ಚಿಕ್ಕಬಳ್ಳಾಪುರ ಭೀಕರ ರಸ್ತೆ ಅಪಘಾತದಲ್ಲಿ 13 ಸಾವು: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
ಚಿಕ್ಕಬಳ್ಳಾಪುರ, ಅಕ್ಟೋಬರ್ 26: ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹದಿಮೂರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಭೀಕರ ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ.
ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಎರಡು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿರುವ ಮುಖ್ಯಮಂತ್ರಿಗಳು ಘಟನೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಮೂಲಕ ಹಾದು ಹೋಗುವ ರಾಷ್ಟೀಯ ಹೆದ್ದಾರಿ 44 ರಲ್ಲಿ ಮಂಜು ಕವಿದಿದ್ದ ಕಾರಣದಿಂದ ಟಾಟಾ ಸುಮೋ ಹಾಗೂ ಬಲ್ಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರದ ಹೊರವೊಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಮುಂಭಾಗದಲ್ಲಿಯೇ ಈ ಘಟನೆ ನಡೆದಿದ್ದು, ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೊ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಹದಿಮೂರು ಮಂದಿ ಸಾವನ್ನಪ್ಪಿದ್ದು, ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಆಂಧ್ರಪ್ರದೇಶದ ಗೊರೆಂಟ್ಲಾ ನಿವಾಸಿಗಳಾಗಿದ್ದು, ಬೆಂಗಳೂರಿನ ಹೊಂಗಸಂದ್ರಲ್ಲಿ ಕೆಲಸದ ನಿಮಿತ್ತ ಪ್ರಯಾಣ ಮಾಡುತ್ತಿದ್ದವರೆಂದು ತಿಳಿದು ಬಂದಿದೆ.

ಇನ್ನು ಅಪಘಾತಕ್ಕೆ ದಟ್ಟವಾದ ಮಂಜು ಕವಿದಿದ್ದೆ ಪ್ರಮುಖ ಕಾರಣ ಎಂದು ಪ್ರತ್ಯಕ್ಷದರ್ಶಿ ಶಿವು ಎನ್ನುವವರು ಮಾಹಿತಿ ನೀಡಿದ್ದು, ಅಲ್ಲದೇ ನಾಗಾಲ್ಯಾಂಡ್ ನೋಂದಾವಣೆಯಾಗಿರುವ ಸಿಮೆಂಟ್ ಮಿಕ್ಸ್ ಲಾರಿ ನೆನ್ನೆಯಿಂದಲೂ ರಸ್ತೆ ಬದಿ ನಿಂತಿದ್ದು ಸಹ 13 ಜನರ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ.
ರಸ್ತೆ ಬದಿ ವಾಹನಗಳ ನಿಲುಗಡೆಯಿಂದ ಇಂತಹ ದುರ್ಘಟನೆಗಳು ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ರಾಷ್ಟೀಯ ಹೆದ್ದಾರಿ ಪಕ್ಕದಲ್ಲಿ ಯಾವುದೇ ತರಹದ ವಾಹನಗಳ ನಿಲುಗಡೆಗೆ ಅವಕಾಶ ನೀಡದಂತೆ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಸ್ಥಳೀಯ ವಾಹನ ಸವಾರರು ಅಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕ ಘಟನೆಯಾಗಿದೆ.
— Dr Sudhakar K (@DrSudhakar_) October 26, 2023
ಈ ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಈ ಆಘಾತವನ್ನು ಸಹಿಸುವ ಶಕ್ತಿ ನೀಡಲಿ ಮತ್ತು ಗಾಯಗೊಂಡಿರುವ ವ್ಯಕ್ತಿಗಳು ಪ್ರಾಣಾಪಾಯದಿಂದ ಹೊರಬಂದು… pic.twitter.com/nxijKWJ70n
ಸಂಚಾರ ನಿಯಮಗಳನ್ನು ಪಾಲಿಸೋಣ-ಮಾಜಿ ಸಚಿವ ಡಾ.ಕೆ ಸುಧಾಕರ್
ಅಪಘಾತದ ಬಗ್ಗೆ ಮಾಜಿ ಸಚಿವ ಡಾ.ಕೆ ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕ ಘಟನೆಯಾಗಿದೆ.
ಈ ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಈ ಆಘಾತವನ್ನು ಸಹಿಸುವ ಶಕ್ತಿ ನೀಡಲಿ ಮತ್ತು ಗಾಯಗೊಂಡಿರುವ ವ್ಯಕ್ತಿಗಳು ಪ್ರಾಣಾಪಾಯದಿಂದ ಹೊರಬಂದು ಸಂಪೂರ್ಣ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ರಸ್ತೆ ಅನಾಹುತಗಳು ಅತ್ಯಂತ ದುರಾದೃಷ್ಟಕರವಾಗಿದ್ದು, ಸಂತ್ರಸ್ತ ಕುಟುಂಬಗಳನ್ನು ಹೇಳತೀರದ ಸಂಕಷ್ಟಕ್ಕೆ ದೂಡುತ್ತವೆ. ವಾಹನ ಚಲಾಯಿಸುವಾಗ, ಅದರಲ್ಲೂ ಹೆದ್ದಾರಿಗಳಲ್ಲಿ ಪ್ರಯಾಣಿಸುವಾಗ ಅತ್ಯಂತ ಎಚ್ಚರಿಕೆಯಿಂದ ಇರೋಣ, ಸಂಚಾರ ನಿಯಮಗಳನ್ನು ಪಾಲಿಸೋಣ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.












Click it and Unblock the Notifications