ಎಐಎಡಿಎಂಕೆ ಪ್ರಣಾಳಿಕೆ: ತಮಿಳುನಾಡಲ್ಲಿ ಪ್ರತಿವರ್ಷ 6 ಸಿಲಿಂಡರ್ ಉಚಿತ
ಚೆನ್ನೈ, ಮಾರ್ಚ್ 14: ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯುವ ಉದ್ದೇಶದಿಂದ ಆಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಾಳಗಂ(ಎಐಎಡಿಎಂಕೆ) ಪ್ರಣಾಳಿಕೆಯನ್ನು ಹೊರಡಿಸಿದೆ.
ಚೆನ್ನೈನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಎಐಎಡಿಎಂಕೆ ಮುಖಂಡ ಸಿ. ಪೊನ್ನೈಯನ್ ಓದಿದರು. ಪ್ರತಿವರ್ಷ ಪ್ರತಿಯೊಂದು ಮನೆಗೆ ಕನಿಷ್ಠ ಆರು ಅಡುಗೆ ಸಿಲಿಂಡರ್ ಗಳನ್ನು ಸರ್ಕಾರದ ವತಿಯಿಂದ ಉಚಿತಾಗಿ ನೀಡಲಾಗುತ್ತದೆ ಎಂದು ಪ್ರಕಟಿಸಿದರು.
ನಟಿ ಕಮ್ ರಾಜಕಾರಣಿ ಖುಷ್ಬು ಸುಂದರ್ಗೆ ಬಿಜೆಪಿ ಟಿಕೆಟ್
ತಮಿಳುನಾಡಿನಲ್ಲಿ ನಡೆಯುತ್ತಿರುವ 2021ರ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಸರ್ಕಾರ ಅಸ್ತಿತ್ವಕ್ಕೆ ಬಂದರೆ ರಾಜ್ಯದ ಪ್ರತಿಯೊಂದು ಮನೆಯಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಘೋಷಿಸಿದೆ.
ತಮಿಳುನಾಡಿನಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ:
ತಮಿಳುನಾಡಿನಲ್ಲಿ ಆಡಳಿತ ಪಕ್ಷವಾಗಿರುವ ಎಐಎಡಿಎಂಕೆ ಈ ಬಾರಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ವಿಧಾನಸಭಾ ಚುನಾವಣೆ ಎದುರಿಸುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿ 20 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಭಾನುವಾರವಷ್ಟೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ರಾಜ್ಯದ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನವನ್ನು ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಏಪ್ರಿಲ್.06ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ.02ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.