ಚೆನ್ನೈ: ಮತ್ತೊಂದು ಕಟ್ಟಡ ಕುಸಿತ, 11 ಜನ ಸಾವು
ಚೆನ್ನೈ, ಜು. 6: ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದ ಪರಿಣಾಮ 11ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ದುರ್ಘಟನೆ ಚೆನ್ನೈನ ತಿರುವಳ್ಳೂರ್ ಜಿಲ್ಲೆಯ ಉತ್ತರಪಾಳ್ಯಂ ಎಂಬಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಮೃತಪಟ್ಟವರನ್ನು ಆಂಧ್ರಪ್ರದೇಶ ಮೂಲದ ಕಾರ್ಮಿಕರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಹಲವರಿಗೆ ಮಂದಿಗೆ ಗಾಯಗಳಾಗಿದ್ದು, ಅವರೆಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಅನೇಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಮಾತ್ರವಲ್ಲದೆ ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಐದಕ್ಕೂ ಹೆಚ್ಚು ಅಗ್ನಿಶಾಮಕ ದಳ ಸಹಿತ ರಕ್ಷಣಾ ತಂಡಗಳು ಆಗಮಿಸಿ ಪರಿಹಾರ ಕಾರ್ಯಾಚರಣೆ ಮುಂದುವರಿಸಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 19 ವರ್ಷ ವಯಸ್ಸಿನ ನಾಗರಾಜ್ ಎಂಬ ಯುವಕನನ್ನು ಈಗಷ್ಟೇ ರಕ್ಷಿಸಲಾಗಿದ್ದು, ಸಮೀಪದ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

ಕಳೆದ ರಾತ್ರಿ ಈ ಪ್ರದೇಶದಲ್ಲಿ ಸುರಿದ ಭಾರಿ ಮಳೆಗೆ ಕಟ್ಟಡದ ಗೋಡೆ ಕುಸಿದಿರುವ ಸಾಧ್ಯತೆಯಿದೆ. 11 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು ಒಂದು ಮಗು ಸೇರಿದೆ ಎಂದು ತಿರುವಳ್ಳೂರ್ ಜಿಲ್ಲಾ ಕಲೆಕ್ಟರ್ ಕೆ ವೀರ ರಾಘವ ರಾವ್ ಅವರು ಹೇಳಿದ್ದಾರೆ.
ಜೂ.28ರಂದು ಚೆನ್ನೈನ ಹೊರವಲಯದ ಮೌಲಿವಾಕ್ಕಂನ 11 ಅಂತಸ್ತಿನ ಕಟ್ಟಡವೊಂದು ಕುಸಿದ ಪರಿಣಾಮ 61ಕ್ಕೂ ಅಧಿಕ ಮಂದಿ ಸಾವನ್ನಪಿದ ದುರಂತದ ಬೆನ್ನಲ್ಲೇ ಈ ಘಟನೆ ನಡೆದಿದೆ. ಈ ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದ 27ಕ್ಕೂ ಅಧಿಕ ಮಂದಿಯನ್ನು ರಕ್ಷಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳವನ್ನು ಸ್ಥಾಪಿಸಿರುವ ಮುಖ್ಯಮಂತ್ರಿ ಜಯಲಲಿತಾ ಅವರು ಶೀಘ್ರ ತನಿಖೆಗೆ ಆಗ್ರಹಿಸಿದ್ದಾರೆ.











Click it and Unblock the Notifications