ಓಖಿಗೂ ಮುನ್ನ ಭಾರತೀಯರ ನಿದ್ದೆಕೆಡಿಸಿದ್ದ 7 ಕ್ರೂರ ಚಂಡಮಾರುತ
Recommended Video

ಚೆನ್ನೈ, ಡಿಸೆಂಬರ್ 01: ಪ್ರಕೃತಿಯ ಅಪರಿಮಿತ ಶಕ್ತಿಯೆದುರು ಮನುಷ್ಯ ತೃಣಸಮಾನ ಎಂಬುದನ್ನು ಸಾಬೀತುಪಡಿಸುವುದಕ್ಕಾಗಿಯೇ ಪ್ರತಿವರ್ಷವೂ ಒಂದಿಲ್ಲೊಂದು ನೈಸರ್ಗಿಕ ವಿಕೋಪಗಳು ನಡೆಯುತ್ತಲೇ ಇರುತ್ತವೆ. ಇದೀಗ ತಮಿಳುನಾಡಿನಲ್ಲಿ ಸ್ಮಶಾನ ಮೌನ ಸೃಷ್ಟಿಸಿರುವ ಓಖಿ ಚಂಡಮಾರುತವೂ ಅದರದೇ ಒಂದು ಭಾಗ.
ಈಗಾಗಲೇ 8 ಜನರನ್ನು ಬಲಿತೆಗೆದುಕೊಂಡ ಓಖಿ, ತಮಿಳುನಾಡಿನ ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಹೆಚ್ಚು ಪ್ರಾಣಹಾನಿ ತಪ್ಪಿಸುವುದಕ್ಕಾಗಿ ಈಗಾಗಲೇ ಇಲ್ಲಿನ ಸರ್ಕಾರ ಕ್ರಮಕೈಗೊಂಡಿದ್ದು, ಶಾಲೆ-ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಿದೆ.
ಓಖಿಯಂಥ ಚಂಡಮಾರುತಗಳು ಭಾರತಕ್ಕೆ ಹೊಸತೇನಲ್ಲ. ಕಳೆದ ಹಲವು ವರ್ಷಗಳಿಂದ ಒಂದಿಲ್ಲೊಂದು ಅಪಾಯಕಾರಿ ಚಂಡಮಾರತಕ್ಕೆ ಭಾರತದ ಹಲವು ರಾಜ್ಯಗಳು ಮೈಯೊಡ್ಡಿವೆ, ಮರುಗಿವೆ. ಪ್ರಕೃತಿಯ ಮುನಿಸಿಗೆ ತಮ್ಮ ಬಂಧುಬಾಂಧವರನ್ನು ಕಳೆದುಕೊಂಡ ಹಲವರಿಗೆ ಈ ಚಂಡಮಾರುತಗಳು ದುಃಸ್ವಪ್ನವೆನ್ನಿಸಿವೆ.
In Pics : ಓಖಿ ಸೋಕಿದ ಊರೆಲ್ಲ ನೀರೋ ನೀರು, ನೆಲ ನೋಡಿದ ಮರಗಳು
ಜನರು ಸುಲಭವಾಗಿ ನೆನಪಲ್ಲಿಟ್ಟುಕೊಳ್ಳಬಹುದಾದ ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಸರಳವಾದ ಹೆಸರನ್ನು ಹುಡುಕಿ ಹವಾಮಾನ ಇಲಾಖೆಯೇ ಚಂಡಮಾರುತಗಳಿಗೆ ನಾಮಕರಣ ಮಾಡುತ್ತದೆ! ಹಾಗೆಯೇ ಈ ಬಾರಿಯ ಚಂಡಮಾರುತಕ್ಕೆ 'ಓಖಿ' ಎಂದು ಹೆಸರಿಡಲಾಗಿದೆ!
ಕಳೆದ ಕೆಲ ವರ್ಷಗಳಿಂದ ಭಾರತವನ್ನು ಕಾಡಿದ 7 ಅಪಾಯಕಾರಿ ಚಂಡಮಾರುತಗಳ ಪಟ್ಟಿ ಇಲ್ಲಿದೆ.

ಹುಢುದ್ - 2014
2014 ರಲ್ಲಿ ಒಡಿಶಾ ಮತ್ತು ಆಂಧ್ರಪ್ರದೇಶಗಳಿಗೆ ಅಪ್ಪಳಿಸಿದ ಹುಢುದ್ ಎಂಬ ಚಂಡಮಾರುತ 185 ಕಿ.ಮೀ.ವೇಗದಲ್ಲಿ ವಿಶಾಖಪಟ್ಟಣಂ ಅನ್ನು ಅಪ್ಪಳಿಸಿತ್ತು. ಈ ಚಂಡಮಾರುತದಿಂದ 61 ಜನ ಮೃತರಾಗಿದ್ದರೆ, 21,900 ಕೋಟಿ ರೂ.ಗೂ ಹೆಚ್ಚು ಹಾನಿಹಾಗಿತ್ತು. ಈ ಸಮಯದಲ್ಲಿ ಎರಡೂ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿತ್ತು. ಹಲವು ದಿನ ವಿದ್ಯುತ್ ಕೈಕೊಟ್ಟು ಜನ ಪರಿತಪಿಸಿದ್ದರು.

ಫೈಲಿನ್ - 2013
2013 ರ ಅಕ್ಟೋಬರ್ ನಲ್ಲಿ ಒಡಿಶಾಕ್ಕೆ ಅಪ್ಪಳಿಸಿದ್ದ ಫೈಲಿನ್ ಎಂಬ ಚಂಡಮಾರುತ, ದಸರಾ ಸಂಭ್ರಮವನ್ನೇ ನಾಶಗೊಳಿಸಿ 1,154,725 ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿತ್ತು. ತಕ್ಷಣವೇ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದರೂ 3000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿ ಪಾಸ್ತಿ ಹಾನಿಯಾಗಿತ್ತು.

ನೀಲಂ - 2012
2012 ಅಕ್ಟೋಬರ್ 31 ರಂದು ತಮಿಳುನಾಡಿನ ಕರಾವಳಿ ಪ್ರದೇಶವಾದ ಮಹಾಬಲಿಪುರಂ ಅನ್ನು ಅಪ್ಪಳಿಸಿದ್ದ ನೀಲಂ ಚಂಡಮಾರುತಕ್ಕೆ 12 ಜನ ಮೃತರಾಗಿದ್ದರು. 3000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿತ್ತು. 100 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಹಾನಿಯಾಗಿತ್ತು.

ಜಾಲ್ - 2010
2010 ರಲ್ಲಿ ಆಂಧ್ರಪ್ರದೇಶ ಮತ್ತು ಒಡಿಶಾಕ್ಕೆ ಅಪ್ಪಳಿಸಿದ ಜಾಲ್ ಚಂಡಮಾರುತಕ್ಕೆ 54 ಜನ ಬಲಿಯಾಗಿದ್ದರು. 70,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಈ ಚಂಡಮಾರುತಕ್ಕೆ 3,00,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆಯೆಲ್ಲವೂ ನಾಶವಾಗಿ ರೈತರ ಬದುಕನ್ನು ಮೂರಾಬಟ್ಟೆ ಮಾಡಿತ್ತು.

ಫ್ಯಾನ್ - 2009
2009 ರಲ್ಲಿ ಸಂಭವಿಸಿದ ಫ್ಯಾನ್ ಚಂಡಮಾರುತಕ್ಕೆ 300 ಕ್ಕೂ ಹೆಚ್ಚು ಮೀನುಗಾರರು ನಾಪತ್ತೆಯಾಗಿದ್ದರು. ಮುಂಬೈ, ಡಿಯು, ದಮನ್, ಥಾಣೆ ಮುಂತಾದ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿತ್ತು. ಅಸಂಖ್ಯ ಆಸ್ತಿ-ಪಾಸ್ತಿ ಹಾನಿಯಾಗಿತ್ತು.

ನಿಶಾ- 2008
2008 ರ ನವೆಂಬರ್ ನಲ್ಲಿ ತಮಿಳುನಾಡಿಗೆ ಅಪ್ಪಳಿಸಿದ ನಿಶಾ ಚಂಡಮಾರುತಕ್ಕೆ 180 ಕ್ಕೂ ಹೆಚ್ಚು ಜನ ಅಸುನೀಗಿದ್ದರು. ಈ ಸಮಯದಲ್ಲಿ 1280 ಮಿ.ಮೀ. ಗೂ ಹೆಚ್ಚು ಮಳೆ ಸುರಿದು ದಾಖಲೆಯಾಗಿತ್ತು. ಬಂಗಾಳಕೊಲ್ಲಿಯಲ್ಲಿ ಹುಟ್ಟಿದ ಈ ಚಂಡಮಾರುತ ತಮಿಳುನಾಡಿನ ಕರಾವಳಿ ತತ್ತರಿಸುವಂತೆ ಮಾಡಿತ್ತು.

ರಶ್ಮಿ- 2008
2008 ರಲ್ಲಿ ಆಂಧ್ರಪ್ರದೇಶದಲ್ಲಿ ಸಂಭವಿಸಿದ ರಶ್ಮಿ ಚಂಡಮಾರುತಕ್ಕೆ ಬಲಿಯಾದವರು 15 ಜನ. ಅತಿಯಾಗಿ ಮಳೆಯಾಗುವ ಎಚ್ಚರಿಕೆಯನ್ನು ಜನರಿಗೆ ಮೊದಲೇ ನೀಡಿದ್ದರೂ 15 ಜನರ ಸಾವನ್ನು ತಪ್ಪಿಸುವುದಕ್ಕೆ ಮಾತ್ರ ಸಾಧ್ಯವಾಗಲಿಲ್ಲ. ಅಕ್ಟೋಬರ್ 27 ರಂದು ಸಂಭವಿಸಿದ ಈ ಚಂಡಮಾರುತ ಕಳೆದು ಕೇವಲ ಹದಿನೈದು ದಿನಗಳಲ್ಲಿ, ಇದೇ ಪ್ರದೇಶದಲ್ಲಿ ಖಾಯ್ ಮುಕ್ ಎಂಬ ಮತ್ತೊಂದು ಚಂಡಮಾರುತ ಅಪ್ಪಳಿಸಿತ್ತು.











Click it and Unblock the Notifications