ಮೇಕೆದಾಟು ಯೋಜನೆ; ಸ್ಟಾಲಿನ್ ಬೆಂಬಲಕ್ಕೆ ನಿಂತ ಬಿಜೆಪಿ!
ಚೆನ್ನೈ, ಜುಲೈ 12; ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಜಟಾಪಟಿ ನಡೆಯುತ್ತಿದೆ. ತಮಿಳುನಾಡು ಸರ್ಕಾರ ಯೋಜನೆ ವಿರೋಧಿಸುತ್ತಿದ್ದು, ಈ ಕುರಿತು ಸುಪ್ರೀಂಕೋರ್ಟ್ ಮೆಟ್ಟಿಲನ್ನು ಸಹ ಏರಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಸೋಮವಾರ ಸರ್ವಪಕ್ಷಗಳ ಸಭೆ ಕರೆದಿದ್ದರು. ಮೇಕೆದಾಟು ಯೋಜನೆ ವಿಚಾರದಲ್ಲಿ ಮುಂದಿನ ನಿಲುವುಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. 'ಕಾವೇರಿ ಮೇಲಿನ ಹಕ್ಕನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ' ಎಂದು ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.
ತಮಿಳುನಾಡು ವಿಧಾನಸಭೆಯಲ್ಲಿ ಬಿಜೆಪಿಯ ನಾಲ್ವರು ಶಾಸಕರಿದ್ದಾರೆ. ಮಾಜಿ ಸಚಿವರಾದ ನಯನಾರ್ ನಾಗೇಂದ್ರನ್ ನೇತೃತ್ವದಲ್ಲಿ ಬಿಜೆಪಿ ಶಾಸಕರು ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಂಡಿದ್ದರು. ತಮಿಳುನಾಡು ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಬಿಜೆಪಿ ನಾಯಕರು ಭರವಸೆ ನೀಡಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವಿದೆ. ಆದರೆ ಬಿಜೆಪಿ ನಾಯಕರು ರಾಜ್ಯದ ವಿಚಾರದಲ್ಲಿ ಎಂ. ಕೆ. ಸ್ಟಾಲಿನ್ ಸರ್ಕಾರಕ್ಕೆ ಬೆಂಬಲ ನೀಡಿದೆ. ಇದರಿಂದಾಗಿ ಕರ್ನಾಟಕ ಬಿಜೆಪಿ ನಾಯಕರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಎಂ. ಕೆ. ಸ್ಟಾಲಿನ್ ಫೋಸ್ಟ್
ಸರ್ವಪಕ್ಷಗಳ ಸಭೆ ಬಳಿಕ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಫೇಸ್ಬುಕ್ ಪೋಸ್ಟ್ ಹಾಕಿದ್ದಾರೆ. 'ಕಾವೇರಿ ವಿಚಾರದಲ್ಲಿ ನಮ್ಮ ಹಕ್ಕನ್ನು ಬಿಟ್ಟುಕೊಡುವುದಿಲ್ಲ. ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ತಮಿಳುನಾಡು ಸರ್ಕಾರದ ನಿಲುವಿಗೆ ಎಲ್ಲರೂ ಬೆಂಬಲ ನೀಡಲಿದ್ದಾರೆ. ರಾಜ್ಯದ ಹಿತವನ್ನು ಕಾಪಾಡೋಣ' ಎಂದು ಹೇಳಿದ್ದಾರೆ.

ಎಂ. ಕೆ. ಸ್ಟಾಲಿನ್ ಸರ್ಕಾರಕ್ಕೆ ಬೆಂಬಲ
ನಯನಾರ್ ನಾಗೇಂದ್ರನ್ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಾಯಕರು, ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಸರ್ಕಾರದ ನಿಲುವಿಗೆ ನಮ್ಮ ಬೆಂಬಲವಿದೆ. ಸುಪ್ರೀಂಕೋರ್ಟ್ ಆದೇಶದಂತೆ ಕರ್ನಾಟಕ ನೀರು ಹರಿಸಬೇಕು ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ರಾಜ್ಯದ ಹಿತ ಮುಖ್ಯವಾಗಿದೆ
ಬಿಜೆಪಿ ರಾಷ್ಟ್ರೀಯ ಪಕ್ಷವಾಗಿರಬಹುದು. ಆದರೆ ರಾಜ್ಯದ ಹಿತ ನಮಗೆ ಮುಖ್ಯ. ಆದ್ದರಿಂದ ಮೇಕೆದಾಟು ವಿಚಾರದಲ್ಲಿ ನಾವು ತಮಿಳುನಾಡು ಸರ್ಕಾರವನ್ನು ಬೆಂಬಲಿಸುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಇದರಿಂದಾಗಿ ಕರ್ನಾಟಕದ ಬಿಜೆಪಿ ನಾಯಕರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ತಮಿಳುನಾಡಿನ ವಿರೋಧವೇಕೆ?
ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಾಣವಾದರೆ ರಾಜ್ಯದ ಪಾಲಿನ ನೀರನ್ನು ಕರ್ನಾಟಕ ಕೊಡುವುದಿಲ್ಲ ಎಂಬುದು ತಮಿಳುನಾಡು ಸರ್ಕಾರದ ವಾದವಾಗಿದೆ. ಕಾವೇರಿ ನದಿ ಪಾತ್ರದ ರಾಜ್ಯಗಳ ಒಪ್ಪಿಗೆ ಇಲ್ಲದೇ ಕರ್ನಾಟಕ ಅಣೆಕಟ್ಟು ನಿರ್ಮಾಣ ಮಾಡುವುದು ಅಸಾಧ್ಯ. ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿಯೂ ವಿರೋಧ ವ್ಯಕ್ತಪಡಿಸಿದೆ.












Click it and Unblock the Notifications