ಕೇಂದ್ರದ ಮಾಜಿ ಸಚಿವ ಆರ್. ಎಲ್. ಜಾಲಪ್ಪ ವಿಧಿವಶ
ಚಿಕ್ಕಬಳ್ಳಾಪುರ, ಡಿಸೆಂಬರ್ 17; ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆರ್. ಎಲ್. ಜಾಲಪ್ಪ ವಿಧಿವಶರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು 40 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ದೊಡ್ಡಬಳ್ಳಾಪುರದ ತೂಬಗೆರೆ ನಿವಾಸದಲ್ಲಿದ್ದಾಗ ಆರ್. ಎಲ್. ಜಾಲಪ್ಪ (97) ಪಾರ್ಶ್ವವಾಯುವಿಗೆ ತುತ್ತಾಗಿದ್ದರು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು, ಕೋಲಾರದ ಆರ್. ಎಲ್. ಜಾಲಪ್ಪ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (2/2)
— CM of Karnataka (@CMofKarnataka) December 17, 2021
ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಸಂಜೆ 7.30ರ ಸುಮಾರಿಗೆ ಆರ್. ಎಲ್. ಜಾಲಪ್ಪ ಸಾವನ್ನಪ್ಪಿದ್ದಾರೆ. ಕಳೆದ ಭಾನುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಜಾಲಪ್ಪ ಆರೋಗ್ಯ ವಿಚಾರಿಸಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಸಚಿವರು, ಶಾಸಕರು ಆರ್. ಎಲ್. ಜಾಲಪ್ಪ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶನಿವಾರ ಸಂಜೆ 5 ಗಂಟೆ ಸುಮಾರಿಗೆ ದೊಡ್ಡಬಳ್ಳಾಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ಹೇಳಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ.
— Siddaramaiah (@siddaramaiah) December 17, 2021
ಇವರ ಸಾವಿನಿಂದ ನನ್ನ ಕುಟುಂಬದ ಸದಸ್ಯನಂತಿದ್ದ, ನನ್ನ ಹಿತೈಷಿ ಮತ್ತು ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ.
ಅವರ ಕುಟುಂಬದ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ. pic.twitter.com/OsZgki3Wji
ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ಆರ್. ಎಲ್. ಜಾಲಪ್ಪ ಚಿಕ್ಕಬಳ್ಳಾಪುರದ ಸಂಸದರಾಗಿದ್ದರು. 4 ಬಾರಿ ಗೆಲುವು ಸಾಧಿಸಿದ್ದರು. ಕೇಂದ್ರದ ಸಚಿವರಾಗಿಯೂ ಕೆಲಸ ಮಾಡಿದ್ದರು. ಅಗಲಿದ ಹಿರಿಯ ಚೇತನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರ್. ಎಲ್. ಜಾಲಪ್ಪ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 'ಜಾಲಪ್ಪ ಅವರಿಗೆ ನನ್ನ ಭಾವಪೂರ್ಣ ಶ್ರದ್ಧಾಂಜಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.
'ಶಿಕ್ಷಣ, ಆರೋಗ್ಯ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ್ದ, ರಾಜ್ಯ ಮತ್ತು ಕೇಂದ್ರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಶ್ರೀ ಆರ್.ಎಲ್.ಜಾಲಪ್ಪ ಅವರ ಅಗಲಿಕೆ ದುಃಖವುಂಟು ಮಾಡಿದೆ. ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಅವರು, 1996ರಲ್ಲಿ ಶ್ರೀ ಹೆಚ್. ಡಿ. ದೇವೇಗೌಡರು ಪ್ರಧಾನಿಯಾಗಿದ್ದಾಗ ಅವರ ಸಂಪುಟದಲ್ಲಿ ಸಚಿವರಾಗಿದ್ದರು' ಎಂದು ನೆನಪು ಮಾಡಿಕೊಂಡಿದ್ದಾರೆ.
ರಕ್ತ ಹೆಪ್ಪುಗಟ್ಟಿತ್ತು; 2021ರ ಫೆಬ್ರವರಿಯಲ್ಲಿ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಆರ್. ಎಲ್. ಜಾಲಪ್ಪಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. 2 ಬಾರಿ ಶಸ್ತ್ರ ಚಿಕಿತ್ಸೆ ನೀಡಿದ ಬಳಿಕ ಅವರು ಚೇತರಿಸಿಕೊಂಡಿದ್ದರು. ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಆಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.
ಶನಿವಾರ ಅಂತ್ಯಕ್ರಿಯೆ; ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಶನಿವಾರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಆರ್. ಎಲ್. ಜಾಲಪ್ಪ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಂಜೆ 5 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ.
ಆರ್. ಎಲ್. ಜಾಲಪ್ಪ ಪರಿಚಯ; ಆರ್. ಎಲ್. ಜಾಲಪ್ಪ 1925ರ ಅ.19ರಂದು ಜನಿಸಿದರು. ತಂದೆ ಬೆಂಗಳೂರು ಉತ್ತರ ತಾಲೂಕಿನ ರಾಜನಕುಂಟೆ ಗ್ರಾಮದ ಲಕ್ಷ್ಮೀ ನಾರಾಯಣಪ್ಪ ಮತ್ತು ತಾಯಿ ನರಸಮ್ಮ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹಳ್ಳಿಯಲ್ಲಿಯೇ ಪಡೆದ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿಎ ಪದವಿ ಪಡೆದರು. ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಕಾಲೇಜಿನಲ್ಲಿ ಆರ್. ಎಲ್. ಜಾಲಪ್ಪ ಒಡನಾಡಿಯಾಗಿದ್ದರು.
ವಿದ್ಯಾರ್ಥಿಯಾಗಿದ್ದಾಗಲೇ ಸಂಘಟನೆಯಲ್ಲಿ ತೊಡಗಿದ್ದ ಆರ್. ಎಲ್. ಜಾಲಪ್ಪ ಬಳಿಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು. ವಿಧಾನ ಪರಿಷತ್ ಸದಸ್ಯರಾಗಿ, ಶಾಸಕರಾಗಿ, ಸಂಸದರಾಗಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದರು.
ಆರ್. ಎಲ್. ಜಾಲಪ್ಪಗೆ ಜೆ. ನರಸಿಂಹ ಸ್ವಾಮಿ, ಜೆ. ನಾಗೇಂದ್ರ ಸ್ವಾಮಿ, ಜೆ. ರಾಜೇಂದ್ರ ಎಂಬ ಮೂವರು ಪುತ್ರರು. ಪಾರ್ವತಮ್ಮ, ಲಕ್ಷ್ಮೀ, ಉಮಾದೇವಿ, ಸರಸ್ವತಿ ಎಂಬ ಪುತ್ರಿಯರು ಇದ್ದಾರೆ. ಹಿರಿಯ ಪುತ್ರರಾದ ಜೆ. ನರಸಿಂಹ ಸ್ವಾಮಿ ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕರು.
Recommended Video