ಚಿಕ್ಕಬಳ್ಳಾಪುರ ಸ್ಫೋಟ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸಿಡಿಮಿಡಿ!
ಚಿಕ್ಕಬಳ್ಳಾಪುರ, ಫೆಬ್ರವರಿ.23: ಚಿಕ್ಕಬಳ್ಳಾಪುರ ಜಿಲ್ಲೆ ಮಂಡಿಕಲ್ ಹೋಬಳಿ ಹಿರೇನಾಗವಲ್ಲಿ ಗ್ರಾಮದಲ್ಲಿ ಸಂಭವಿಸಿರುವ ಜಿಲೆಟಿನ್ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಈ ಸಂಬಂಧ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
Recommended Video
"ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆಯಾಗಿದೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು @CMofKarnataka ಅವರನ್ನು ಒತ್ತಾಯಿಸುವೆ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಾಲಾಯಕ್ ಗಳು ನೀವು ಕೆಲಸ ಮಾಡಲಿಕ್ಕೆ: ಅಧಿಕಾರಿಗಳಿಗೆ ಬೆವರಿಳಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ
ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿರುವ ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಆರ್. ಗಂಗಾಧರ್, ವೇಯರ್ ಆಗಿರುವ ಮುರುಳಿ, ಅಭಿ, ವಾಚ್ ಮೆನ್ ಮಹೇಶ್ ಹಾಗೂ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಅಸ್ತ್ರ ಪ್ರಯೋಗಿಸಿದ್ದಾರೆ.
ಸರ್ಕಾರ ಜನರನ್ನು ರಕ್ಷಿಸುತ್ತಿದೆಯೋ ಭ್ರಷ್ಟರನ್ನು ರಕ್ಷಿಸುತ್ತಿದೆಯೋ?
"ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲೇ ನಡೆದ ಚಿಕ್ಕಬಳ್ಳಾಪುರ ಸ್ಪೋಟವು ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಕರ್ನಾಟಕದ ಮುಖ್ಯಮಂತ್ರಿಯವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ?" ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ರಾಜ್ಯ ಸರ್ಕಾರದ ದುರಾಡಳಿತಕ್ಕೆ ಆರು ಜನ ಬಲಿ
"ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಕರ್ನಾಟಕದ ಮುಖ್ಯಮಂತ್ರಿಯವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ" ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಒತ್ತಾಯ
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಕರ್ನಾಟಕದ ಮುಖ್ಯಮಂತ್ರಿಯವರು ತಕ್ಷಣ ಆದೇಶಿಸಬೇಕು. ಇದಕ್ಕಿಂತ ಮೊದಲು ಈ ಘಟನೆಗೆ ಕಾರಣರಾದ ಜಿಲ್ಲೆಯ ಎಲ್ಲ ಅಧಿಕಾರಿಗಳನ್ನು ಅಮಾನತ್ತಿನಲ್ಲಿಟ್ಟು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಅಕ್ರಮವು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಬಂದಿಲ್ಲವೇ?
"ರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧ ಇದೆ. ವಿಧಾನಸೌಧದಿಂದ ಜಿಲ್ಲಾ ಮಟ್ಟದವರೆಗೆ ಎಲ್ಲರೂ ಇದರಲ್ಲಿ ಶಾಮೀಲಾಗಿದ್ದಾರೆ. ಚಿಕ್ಕಬಳ್ಳಾಪುರದ ಈ ಅಕ್ರಮ ಗಣಿಗಾರಿಕೆ, ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್ ಅವರ ಗಮನಕ್ಕೆ ಬಂದಿರಲಿಲ್ಲವೇ?" ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ, ಕರ್ನಾಟಕದಲ್ಲಿ 2000ಕ್ಕೂ ಹೆಚ್ಚು ಅನಧಿಕೃತ ಕ್ರಷರ್, ಕ್ವಾರಿಗಳಿವೆ ಎಂದು ಹೇಳಲಾಗುತ್ತಿದೆ. ಇವುಗಳ ಪಟ್ಟಿಯನ್ನು ಕರ್ನಾಟಕದ ಮುಖ್ಯಮಂತ್ರಿಯವರು ತಕ್ಷಣ ಬಿಡುಗಡೆಗೊಳಿಸಬೇಕು ಮತ್ತು ಅವುಗಳನ್ನು ನಿರ್ದಾಕ್ಷಿಣ್ಯವಾಗಿ ಮುಚ್ಚುವ ಕೆಲಸ ಶುರು ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.