Breaking: ತಮಿಳುನಾಡಿನಲ್ಲಿ ನಿಲ್ಲದ ವಿದ್ಯಾರ್ಥಿಗಳ ಸಾವು, 5ನೇ ಪ್ರಕರಣ
ಚೆನ್ನೈ, ಜುಲೈ 27: ತಮಿಳುನಾಡಿನಲ್ಲಿ ಇಂದು 12ನೇ ತರಗತಿಯ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ವಾರಗಳಲ್ಲಿ ರಾಜ್ಯದಲ್ಲಿ ಐದನೇ ಪ್ರಕರಣ ನಡೆದಿದೆ.
ಶಿವಗಂಗೈ ಜಿಲ್ಲೆಯ ಕಾರೈಕುಡಿ ಬಳಿಯ ತನ್ನ ಮನೆಯಲ್ಲಿ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ತನಗೆ ಕಷ್ಟವಾಗುತ್ತಿದೆ ಎಂದು ಆತ್ಮಹತ್ಯೆ ಪತ್ರ ಬರೆದಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದ್ದು, ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕಾರೈಕುಡಿ ಡಿಎಸ್ಪಿ ವಿನೋಜ್,"ತನ್ನ ಮನೆಯಲ್ಲಿ 12 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ. ಮೃತ ಬಾಲಕನ ಶವಪರೀಕ್ಷೆ ಪೂರ್ಣಗೊಂಡಿದೆ. ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ" ಎಂದಿದ್ದಾರೆ.
ಈ ಮೊದಲು ರಾಜ್ಯದಲ್ಲಿ ನಾಲ್ವರು ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲಿ 12 ನೇ ತರಗತಿಯಲ್ಲಿ ಮೂವರು ಮತ್ತು 11 ನೇ ತರಗತಿಯ ಒಬ್ಬ ವಿದ್ಯಾರ್ಥಿನಿ ಸೇರಿದ್ದಾರೆ. ಈ ತಿಂಗಳು ರಾಜ್ಯದಲ್ಲಿ ವಿದ್ಯಾರ್ಥಿಗಳ ಸಾವಿನ ಐದನೇ ಪ್ರಕರಣ ದಾಖಲಾಗಿದೆ.
ಬುಧವಾರ ಬೆಳಗ್ಗೆ ಶಿವಕಾಶಿಯಲ್ಲಿ 11ನೇ ತರಗತಿಯ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಬಾಲಕಿ ದೀರ್ಘಕಾಲದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರ ಸರಣಿ ಸಾವಿನಿಂದ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ವಿದ್ಯಾರ್ಥಿನಿಯರು ಆತ್ಮಹತ್ಯೆಯ ಆಲೋಚನೆಗಳನ್ನು ದೂರವಿಡುವಂತೆ ಮನವಿ ಮಾಡಿದ್ದಾರೆ. ಹೆಣ್ಣು ಮಕ್ಕಳನ್ನು ಯಾವತ್ತೂ ಆತ್ಮಹತ್ಯಾ ಯೋಚನೆಗೆ ತಳ್ಳಬಾರದು. ವಿದ್ಯಾರ್ಥಿನಿಯರಿಗೆ ಲೈಂಗಿಕ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.