ಅಂತಿಮವಾಗದ ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಕೈ ಅಭ್ಯರ್ಥಿ: ಕಾಂಗ್ರೆಸ್ಗೆ ಪಕ್ಷಾಂತರ ಭೀತಿ?
ಚಿಕ್ಕಬಳ್ಳಾಪುರ, ಏಪ್ರಿಲ್ 8: ಕೆಲ ದಿನಗಳ ಹಿಂದೆಯಷ್ಟೇ ರಾಜ್ಯದ 224 ಕ್ಷೇತ್ರಗಳಿಗೆ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದ ಕಾಂಗ್ರೆಸ್ ಹೈಕಮಾಂಡ್ ಗುರುವಾರ 2 ನೇ ಪಟ್ಟಿಯನ್ನು ಸಹ ಪ್ರಕಟಿಸಿದೆ. ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇನ್ನು ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 5 ವಿಧಾನಸಭಾ ಕ್ಷೇತ್ರಗಳಿದ್ದು, ಈಗಾಗಲೇ 3 ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆಯಾಗಿದೆ. ಗೌರಿಬಿದನೂರಿನಿಂದ ಹಾಲಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ಬಾಗೇಪಲ್ಲಿ ಹಾಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಚಿಂತಾಮಣಿ ವಿಧಾನಸಭಾ ಕ್ಷೇತ್ರದಿಂದ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ ಡಾ.ಎಂ.ಸಿ.ಸುಧಾಕರ್ ಅವರನ್ನು ಅಭ್ಯರ್ಥಿಯಾಗಿಸಿದೆ.

ಎರಡು ದಿನಗಳ ಹಿಂದೆ ಕಾಂಗ್ರೆಸ್ ಹೈ ಕಮಾಂಡ್ ತನ್ನ ಎರಡನೇ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದ್ದು, 42 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಆದರೆ ಈ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುದನ್ನು ಇನ್ನು ನಿಗೂಢವಾಗಿ ಇಟ್ಟಿಕೊಂಡಿದೆ. ಹೀಗಾಗಿ ಎರಡನೇ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಹೊರ ಬೀಳಲಿದೆ ಎಂಬುದಾಗಿ ಕಾದು ಕುಳಿತಿದ್ದ ಕೈ ಕಾರ್ಯಕರ್ತರಲ್ಲಿ ನಿರಾಸೆ ಮೂಡಿಸಿದೆ.
ನಿವೃತ್ತಿ ಘೋಷಣೆ ಮಾಡಿದ ಹಾಲಿ ಶಾಸಕ ವಿ.ಮುನಿಯಪ್ಪ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಲಿ ಶಾಸಕರಾಗಿರುವ ವಿ.ಮುನಿಯಪ್ಪ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ಇಲ್ಲಿ ಅರ್ಹ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಬಲರಾಗಿರುವ ಬಿಜೆಪಿಯ ಡಾ.ಕೆ.ಸುಧಾಕರ್ ಅವರನ್ನು ಮಣಿಸಲು ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿ ಇನ್ನು ಕೂಡ ಕಾಂಗ್ರೆಸ್ ನಿರತವಾಗಿದೆ. ಹೀಗಾಗಿ ಈ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಅಳೆದು, ತೂಗಿ ಗೆಲ್ಲುವ ಕುದುರೆಯನ್ನೇ ಕಣಕ್ಕಿಳಿಸಲು ತಯಾರಿ ನಡೆಸಿದೆ. ಈ 2 ಕ್ಷೇತ್ರಗಳಿಗೆ ಯಾರು ಅಭ್ಯರ್ಥಿಯಾಗಲಿದ್ದಾರೆ ಎಂಬುದೇ ಈಗಿರುವ ಕುತೂಹಲ.

ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ
ಈಗಾಗಲೇ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಪ್ರಕಟಿಸಿದ ಕ್ಷೇತ್ರಗಳಲ್ಲಿ ಕೈ ಪಡೆಯಿಂದ ಬಿರುಸಿನ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ತಮ್ಮ ಕ್ಷೇತ್ರಗಳಲ್ಲಿಯೇ ಅಭ್ಯರ್ಥಿಗಳು ಠಿಕಾಣಿ ಹೂಡಿ, ಸುತ್ತಾಟ ನಡೆಸಿದ್ದಾರೆ. ಇನ್ನು ಅಭ್ಯರ್ಥಿ ಘೋಷಣೆಯಾಗದ ಶಿಡ್ಲಘಟ್ಟ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೈ ಪಾಳೆಯದಲ್ಲಿ ಚುನಾವಣಾ ರಂಗು ಕಾವೇರದೇ ಮಂಕು ಬಡಿದಿದೆ.
ಒಟ್ಟಿನಲ್ಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗೆ ಟಿಕೆಟ್ ಲಭ್ಯವಾಗಲಿದೆ ಎಂಬುದರ ಬಗ್ಗೆ ಅತ್ತ ಕಾರ್ಯಕರ್ತರು, ಇತ್ತ ಮತದಾರರಲ್ಲಿ ಗೊಂದಲ ಮನೆ ಮಾಡುವಂತಾಗಿದೆ.
ಕಾಂಗ್ರೆಸ್ಗೆ ಪಕ್ಷಾಂತರ ಭೀತಿ!
ಟಿಕೆಟ್ ಘೋಷಣೆಗೂ ಮುನ್ನವೇ ಡಾ.ಕೆ.ಸುಧಾಕರ್ ರಾಜಕೀಯ ವಿರೋಧಿಗಳ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಜಿ.ಪಂ ಮಾಜಿ ಅಧ್ಯಕ್ಷ ಮುನೇಗೌಡ ಅವರು ಸುಧಾಕರ್ ಸಮ್ಮುಖದಲ್ಲಿಯೇ ಬಿಜೆಪಿ ಸೇರಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿತ್ತು. ಇವರ ಹಾದಿಯಲ್ಲಿ ಹಲವರು ಪಕ್ಷಾಂತರ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ ಎನ್ನಲಾಗಿದ್ದು, ಈಗಾಗಲೇ ಕಾಂಗ್ರೆಸ್ ಹಲವರು ಬಿಜೆಪಿ ಸೇರ್ಪಡೆ ಆಗಿದ್ದಾರೆ. ಇದರ ನಡುವೆ ಕೈ ಅಭ್ಯರ್ಥಿ ಘೋಷಣೆಯ ಬಳಿಕ ಬಂಡಾಯದ ಬಿಸಿ ಮತ್ತಷ್ಟು ಏರಲಿದೆ ಎಂಬುದನ್ನು ಅರಿತ ಪಕ್ಷದ ವರಿಷ್ಠರು ಅಭ್ಯರ್ಥಿಯ ಘೋಷಣೆಯಲ್ಲಿ ತಡಮಾಡುತ್ತಿದ್ದಾರೆ ಎನ್ನಲಾಗಿದೆ.












Click it and Unblock the Notifications