ಆಸ್ಪತ್ರೆಯಿಂದಲೇ ಜಯಲಲಿತಾ ಆಡಳಿತ ನಡೆಸುತ್ತಿದ್ದಾರೆ: ಪಕ್ಷ
ಚೆನ್ನೈ, ನವೆಂಬರ್, 7: ನಿರ್ಜಲೀಕರಣ ಮತ್ತು ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಚೇತರಿಸಿಕೊಂಡಿದ್ದಾರೆ ಎಐಎಡಿಎಂಕೆ ಪಕ್ಷದ ಮುಖಂಡರು ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ "ಮುಖ್ಯಮಂತ್ರಿ ಜಯಲಲಿತಾ ಅವರು ಆಸ್ಪತ್ರೆಯಿಂದಲೇ ರಾಜ್ಯದ ಆಡಳಿತ ಬಗ್ಗೆ ಕ್ಷಣಕ್ಷಣದ ಮಾಹಿತಿ ಪಡೆಯುತ್ತಿದ್ದು, ಅಲ್ಲಿಂದಲೇ ಆಡಳಿತಕ್ಕೆ ಸಂಬಂಧಿಸಿದ ಸೂಚನೆಗಳನ್ನೂ ಸಹ ನೀಡುತ್ತಿದ್ದಾರೆ" ಎಂದು ಎಐಎಡಿಎಂಕೆ ಪಕ್ಷದ ವಕ್ತಾರೆ ಸಿ.ಆರ್. ಸರಸ್ವತಿ ಸೋಮವಾರ ಒನ್ ಇಂಡಿಯಾಗೆ ತಿಳಿಸಿದ್ದಾರೆ. [ಸನ್ನೆ ಮೂಲಕ ಸ್ಪಂದಿಸುತ್ತಿದ್ದಾರೆ ಜಯಲಲಿತಾ!]
ಅಪೊಲೋ ಆಸ್ಪತ್ರೆಯ ನಿರ್ದೇಶಕ ಪ್ರತಾಪ್ ರೆಡ್ಡಿ ಅವರು ಕಳೆದ ವಾರ ಮಾಧ್ಯಮಗಳೊಂದಿಗೆ ಮಾತನಾಡಿ ಜಯಲಲಿತಾ ಅವರು ಆರೋಗ್ಯದ ಬಗ್ಗೆ ಮಾಹಿತಿ ತಿಳಿಸಿದ್ದರು, 'ಮುಖ್ಯಮಂತ್ರಿಯವರು ಗುಣಮುಖರಾಗಿದ್ದಾರೆ. ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ' ಎಂದು ಅವರು ಹೇಳಿದ ನಂತರ ಪಕ್ಷದ ಕಾರ್ಯಕರ್ತರು ತೀವ್ರ ಹರ್ಷ ವ್ಯಕ್ತಪಡಿಸಿದ್ದರು. [ಜಯಲಲಿತಾ ಆರೋಗ್ಯ ಮಾಹಿತಿ ಕೋರಿ ರಾಷ್ಟ್ರಪತಿಗೆ ಪತ್ರ]
ಜಯಲಲಿತಾ ಅವರು ಆಸ್ಪತ್ರೆ ಸೇರಿದ ನಂತರ ರಾಜ್ಯದ ಆಡಳಿತ ಸಂಪೂರ್ಣ ಹದಗೆಟ್ಟಿದೆ ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷ ಡಿಎಂಕೆ ಹೇಳಿಕೆಗೆ ಸರಸ್ವತಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
"ಆಡಳಿತಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ತಲೆದೋರಿಲ್ಲ. ಎಲ್ಲ ಸಚಿವರು ಮತ್ತು ಕಾರ್ಯದರ್ಶಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ" ಎಂದು ಅವರು ಹೇಳಿದ್ದಾರೆ.
"ಕಳೆದ ವಾರವಷ್ಟೇ ಆಸ್ಪತ್ರೆ ನಿರ್ದೇಶಕ ಪ್ರತಾಪ್ ರೆಡ್ಡಿ ಅವರು ಮುಖ್ಯಮಂತ್ರಿಯವರು ಚೇತರಿಸಿಕೊಂಡಿದ್ದಾರೆ. ಆಸ್ಪತ್ರೆಯಿಂದಲೇ ಪಕ್ಷದ ನಾಯಕರಿಗೆ ಸೂಚನೆ ನೀಡುತ್ತಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ. ಎಂದು ಅವರು ಹೇಳಿದರು.
ಸೆಪ್ಟೆಂಬರ್ 22ರಂದು ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾಗಿದ್ದರು ಅಂದಿನಿಂದ ಇದುವರೆಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ನವೆಂಬರ್ 19ರಂದು ತಮಿಳುನಾಡು ಮತ್ತು ಪಾಂಡಿಚೇರಿಯಲ್ಲಿ ಉಪಚುನಾವಣೆ ನಡೆಯಲಿದೆ.
ಚುನಾವಣೆಯಲ್ಲಿ ಗೆಲವು ಸಾಧಿಸಲು ಎಐಡಿಎಂಕೆ ಮುಖಂಡರು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ.