ಮೇಕೆದಾಟು ಯೋಜನೆ ವಿರೋಧಿಸಿ ಕೆ. ಅಣ್ಣಾಮಲೈ ಉಪವಾಸ
ಚೆನ್ನೈ, ಜುಲೈ 30; ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಜಟಾಪಟಿ ನಡೆಯುತ್ತಿದೆ. ತಮಿಳುನಾಡಿನ ಪ್ರತಿಪಕ್ಷ ಬಿಜೆಪಿ ಸಹ ರಾಜ್ಯ ಸರ್ಕಾರಕ್ಕೆ ಈ ವಿಚಾರದಲ್ಲಿ ಬೆಂಬಲ ನೀಡಿದೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಮೇಕೆದಾಟು ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕರ್ನಾಟಕದ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಿ ಅವರು ಪ್ರತಿಭಟನೆ ನಡೆಸಲಿದ್ದಾರೆ.
ಆಗಸ್ಟ್ 5ರಂದು ಕೆ. ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ಶಾಸಕರು, ಪಕ್ಷದ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಕರ್ನಾಟಕ ಸರ್ಕಾರ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಲಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಕೆಲವು ದಿನಗಳ ಹಿಂದೆ ಸರ್ವಪಕ್ಷಗಳ ಸಭೆಯನ್ನು ನಡೆಸಿದ್ದರು. ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯದ ನಿಲುವಿನ ಬಗ್ಗೆ ಚರ್ಚೆ ನಡೆಸಿದ್ದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಾಯಕರು ಯೋಜನೆ ವಿಚಾರದಲ್ಲಿ ತಮಿಳುನಾಡು ಸರ್ಕಾರದ ಪರವಾಗಿ ನಿಲ್ಲುತ್ತೇವೆ ಎಂದು ಹೇಳಿದ್ದರು. ಕರ್ನಾಟಕ ಸರ್ಕಾರದ ಪ್ರಸ್ತಾವಿತ ಯೋಜನೆಯನ್ನು ವಿರೋಧಿಸಿದ್ದರು.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವಿದೆ. ಆದರೆ ತಮಿಳುನಾಡು ಬಿಜೆಪಿ ರಾಜ್ಯದ ಜನರ ಹಿತ ಕಾಪಾಡಲು ರಾಜ್ಯ ಸರ್ಕಾರದ ಜೊತೆ ನಿಂತಿದೆ.
ಬಿಜೆಪಿ ನಾಯಕರಿಗೆ ಇಕ್ಕಟ್ಟು; ಎಂ. ಕೆ. ಸ್ಟಾಲಿನ್ ನಡೆಸಿದ ಸರ್ವಪಕ್ಷಗಳ ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದ ನಾಲ್ವರು ಬಿಜೆಪಿ ಶಾಸಕರು, ಬಿಜೆಪಿ ರಾಷ್ಟ್ರೀಯ ಪಕ್ಷವಾಗಿರಬಹುದು. ಆದರೆ ರಾಜ್ಯದ ಹಿತ ನಮಗೆ ಮುಖ್ಯ. ಆದ್ದರಿಂದ ಮೇಕೆದಾಟು ವಿಚಾರದಲ್ಲಿ ನಾವು ತಮಿಳುನಾಡು ಸರ್ಕಾರವನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.
ಕರ್ನಾಟಕದ ಬಿಜೆಪಿ ಸರ್ಕಾರ ಕುಡಿಯುವ ನೀರು ಪೂರೈಕೆ ಮಾಡಲು ಮೇಕೆದಾಟು ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಆದರೆ ತಮ್ಮದೇ ಪಕ್ಷದ ಬೇರೆ ರಾಜ್ಯದ ನಾಯಕರು ಯೋಜನೆ ವಿರೋಧಿಸುತ್ತಿದ್ದಾರೆ. ಇದು ಬಿಜೆಪಿ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿದೆ.
ಕಾವೇರಿ ನ್ಯಾಯಾಧೀಕರಣ ಅಂತಿಮ ತೀರ್ಮಾನ ಅನ್ವಯ ಕಾವೇರಿ ನದಿ ಪಾತ್ರದ ರಾಜ್ಯಗಳ ಒಪ್ಪಿಗೆ ಇಲ್ಲದೇ ಯಾವುದೇ ಹೊಸ ಯೋಜನೆ ಕೈಗೊಳ್ಳುವಂತಿಲ್ಲ. ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಾಣವಾದರೆ ರಾಜ್ಯದ ಪಾಲಿನ ನೀರನ್ನು ಕರ್ನಾಟಕ ಕೊಡುವುದಿಲ್ಲ ಎಂಬುದು ತಮಿಳುನಾಡು ಸರ್ಕಾರದ ವಾದ.
ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರುದ್ಧ ಸುಪ್ರೀಂಕೋರ್ಟ್ನಲ್ಲಿಯೂ ಅರ್ಜಿ ಸಲ್ಲಿಸಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿಯೂ ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ.
ಕರ್ನಾಟಕದ ರಾಜಕೀಯದಲ್ಲಿ ಹಲವು ಬದಲಾವಣೆಯಾಗಿದೆ. ನೀರಾವರಿ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿರುವ, ನೀರಾವರಿ ವಿಚಾರದಲ್ಲಿ ಅಪಾರ ಜ್ಞಾನ ಹೊಂದಿರುವ ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ.
ಯೋಜನೆಗೆ ಪುದುಚೇರಿ ಸಹ ವಿರೋಧ ವ್ಯಕ್ತಪಡಿಸಿದೆ. ಬಸವರಾಜ ಬೊಮ್ಮಾಯಿ ಅಕ್ಕ-ಪಕ್ಕದ ರಾಜ್ಯಗಳನ್ನು ವಿಶ್ವಾಸಕ್ಕೆ ಪಡೆದು ಯೋಜನೆಗೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ತರಲಿದ್ದಾರೆಯೇ? ಕಾದು ನೋಡಬೇಕಿದೆ.












Click it and Unblock the Notifications