ಮೇಕೆದಾಟು ಯೋಜನೆ : ಮೋದಿಗೆ ತಮಿಳುನಾಡು ಪತ್ರ
ಚೆನ್ನೈ, ಜೂನ್ 24 : ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ತಮಿಳುನಾಡು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಯೋಜನೆಗೆ ಸಂಬಂಧಿಸಿದಂತೆ ಡಿಪಿಆರ್ ತಯಾರು ಮಾಡಲು ಕರ್ನಾಟಕಕ್ಕೆ ಈಗಾಗಲೇ ಅನುಮತಿ ಸಿಕ್ಕಿದೆ.
ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಯೋಜನೆ ಕುರಿತು ವಿವರಣೆ ನೀಡಲು ಭೇಟಿಗೆ ಸಮಯಾವಕಾಶ ನೀಡುವಂತೆಯೂ ಮನವಿ ಮಾಡಿದ್ದಾರೆ.

ಮೇಕೆದಾಟು ಯೋಜನೆಗೆ ಸಂಪೂರ್ಣ ಒಪ್ಪಿಗೆ ನೀಡಬೇಕು ಎಂದು ಪರಿಸರ ಇಲಾಖೆಗೆ ಕರ್ನಾಟಕ ಸರ್ಕಾರ ಪತ್ರ ಬರೆದಿದೆ. ಈ ಪತ್ರ ಬರೆದ ಬೆನ್ನಲ್ಲಿಯೇ ತಮಿಳುನಾಡು ಸರ್ಕಾರ ಪ್ರಧಾನಿಗಳಿಗೆ ಪತ್ರ ಬರೆದು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದೆ.
ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣವಾದರೆ ನಮ್ಮ ಪಾಲಿನ ನೀರಿಗೆ ಧಕ್ಕೆ ಉಂಟಾಗಲಿದೆ. ಈಗಾಗಲೇ ಯೋಜನೆಗೆ ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ತಾತ್ವಿಕ ಒಪ್ಪಿಗೆ ನೀಡಿದೆ. ಯಾವುದೇ ಕಾರಣಕ್ಕೂ ಯೋಜನೆ ಜಾರಿಗೆ ಸಂಪೂರ್ಣ ಒಪ್ಪಿಗೆ ನೀಡಬೇಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಪತ್ರ ಬರೆದ ತಕ್ಷಣ ತಮಿಳುನಾಡು ಪ್ರಧಾನಿಗಳಿಗೆ ಈ ಪತ್ರವನ್ನು ಬರೆದಿದೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ವಿವರ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕೇಂದ್ರ ಸರ್ಕಾರ ನೀಡಿರುವ ತಾತ್ವಿಕ ಅನುಮೋದನೆ ಬೇಷರತ್ತಿನದಲ್ಲ. ಷರತ್ತು ಬದ್ಧ ಅನುಮೋದನೆ ಕೇವಲ ಡಿಪಿಆರ್ ತಯಾರಿಕೆಗೆ ಮಾತ್ರ ಸೀಮಿತ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.












Click it and Unblock the Notifications