ತಮಿಳುನಾಡಿನ ಅರವಕುರಿಚಿ ಕ್ಷೇತ್ರದಿಂದ ಅಣ್ಣಾಮಲೈ ನಾಮಪತ್ರ
ಚೆನ್ನೈ, ಮಾರ್ಚ್ 19: ತಮಿಳುನಾಡು ವಿಧಾನಸಭಾ ಚುನಾವಣಾ ಕಣದಲ್ಲಿ "ಕರ್ನಾಟಕದ ಸಿಂಗಂ" ಎನಿಸಿಕೊಂಡ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.
ಮಾರ್ಚ್ 18ರಂದು ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೆ ಅಣ್ಣಾಮಲೈ ಅವರು ನಾಮಪತ್ರ ಸಲ್ಲಿಸಿದ್ದಾರೆ. ಸ್ಥಳೀಯ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತ ಜೊತೆಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಅರವಕುರಿಚಿ ವಿಧಾನಸಭಾ ಕ್ಷೇತ್ರವು ದ್ರಾವಿಡ್ ಮುನೇತ್ರ ಕಾಳಗಂ ಪಕ್ಷದ ಭದ್ರಕೋಟೆ ಎನಿಸಿದೆ. ಅಲ್ಪಸಂಖ್ಯಾತರ ಮತದಾರರೇ ಹೆಚ್ಚಿನ ಪ್ರಮಾಣದಲ್ಲಿರುವ ಈ ಕ್ಷೇತ್ರದಲ್ಲಿ ಕಳೆದ 53 ವರ್ಷಗಳಿಂದಲೂ ಡಿಎಂಕೆ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಈ ಬಾರಿ ಅರವಕುರಿಚಿ ಕ್ಷೇತ್ರದಿಂದ ಬಿಜೆಪಿಯು ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಉದ್ದೇಶದಿಂದ ಅಣ್ಣಾಮಲೈ ಅವರಿಗೆ ಟಿಕೆಟ್ ನೀಡಿದೆ.

ಅರವಕುರಿಚಿ ವಿಧಾನಸಭಾ ಕ್ಷೇತ್ರ ಪರಿಚಯ:
ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಎಐಡಿಎಂಕೆ ನಡುವೆ ಚುನಾವಣಾ ಪೂರ್ವ ಮೈತ್ರಿಯಾಗಿದ್ದು, ಬಿಜೆಪಿಗೆ 20 ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ. ಕರೂರು ಜಿಲ್ಲೆಯ ಅರವಕುರಿಚಿ ವಿಧಾನಸಭಾ ಕ್ಷೇತ್ರವು ಬಿಜೆಪಿ ಪಾಲಿಗೆ ಸಿಕ್ಕಿದೆ. 2,13,110 ಮತದಾರರನ್ನು ಹೊಂದಿರುವ ಕ್ಷೇತ್ರದಲ್ಲಿ 1,01,902 ಪುರುಷ ಮತ್ತು 1,11,201 ಮಹಿಳಾ ಮತದಾರರಿದ್ದಾರೆ. 45,000ಕ್ಕೂ ಹೆಚ್ಚು ಮುಸ್ಲಿಂ ಮತದಾರರನ್ನು ಹೊಂದಿರುವ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕೆ. ಅಣ್ಣಾಮಲೈ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.
ಒಂದು ಹಂತದಲ್ಲಿ ತಮಿಳುನಾಡು ಚುನಾವಣೆ:
ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನವನ್ನು ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.












Click it and Unblock the Notifications