ಗುಡಿಬಂಡೆ: ಉಚಿತ ಆರೋಗ್ಯ ಶಿಬಿರಗಳು ಮಧ್ಯಮ ವರ್ಗದವರಿಗೆ ವರದಾನ: ಟಿ.ಕೋನಪ್ಪರೆಡ್ಡಿ
ಗುಡಿಬಂಡೆಯಲ್ಲಿ ಬಡಜನರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೋನಪ್ಪರೆಡ್ಡಿ ತಿಳಿಸಿದರು.
ಚಿಕ್ಕಬಳ್ಳಾಪುರ, ಫೆಬ್ರವರಿ, 27: ಪಟ್ಟಣ ಮತ್ತು ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ, ಶಿಕ್ಷಣ, ವಿದ್ಯಾರ್ಥಿ ನಿಲಯಗಳ ಸೌಲಭ್ಯವನ್ನು ಒದಗಿಸಲಾಗುತ್ತದೆ. ಹಾಗೂ ವಿವಿಧ ಕಂಪನಿಗಳ ಮೂಲಕ ಉದ್ಯೋಗ ಕೊಡಿಸುವ ಮೂಲಕ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಜನರ ಜೀವನವನ್ನು ಸುಧಾರಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೋನಪ್ಪರೆಡ್ಡಿ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು. ಇಂದು ಕಣ್ಣು, ಕಿವಿ, ಮೂಗು, ಗಂಟಲು, ದಂತ, ಮೂಳೆ, ಚರ್ಮ ರೋಗ, ಮಹಿಳೆಯರ ಆರೋಗ್ಯ ಸಮಸ್ಯೆ ಬಗ್ಗೆ ವಿಚಾರಿಸಲಾಗುತ್ತಿದೆ. ಇದನ್ನು ಸೇರಿದಂತೆ ವಿವಿಧ ತಪಾಸಣೆಗಳನ್ನು ಮಾಡಿ ಸ್ಥಳದಲ್ಲೇ ಸೂಕ್ತ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದರು.

ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ನಮ್ಮ ಪೂರ್ವಜರ ಕಾಲದಲ್ಲಿ ವಾಂತಿ-ಬೇದಿ, ಟೈಫಾಯಿಡ್, ಕ್ಷಯ, ಕಾಲಾರದಂತಹ ರೋಗಗಳು ಸಾಮಾನ್ಯವಾಗಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ ಎಂದರು.
ಬಡ ಜನರಿಗಾಗಿ ಉಚಿತ ಆರೋಗ್ಯ ಶಿಬಿರ
ಇವೆಲ್ಲವೂ ದುಬಾರಿ ವೆಚ್ಚದ ಖಾಯಿಲೆಗಳಾಗಿದ್ದು, ಆರ್ಥಿಕ ನೆರವಿಲ್ಲದೆ ಅನೇಕರು ಇಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದವರು ಆರೋಗ್ಯ ತಪಾಸಣೆಗೆ ಮಾಡಿಸಿಕೊಳ್ಳದೆ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ಹಾಗಾಗಿ ಬಡ ಜನರಿಗೆ ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದರು.
ನಮ್ಮಲ್ಲಿ ಯಾವುದೇ ಬಣಗಳಿಲ್ಲ
ಯಾರೇ ಅಭ್ಯರ್ಥಿಯಾದರೂ ಗೆಲುವಿಗಾಗಿ ಹೋರಾಡುತ್ತೇನೆ. ಪಕ್ಷ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲು ಸಾಧ್ಯ. ಹಾಗಾಗಿ ಅಭ್ಯರ್ಥಿಗಳು ಯಾರೇ ಆದರೂ ಅವರ ಗೆಲುವಿಗಾಗಿ ಶ್ರಮಿಸುವುದು ನಮ್ಮ ಜವಾಬ್ದಾರಿಯಾಗಿದೆ. ಕ್ಷೇತ್ರದಲ್ಲಿ ಮುನಿರಾಜು, ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪ ಅಥವಾ ನಾನು ಟಿಕೆಟ್ ಆಕಾಂಕ್ಷಿಗಳಾಗಿದ್ದು, ನಾವು ಮೂವರೂ ಸಮಾಜ ಸೇವೆಯ ಮೂಲಕ ಪಕ್ಷದ ಸಾಧನೆಗಳನ್ನು ಜನರಿಗೆ ಮುಟ್ಟಿಸುತ್ತೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ವಿ.ಎಸ್.ಎಸ್ ಸಂಘದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಶಿಬಿರದಿಂದ ಬಡ ಜನರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ಟಿ.ಕೋನಪ್ಪರೆಡ್ಡಿಯವರು ಸಹ ಹಳ್ಳಿ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಬಡತನದ ಪರಿಚಯವೂ ಅವರಿಗಿದೆ. ಹಾಗೆಯೇ ಬಡ ಜನರ ಸೇವೆಯ ಮೂಲಕ ಅವರ ಋಣವನ್ನು ಆರೋಗ್ಯ ಶಿಬಿರಗಳ ಮೂಲಕವೇ ತೀರಿಸುತ್ತಿದ್ದೇವೆ ಎಂದರು.
ಚಿಕಿತ್ಸೆ ಪಡೆದ ನೂರಾರು ರೋಗಿಗಳು
ಬೃಹತ್ ಆರೋಗ್ಯ ತಪಾಸಣೆ ಶಿಬಿರದಲ್ಲಿ ನೂರಾರು ರೋಗಿಗಳು ಭಾಗವಹಿಸಿ ಚಿಕಿತ್ಸೆ ಪಡೆದರು. ಭಾಗವಹಿಸಿದ್ದ ಎಲ್ಲರಿಗೂ ಉಚಿತವಾಗಿ ಔಷಧಗಳನ್ನು ವಿತರಿಸಲಾಯಿತು. ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಕೆಲವರನ್ನು ಮಾತ್ರ ಗುರುತಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಮಂಜುನಾಥ್ ರೆಡ್ಡಿ, ಪಾವಜೇನಹಳ್ಳಿ ನಾಗರಾಜ್ ರೆಡ್ಡಿ, ಕರಗಾನತಮ್ಮನಹಳ್ಳಿ ರಾಜರೆಡ್ಡಿ, ಹನುಮಂತರೆಡ್ಡಿ, ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಗಂಗಿರೆಡ್ಡಿ ಸೇರಿದಂತೆ ತಾಲೂಕಿನ ವಿವಿಧ ಘಟಕಗಳ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಪಲಾನುಭವಿಗಳು ಭಾಗವಹಿಸಿದ್ದರು.












Click it and Unblock the Notifications