ತಮಿಳುನಾಡು ಪಟಾಕಿ ಕಾರ್ಖಾನೆ ಅಗ್ನಿ ದುರಂತ; 19ಕ್ಕೇರಿದ ಸಾವಿನ ಸಂಖ್ಯೆ
ಚೆನ್ನೈ, ಫೆಬ್ರುವರಿ 13: ತಮಿಳುನಾಡಿನ ಸತ್ತೂರು ಬಳಿಯ ಅಚಂಕುಲಂ ಗ್ರಾಮದ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಒಂಬತ್ತು ಮಂದಿ ಘಟನೆ ನಡೆದ ಸ್ಥಳದಲ್ಲೇ ಮೃತಪಟ್ಟಿದ್ದರು. ಶುಕ್ರವಾರ ರಾತ್ರಿವರೆಗೂ ಒಟ್ಟು 15 ಮಂದಿ ಮೃತಪಟ್ಟಿದ್ದು, ಮೂವತ್ತು ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ. ತಮಿಳುನಾಡು ಸಿಎಂ ಪಳನಿಸ್ವಾಮಿ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ 1 ಲಕ್ಷ ಹಾಗೂ 50 ಸಾವಿರ ರೂಪಾಯಿ ನೀಡಲಾಗುತ್ತಿದೆ.

ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ವೇಳೆ ರಾಸಾಯನಿಕವೊಂದನ್ನು ಮಿಶ್ರಣ ಮಾಡಿದ್ದೇ ಸ್ಫೋಟಕ್ಕೆ ಕಾರಣ ಎನ್ನಲಾಗಿದೆ. ಕಾರ್ಖಾನೆ ಕಟ್ಟಡ ಸಂಪೂರ್ಣ ಹಾನಿಯಾಗಿದೆ. ಘಟನೆ ಕುರಿತು ತನಿಖೆಗೆ ಆದೇಶಿಸಿರುವುದಾಗಿ ಸಿಎಂ ಪಳನಿಸ್ವಾಮಿ ತಿಳಿಸಿದ್ದಾರೆ.
ಕಾರ್ಖಾನೆಯಲ್ಲಿ ಸುಮಾರು 100 ಮಂದಿ ಕಾರ್ಮಿಕರಿದ್ದು, ಘಟನೆ ನಡೆದ ಸಂದರ್ಭ 50 ಮಂದಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಐದು ಅಗ್ನಿಶಾಮಕ ದಳ ವಾಹನಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು, ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ತಗ್ಗಿದೆ.
ಶುಕ್ರವಾರ ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು. ಸ್ಥಳದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದರು. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸತ್ತೂರು, ಕೋವಿಲ್ ಪಟ್ಟಿ, ಶಿವಕಾಶಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಡಿಸಿ ಮಾಹಿತಿ ನೀಡಿದ್ದಾರೆ.












Click it and Unblock the Notifications