ಇಬ್ಬರು ಕೇಂದ್ರ ಸಚಿವರ ಸಾವಿನ ಬಗ್ಗೆ ಟೀಕೆ: ಡಿಎಂಕೆ ನಾಯಕ ಉದಯನಿಧಿಗೆ ನೋಟಿಸ್
ಚೆನ್ನೈ, ಏಪ್ರಿಲ್ 06: ಕೇಂದ್ರದ ಮಾಜಿ ಸಚಿವರಾದ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಸಾವಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿಗೊಳಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾಟದಿಂದಲೇ ಈ ಇಬ್ಬರು ಸಚಿವರು ಮೃತಪಟ್ಟಿದ್ದಾರೆ ಎಂದು ಉದಯನಿಧಿ ಸ್ಟಾಲಿನ್ ಗಂಭೀರವಾಗಿ ಆರೋಪಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ಸಂಜೆ 5 ಗಂಟೆಯೊಳಗೆ ಉತ್ತರ ನೀಡಬೇಕು. ತಪ್ಪಿದ್ದಲ್ಲಿ ನಿಮ್ಮ ವಿರುದ್ಧ ಆಯೋಗವು ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಡಿಎಂಕೆ ಚಿಹ್ನೆಯಿದ್ದ ಶರ್ಟ್ ಧರಿಸಿ ಮತದಾನ: ಉದಯನಿಧಿ ವಿರುದ್ಧ ದೂರು
ಕಳೆದ ಮಾರ್ಚ್ 31ರಂದು ಧರ್ಮಾಪುರ್ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ "ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ (ಇಬ್ಬರೂ ಕೇಂದ್ರ ಸಚಿವರು) ಪ್ರಧಾನಿ ನರೇಂದ್ರ ಮೋದಿ ನೀಡಿದ ಒತ್ತಡ ಮತ್ತು ಚಿತ್ರಹಿಂಸೆಗಳನ್ನು ಸಹಿಸಲಾಗದೇ ಮೃತಪಟ್ಟಿದ್ದಾರೆ" ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಸದಸ್ಯರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ನೀತಿ ಸಂಹಿತೆ ಉಲ್ಲಂಘನೆ:
ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ಜಾರಿಯಲ್ಲಿರುವ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಹೇಳಿಕೆ ನೀಡಲಾಗಿದೆ. ಸರ್ಕಾರ ಮತ್ತು ಯೋಜನೆಗಳ ಬಗ್ಗೆ ಟೀಕಿಸಬೇಕೇ ವಿನಃ ಯಾವುದೇ ಕಾರಣಕ್ಕೂ ವೈಯಕ್ತಿಕ ವಿಚಾರಗಳ ಮೇಲೆ ಟೀಕೆ ಮಾಡುವುದು ಸರಿಯಲ್ಲ ಎಂದು ಚುನಾವಣಾ ಆಯೋಗವು ತಿಳಿಸಿದೆ.
ತಮಿಳುನಾಡಿನ 38 ಜಿಲ್ಲೆಗಳ 234 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮಂಗಳವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಯಿತು. ಈ ಬಾರಿ 3998 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.