ದೆಹಲಿ ಮಸೀದಿ: ತಮಿಳುನಾಡಿನ 50 ಮಂದಿಗೆ ಕೊರೊನಾ ಸೋಂಕು
ಚೆನ್ನೈ, ಏಪ್ರಿಲ್ 1: ದೆಹಲಿಯ ನಿಜಾಮುದ್ದೀನ್ ಮಸೀದಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮಿಳುನಾಡಿನ 50 ಮಂದಿಗೆ ಕೊರೊನಾ ಸೋಂಕು ತಗುಲಿದೆ.
15 ದಿನಗಳ ಹಿಂದೆ ದೆಹಲಿಯ ನಿಜಾಮುದ್ದೀನ್ನ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಇಂಡೋನೇಷ್ಯಾ, ಮಲೇಷ್ಯಾ ಸೇರಿದಂತೆ ಅನೇಕ ರಾಜ್ಯಗಳ ಜನರು ಸೇರಿದ್ದರು.
ಈ ಸಭೆಯಲ್ಲಿ ಭಾಗವಹಿಸಿದ್ದ ತೆಲಂಗಾಣದ 6 ಜನರು ಸೇರಿದಂತೆ ಒಟ್ಟು 10 ಸಾವನ್ನಪ್ಪಿದ್ದಾರೆ. 300ಕ್ಕೂ ಅಧಿಕ ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕರ್ನಾಟಕದ 45 ಮಂದಿಯೂ ಆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದರು. ಅದರಲ್ಲಿ 13 ಮಂದಿಯನ್ನು ಪತ್ತೆಹಚ್ಚಿ ಕ್ವಾರಂಟೈನ್ನಲ್ಲಿಡಲಾಗಿದೆ ಎನ್ನುವ ಮಾಹಿತಿಯನ್ನೂ ಕೂಡ ನೀಡಿದ್ದರು.
ಸುಮಾರು 2,000ಕ್ಕೂ ಅಧಿಕ ಜನರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಮಾ. 13ರಿಂದ 15ರವರೆಗೆ ಈ ಸಭೆ ನಡೆದಿತ್ತು. ಇದೀಗ ಸಭೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನವರನ್ನು ಇಂದು ಅಲ್ಲಿನ ಸರ್ಕಾರ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಬೀಲಾ ರಾಜೇಶ್ ಸ್ಪಷ್ಟನೆ ನೀಡಿದ್ದಾರೆ.
ಇದರೊಂದಿಗೆ ತಮಿಳುನಾಡಿನಲ್ಲಿ ಮಂಗಳವಾರ ಒಟ್ಟು 57 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕು ಪೀಡಿತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ.
ರಾಜ್ಯದ ಸುಮಾರು 300 ಜನರು ಮಾರ್ಚ್ ತಿಂಗಳ ಮಧ್ಯದಲ್ಲಿ ನಿಜಾಮುದ್ದೀನನಲ್ಲಿ ನಡೆದಿದ್ದ ಮರ್ಕಾಜ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನೆಲ್ಲಾ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಉಳಿದವರು ಸ್ವಯಂಪ್ರೇರಣೆಯಿಂದ ವೈದ್ಯಕೀಯ ಪರೀಕ್ಷೆಗೆ ಬರುವಂತೆ ಮನವಿ ಮಾಡಲಾಗಿದೆ.
ಮುಂದೆ ತಬ್ಲಿಘೀ ಧಾರ್ಮಿಕ ಕಾರ್ಯಕ್ರಮಕ್ಕೆ ಬರಲು ವೀಸಾ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.












Click it and Unblock the Notifications