ಸೆ.8ಕ್ಕೆ ಜನೋತ್ಸವ: ಪೂರ್ವಭಾವಿ ಸಭೆ, ಸುಧಾಕರ್ ಹೇಳಿದ್ದೇನು?
ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಬಿಜೆಪಿ ನೆಲೆ ಭದ್ರವಾಗಿದೆ. ಮುಖಂಡರು ಮತ್ತು ಕಾರ್ಯಕರ್ತರೆಲ್ಲರೂ ಒಗ್ಗಟ್ಟಿನಿಂದ ಗುರಿಯೆಡೆಗೆ ನಡೆಯುವ ಮೂಲಕ ಕ್ಷೇತ್ರದಲ್ಲಿ ಕಮಲ ಅರಳಿಸಲು ಶ್ರಮಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಕರೆ ನೀಡಿದರು.
ಇದೇ ಸೆಪ್ಟಂಬರ್ 8ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಜನೋತ್ಸವ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ಚಿಕ್ಕಬಳ್ಳಾಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜನೋತ್ಸವ ಕಾರ್ಯಕ್ರಮ ಗಟ್ಟಿ ಅಡಿಪಾಯ ಆಗಬೇಕು ಎಂದು ಅವರು ಸಲಹೆ ನೀಡಿದರು.
ಪ್ರಸ್ತುತ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಈ ಸಮಯದಲ್ಲಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದೆ. ಈ ವೇಳೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿಬೇಕು. ಸರ್ಕಾರದ ರಿಪೋರ್ಟ್ ಕಾರ್ಡ್ ಜನರ ಮುಂದಿಡಬೇಕು. ಚುನಾವಣೆಯಲ್ಲಿ ತೀರ್ಮಾನಿಸುವವರು ಜನಸಾಮಾನ್ಯರೇ ಎಂದು ಜನೋತ್ಸವ ಕುರಿತು ತಿಳಿಸಿದರು.

ದೇಶಕ್ಕಾಗಿ ಸಮರ್ಪಣೆ ಮಾಡಿಕೊಳ್ಳಬೇಕು.
ಬಿಜೆಪಿ ಸಿದ್ಧಾಂತ ದೇಶಕ್ಕಾಗಿ ಮೊದಲ ಹೋರಾಟ ಮಾಡುವುದು, ಅದಕ್ಕಾಗಿ ದೇಶಕ್ಕೆ ತಮ್ಮನ್ನು ಸಮರ್ಪಣೆ ಮಾಡಿಕೊಳ್ಳಬೇಕು. ಮಂಗಳೂರಿನಲ್ಲಿ 3 ಸಾವಿರ ಕೋಟಿಗೂ ಹೆಚ್ಚು ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದ್ದಾರೆ.
ಗುರುವಾರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯಕ್ಕೆ ಆಗಮಿಸಿದ್ದರು. ಅವರು ಪ್ರಜಾಪ್ರಭುತ್ವದ ತತ್ವಗಳನ್ನು ಅಳವಡಿಸಿಕೊಂಡ ಶ್ರೇಷ್ಠ ಸಂತರು. ರಾಷ್ಟ್ರ ಮತ್ತು ರಾಜ್ಯ ಮಟ್ಟದ ನಾಯಕರು ಈ ಪಕ್ಷದ ಶಕ್ತಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಬಸವರಾಜ ಬೊಮ್ಮಾಯಿ ಅವರು ಉನ್ನತ ಸ್ಥಾನ ಅಲಂಕರಿಸಿರುವುದು ಪಕ್ಷಕ್ಕೆ ದೊಡ್ಡ ಶಕ್ತಿಯಾಗಿದೆ ಎಂದು ಹೇಳಿದರು.

ಯೋಜನೆಗಳ ಬಗ್ಗೆ ಜನರಿಗೆ ತಿಳಿಯಬೇಕು
ಗೌರಿಬಿದನೂರು ಕ್ಷೇತ್ರಕ್ಕೆ ರಾಜ್ಯ ಮಟ್ಟದ ಮಂಡಳಿಯೊಂದರ ಅಧ್ಯಕ್ಷ ಸ್ಥಾನ ಸಿಕ್ಕಿದೆ. ಗೌರಿಬಿದನೂರಿನಲ್ಲಿರುವ 31 ಗ್ರಾಮಪಂಚಾಯಿತಿ ನಗರದಲ್ಲಿರುವ 31 ವಾರ್ಡುಗಳ ಜವಾಬ್ದಾರಿ ಸ್ಥಳೀಯ ಮುಖಂಡರಿಗೆ ವಹಿಸಬೇಕು. ಸರ್ಕಾರದ ಯೋಜನೆಗಳ ಫಲಾನುಭವಿಗಳನ್ನು ಜನೋತ್ಸವಕ್ಕೆ ಕರೆತರುವ ಕೆಲಸವಾಗಬೇಕು ಎಂದು ಸಚಿವರು ಸಲಹೆ ನೀಡಿದರು.
ವಿದ್ಯಾಸಿರಿ ಯೋಜನೆ, ಕೃಷಿ ಸಮ್ಮಾನ್ ಯೋಜನೆಯಂತಹ ಫಲಾನುಭವಿಗಳು ತಪ್ಪದೇ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು, ರೈತರ ಖಾತೆಗೆ ಬರುತ್ತಿರುವ ಹಣ ನೀಡುತ್ತಿರುವವರು ಯಾರು ಎಂಬ ಅರಿವು ಜನಸಾಮಾನ್ಯರಿಗೆ ಇರಬೇಕಲ್ಲವೇ ಎಂದು ಸಚಿವರು ಪ್ರಶ್ನಿಸಿದರು.
ವರ್ಷಗಳ ಹಿಂದೆ ಸರ್ಕಾರದ ಯೋಜನೆಯ ಹಣ ಪಡೆಯಬೇಕಾದರೆ ಮಧ್ಯವರ್ತಿಗಳಿಗೆ ಹಣ ಸಲ್ಲಿಸಬೇಕಿತ್ತು. ತಿಂಗಳುಗಳ ಗಟ್ಟಲೆ ಕಚೇರಿಗಳಿಗೆ ಅಲೆಯಬೇಕಿತ್ತು. ಆದರೆ ಈಗ ಅಂತಹ ಸ್ಥಿತಿ ಇಲ್ಲ. ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆದ ಬೆಳೆಗಳಿಗೆ ಪರಿಹಾರ. ಆಯುಷ್ಮಾನ್ ಭಾರತ್ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರುಪಾಯಿ ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಯೋಜನೆ ಕುರಿತು ವಿವರಿಸಿದರು.

ಗೌರಿಬಿದನೂರು ಆಸ್ಪತ್ರೆ ಮೇಲ್ದರ್ಜೆಗೆ
ಗೌರಿಬಿದನೂರು ಆಸ್ಪತ್ರೆಯನ್ನು ಆದಷ್ಟು ಶೀಘ್ರವೇ ಮೇಲ್ದರ್ಜೆಗೆ ಏರಿಸುವ ಚಿಂತನೆಯಲ್ಲಿದ್ದೇವೆ. ಎತ್ತಿನಹೊಳೆ ಯೋಜನೆ ಶೀಘ್ರವೇ ಅನುಷ್ಠಾನವಾಗಲಿದೆ. ಎಚ್ಎನ್ ವ್ಯಾಲಿ ಈಗಾಗಲೇ ಅನುಷ್ಠಾನವಾಗಿ ಜನರ ಸಮಸ್ಯೆ ಪರಿಹಾರ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. ದೇಶದಲ್ಲಿ 10 ಕೋಟಿ ಶೌಚಾಲಯ ಉಚಿತವಾಗಿ ನಿರ್ಮಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ, ಇಂತಹ ಪ್ರಧಾನಿ ದೊರೆತಿರುವುದು ಈ ದೇಶದ ಪುಣ್ಯ ಎಂದರು.

ಬಿಜೆಪಿ ವ್ಯಕ್ತಿಯ ಹುಟ್ಟುಹಬ್ಬ ಆಚರಿಸುವುದಿಲ್ಲ
ಭಾರತದಲ್ಲಿ 140 ಕೋಟಿ ಮಂದಿಗೆ ಎರಡು ಡೋಸ್ ಲಸಿಕೆ ನೀಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಕೋವಿಡ್ ನಂತರ ದೇಶ ಆರ್ಥಿಕ ಪುನಶ್ಚೇತನವಾಗುತ್ತಿದೆ. ಪ್ರಸ್ತುತದಲ್ಲಿ ಜಿಡಿಪಿ 13.5 ರಷ್ಟಕ್ಕೆ ಏರಿಕೆ ಆಗಿದೆ. ಇಂತಹ ಸಂದರ್ಭದಲ್ಲಿ ಜನೋತ್ಸವವನ್ನು ಅತ್ಯಂತ ಸೂಕ್ತವಾಗಿ ಆಚರಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ನಾವು ಯಾರ ಹುಟ್ಟುಹಬ್ಬವನ್ನೂ ಆಚರಿಸುತ್ತಿಲ್ಲ, ಜನರ ಹಬ್ಬವನ್ನು ಆಚರಿಸುತ್ತಿದ್ದೇವೆ, ರಾಜ್ಯದಲ್ಲಿ ಮೊದಲ ಕಾರ್ಯಕ್ರಮ ದೊಡ್ಡಬಳ್ಳಾಪುರಕ್ಕೆ ನೀಡಿರುವುದು ವಿಶೇಷ ಎಂದು ಸಿದ್ದರಾಮೋತ್ಸವ ಕುರಿತು ವ್ಯಂಗ್ಯವಾಡಿದರು.
ಬಿಜೆಪಿ ಜನರಿಗಾಗಿ ಶ್ರಮಿಸುತ್ತಿರುವ ಪಕ್ಷವಾಗಿದೆ. ಕಳೆದ ಮೂರು ವರ್ಷದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಜನಪರ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂಬ ಉದ್ಧೇಶದಿಂದ ಜನೋತ್ಸವ ಆಯೋಜಿಸಿದ್ದೇವೆ. ಇದನ್ನು ಯಶಸ್ವಿಗೊಳಿಸಲು ಎಲ್ಲರೂ ಕೈ ಜೋಡಿಸಬೇಕೆಂದು ಸಚಿವರು ಕೋರಿದರು.
ಕಾರ್ಯಕ್ರಮದಲ್ಲಿ ದ್ರಾಕ್ಷಿ ಮಂಡಳಿ ಅಧ್ಯಕ್ಷ ರವಿ ನಾರಾಯಣರೆಡ್ಡಿ, ಮಾಜಿ ಶಾಸಕಿ ಜೋತಿರೆಡ್ಡಿ, ಎಂ.ಎನ್. ಶಶಿಧರ್ ಸೇರಿದಂತೆ ಇತರರು ಪೂರ್ವ ಭಾವಿ ಸಭೆಯಲ್ಲಿದ್ದರು.












Click it and Unblock the Notifications