದಾಖಲಾಗಿತ್ತು ಹಾಗೂ ಎಫ್ಐಆರ್ ದಾಖಲಿಸಲಾಗಿತ್ತು.
ಈ ಬಗ್ಗೆ ಕರ್ಣನ್ ಅವರ ಪರ ವಕೀಲ ಪೀಟರ್ ರಮೇಶ್ ಕುಮಾರ್ ಮಾತನಾಡಿ, ಮಾಜಿ ಜಡ್ಜ್ ಕರ್ಣನ್ ಅವರನ್ನು ಎಗ್ಮೋರ್ ನ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗುತ್ತದೆ. ಪುಳಲ್ ಕಾರಾಗೃಹದಲ್ಲಿ ಕರ್ಣನ್ ಅವರನ್ನು ಇರಿಸಲಾಗುತ್ತದೆ ಎಂದಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಸ್ ಕರ್ಣನ್ ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದೆ ತನಿಖೆ ವಿಳಂಬ ಮಾಡುತ್ತಿದ್ದಾರೆ ಎಂದು ಮದ್ರಾಸ್ ಹೈಕೋರ್ಟಿಗೆ ತಮಿಳುನಾಡು ಹಾಗೂ ಪುದುಚೇರಿ ಬಾರ್ ಕೌನ್ಸಿಲ್ ಸದಸ್ಯರು ಅರ್ಜಿ ಹಾಕಿದ್ದರು. ಡಿಜಿಪಿ ಹಾಗೂ ಪೊಲೀಸ್ ಆಯುಕ್ತರಿಗೆ ಡಿಸೆಂಬರ್ 7ರೊಳಗೆ ಖುದ್ದು ಹಾಜರಾಗಿ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಕೋರ್ಟ್ ನಿರ್ದೇಶಿಸಿತ್ತು.
2017ರಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ
2017ರಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕೊಲ್ಕತ್ತಾ ಹೈಕೋರ್ಟ್ನ ನ್ಯಾ. ಸಿ.ಎಸ್. ಕರ್ಣನ್ ಅವರಿಗೆ ಸುಪ್ರೀಂ ಕೋರ್ಟ್ 6 ತಿಂಗಳ ಸಜೆ ವಿಧಿಸಿತ್ತು. ಬಳಿಕ ಕರ್ಣನ್ ನಾಪತ್ತೆಯಾಗಿದ್ದರು.
ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಅಸ್ತಿತ್ವದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವ ಮೂಲಕ ವಿವಾದ ಎಬ್ಬಿಸಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅವರ ನ್ಯಾಯಾಂಗ ಬಂಧನಕ್ಕೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು.
ಭಾರತೀಯ ನ್ಯಾಯಾಂಗದ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿಯ ವಿರುದ್ಧ ಸರ್ವೋಚ್ಚ ನ್ಯಾಯಾಲಯ ನ್ಯಾಯಾಂಗ ನಿಂದನೆಯ ನೋಟೀಸ್ ಜಾರಿ ಮಾಡಿತ್ತು.












Click it and Unblock the Notifications