ಅಂತಿಮಗೊಳ್ಳದ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು: ರಂಗೇರದ ಚಿಕ್ಕಬಳ್ಳಾಪುರ ಚುನಾವಣಾ ಕಣ
ಚಿಕ್ಕಬಳ್ಳಾಪುರ, ಏಪ್ರಿಲ್ 8: ರಾಜ್ಯ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ಘೋಷಣೆ ಮಾಡಿ ಒಂದು ವಾರ ಕಳೆಯುತ್ತಾ ಬಂದರೂ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಚುನಾವಣಾ ಕಣ ಇನ್ನೂ ರಂಗೇರಿಲ್ಲ.ಎಲ್ಲಾ ಕ್ಷೇತ್ರಗಳಲ್ಲೂ ಎಲ್ಲ ಪಕ್ಷಗಳ ಅಭ್ಯರ್ಥಿಗಳ ಹೆಸರು ಇನ್ನೂ ಅಂತಿಮಗೊಳ್ಳದೇ ಇರುವುದರಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ಇನ್ನೂ ಪೂರ್ಣ ಪ್ರಮಾಣದಲ್ಲಿ ಪ್ರಚಾರದ ಅಖಾಡಕ್ಕೆ ಇಳಿದಿಲ್ಲ.
ಆಕಾಂಕ್ಷಿಗಳು ಮಾತ್ರ ವೈಯಕ್ತಿಕವಾಗಿ ಕ್ಷೇತ್ರ ವ್ಯಾಪ್ತಿಯ ಮುಖಂಡರನ್ನು, ಕಾರ್ಯಕರ್ತರನ್ನು ಭೇಟಿ ಮಾಡುತ್ತಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬಹಿರಂಗವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವು ಸಾಮಾನ್ಯ ಕ್ಷೇತ್ರವಾಗಿದ್ದು, ಹಿಂದೆ ಜೆಡಿಎಸ್, ಕಾಂಗ್ರೆಸ್ ಪ್ರಬಾಲ್ಯ ಹೊಂದಿತ್ತು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದ ಡಾ.ಕೆ.ಸುಧಾಕರ್ ಬಿಜೆಪಿಗೆ ಸೇರ್ಪಡೆಯಾಗಿ ಉಪ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಜೊತೆಗೆ ಕ್ಷೇತ್ರದಲ್ಲಿ ಬಿಜೆಪಿಯನ್ನು ಸಂಘಟಿಸಿ ಬಲಿಷ್ಠಗೊಳಿಸಿದ್ದಾರೆ. ಆದರೂ ಸಹ ಜೆಡಿಎಸ್, ಕಾಂಗ್ರೆಸ್ ಈ ಭಾರಿ ಅಸ್ತಿತ್ವವನ್ನು ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದೆ.
ಜೆಡಿಎಸ್ನಿಂದ ನಿರಂತರ ಪ್ರಚಾರ
ಜೆಡಿಎಸ್ ಪಕ್ಷದಿಂದ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡರನ್ನು ಅಭ್ಯರ್ಥಿಯನ್ನಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದು, ಬಚ್ಚೇಗೌಡ ಬೆಂಬಲಗರೊಂದಿಗೆ ಕ್ಷೇತ್ರದ ಹಳ್ಳಿಹಳ್ಳಿಗೂ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಶಾತಾಯಗತಾಯ ಗೆಲ್ಲಲೇಬೇಕು ಎಂಬ ಪ್ರಯತ್ನದಲ್ಲಿ ಇದ್ದಾರೆ. ಭೇಟಿ ನೀಡಿದ ಗ್ರಾಮದಲ್ಲಿ ಪ್ರತಿಯೊಂದು ಪ್ರಮುಖ ಮುಖಂಡರ ಮನೆಗಳಿಗೆ ತೆರಳಿ ಬೆಂಬಲ ಕೋರುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ಫಿಕ್ಸ್
ಸಚಿವ ಡಾ.ಕೆ.ಸುಧಾಕರ್ ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದು ಕಾರ್ಯಕರ್ತರು ನಂಬಿದ್ದು, ಪಕ್ಷವು ಅಧಿಕೃತವಾಗಿ ಇನ್ನು ಘೋಷಣೆ ಮಾಡಿಲ್ಲ. ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಾಧನೆಗಳ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಅನುಷ್ಠಾನಕ್ಕೆ ತಂದಿರುವ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಮೂಲಕ ಮುಂದಿನ ಚುನಾವಣೆಯ ಪ್ರಚಾರ ಕೈಗೊಂಡಿದ್ದಾರೆ. ಅಭ್ಯರ್ಥಿ ಆಯ್ಕೆವಿಚಾರದಲ್ಲಿ ಬಿಜೆಪಿಯಲ್ಲಿ ಯಾವುದೇ ರೀತಿ ಗೊಂದಲಗಳು ಇಲ್ಲ.

ಪ್ರಣಾಳಿಕೆ ಸಮಿತಿಯ ಸಂಚಾಲಕರಾಗಿರುವ ಡಾ.ಕೆ.ಸುಧಾಕರ್ ಅವರು ಕ್ಷೇತ್ರಗಳವಾರು ತಂಡಗಳನ್ನು ರಚನೆ ಮಾಡಿದ್ದು, ವಿವಿಧ ಕ್ಷೇತ್ರಗಳ ಯುವಕರ, ತಜ್ಞರ ಸಭೆ ನಡೆಸಿ ಪ್ರನಾಳಿಕೆ ತಯಾರಿಸುವ ಕುರಿತು ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ. ರಾಜ್ಯ ಮಟ್ಟದಲ್ಲಿ ಬಿಜೆಪಿ ಕೋರ್ಕಮಿಟಿ ಸಭೆಗಳು ನಡೆದಿದ್ದು ಇನ್ನು ಎರಡು ಮೂರು ದಿನಗಳೊಳಗೆ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗುವ ಸಾಧ್ಯತೆಯಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ೧೫ ಕ್ಷೇತ್ರಗಳ ಪೈಕಿ ೮ ಕ್ಷೇತ್ರದಲ್ಲಿ ಕೇಸರಿ ಭಾವುಟ ಹಾರಿಸುವ ಪ್ರಯತ್ನ ನಡೆಯುತ್ತಿದೆ.
ವರಿಷ್ಠರಿಗೆ ಸವಾಲಾದ ಟಿಕೆಟ್ ವಿಚಾರ
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಕಾಂಗ್ರೆಸ್ ವರಿಷ್ಠರಿಗೆ ದೊಡ್ಡ ಸವಾಲಾಗಿದೆ. ಡಾ.ಕೆ.ಸುಧಾಕರ್ನ್ನು ಮಣಿಸಲು ಯೋಗ್ಯ ಅಭ್ಯರ್ಥಿ ಉಡುಕಾಟದಲ್ಲಿದ್ದಾರೆ. ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್, ವಿನಯ್ ಶ್ಯಾಮ್ ಅಕಾಂಕ್ಷಿಗಳಾಗಿದ್ದರು. ಕಳೆದ ಒಂದು ವಾರದಿಂದ ಪರಿಶ್ರಮ್ ನೀಟ್ ಅಕಾಡೆಮಿ ಮುಖ್ಯಸ್ಥ ಪ್ರದೀಪ್ ಈಶ್ವರ್ ಹೆಸರು ಕೇಳಿಬರುತ್ತಿದ್ದು ನಗರದ ವೆಂಕಟಮರಣ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಆನಂತರ ನಗರ ಹೊರವಲಯದ ದುರ್ಗಾ ಖಾಸಗಿ ಹೋಟೆಲ್ನಲ್ಲಿ ಮುಖಂಡರ ಸಭೆ ನಡೆಸಿ ಚುನಾವಣೆಯ ಸಂಬಂಧ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.
ಡಿಸಿಸಿ ಅಧ್ಯಕ್ಷರ ವಿರುದ್ಧ ಅಸಮಾಧಾನ
ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಪಿ.ಬಚ್ಚೇಗೌಡ, ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ಪಿಕ್ಸ್ ಆಗಿದ್ದು, ಕಾಂಗ್ರೆಸ್ನಿಂದ ಯಾರಿಗೆ ಟಿಕೆಟ್ ಸಿಗಬಹುದು ಎಂಬುದು ಕಾರ್ಯಕರ್ತರಲ್ಲಿ ಗೊಂದಲವು ಮಾಡಿದೆ. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬೇರೆ ಪಕ್ಷಗಳತ್ತ ಮುಖ ಮಾಡುತ್ತಿದ್ದಾರೆ. ಪಕ್ಷದಲ್ಲಿರುವ ಗೊಂದಲ ನಿವಾರಣೆ ಮಾಡಲು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಮುಂದಾಗದೆ ಇರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಪಕ್ಷದ ಅಸ್ತಿತ್ವವನ್ನು ಉಳಿಸಿಕೊಳ್ಳಲು ಶೀರ್ಘದಲೇ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು ಎಂದು ಕಾರ್ಯಕರ್ತರು ವರಿಷ್ಠರನ್ನು ಒತ್ತಾಯಿಸಿದ್ದಾರೆ.












Click it and Unblock the Notifications