ಉದ್ಘಾಟನೆಗೊಂಡರೂ ಸೇವೆಗಿಲ್ಲದ ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು: ಕೆ.ಪಿ.ಬಚ್ಚೇಗೌಡ ಕಿಡಿ
ಚಿಕ್ಕಬಳ್ಳಾಪುರ, ಏಪ್ರಿಲ್ 5: ರಾಜ್ಯದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಾತಾವರಣ ಸೃಷ್ಟಿಯಾಗಿದ್ದು, ಅಧಿಕಾರಾದ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಮನೆಮನೆಗೆ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿಯ ಆಡಳಿತದ ಕಾರ್ಯವೈಖರಿಯ ಬಗ್ಗೆ ಜನ ಗಮನಸಿದ್ದಾರೆ. ಅವರ ವರ್ತನೆಗಳಿಂದ ರೋಸಿ ಹೋಗಿರುವ ಜನ ಪ್ರಾದೇಶಿಕ ಪಕ್ಷದತ್ತ ಒಲವು ತೋರುತ್ತಿದ್ದಾರೆ ಎಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾಣಬಹುದು ಎಂದು ರಾಜ್ಯದ ಜನ ನಿರೀಕ್ಷಿಸಿದ್ದರು. ಬಿಜೆಪಿ ಸರಕಾರ ಕೋವಿಡ್ ನೆಪವನ್ನು ಮುಂದಿಟ್ಟುಕೊಂಡು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ ಎಂದು ಕೇಂದ್ರ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಅತಿಯಾದ ಮಳೆ ಬಂದು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ರೈತರ ಬೆಳೆಗಳು ನಾಶವಾಗಿದ್ದವು, ಜಾನುವಾರುಗಳು ಮೃತಪಟ್ಟಿದ್ದವು, ಮನೆಗಳು ನೆಲಕಚ್ಚಿದ್ದವು, ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿ ಇದ್ದರೂ ಸಹ ಕೇಂದ್ರ ಸರ್ಕಾರ ಪರಿಹಾರ ನೀಡಿದ್ದು ಸ್ವಲ್ಪ ಮಾತ್ರವೇ ಎಂದು ಆರೋಪಿಸಿದರು.
ಅಪೂರ್ಣ ಕಟ್ಟಡ ಉದ್ಘಾಟನೆ
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಸಾಕಷ್ಟು ಆಗಬೇಕಿದೆ. ಕೇವಲ ಕೊಳಚೆ ನೀರು ಹರಿಸಿ, ನಗರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಿದ ಮಾತ್ರಕ್ಕೆ ಅಭಿವೃದ್ಧಿಯಾಗಿದೆ ಎಂದು ಹೇಳಲು ಆಗುವುದಿಲ್ಲ. ಜನರಿಗೆ ಅಗತ್ಯವಾಗಿ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೆಡಿಕಲ್ ಕಾಲೇಜು ಕಟ್ಟಡ ಉದ್ಘಾಟನೆ ಮಾಡಿಯೂ ಇದುರೆಗೂ ಸಾರ್ವಜನಿಕರ ಉಪಯೋಗಕ್ಕೆ ಬಿಟ್ಟಿಲ್ಲ. ಅಪೂರ್ಣ ಕಟ್ಟಡಗಳನ್ನು ಉದ್ಘಾಟಿಸಿ ಹೋಗಿದ್ದಾರೆ. ಇದು ಬಿಜೆಪಿಗರ ಚುನಾವಣಾ ಗಿಮಿಕ್. ಈ ರೀತಿಯ ಕೆಲಸಕ್ಕೆ ಜನರು ತಕ್ಕ ಪಾಠ ಕಲಿಸಬೇಕು ಎಂದು ಎಚ್ಚರಿಸಿದರು.

ಪಕ್ಷದ ಮನೆ ಮನೆ ಪ್ರಚಾರದ ವೇಳೆ ಉಪಸ್ಥಿತರಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಮುನೇಗೌಡ ಮಾತನಾಡಿ, ಜನ ಬಹಿರಂಗವಾಗಿ ಹೇಳಿಕೊಳ್ಳಲಾಗದ ಪರಿಸ್ಥಿತಿ ಕ್ಷೇತ್ರದಲ್ಲಿ ನಿರ್ಮಾಣವಾಗಿದೆ. 58ನೇ ದಿನ ಮನೆಮನೆಗೆ ಭೇಟಿ ಕಾರ್ಯಕ್ರಮ ನಡೆಸುತ್ತಿದ್ದು, ಜನರು ಎದುರಿಸುತ್ತಿರುವ ಬಗ್ಗೆ ಅಳಲು ತೋಡಿಕೊಳ್ಳುತ್ತಿದ್ದಾರೆ. ಇದನೆಲ್ಲಾ ಕೊನೆಗಾಣಿಸಲು ಕ್ಷೇತ್ರದ ಜನ ಬದಲಾಗುವ ಮೂಲಕ ಜೆಡಿಎಸ್ಗೆ ಬೆಂಬಲ ನೀಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಪ್ರಚಾರಕ್ಕಾಗಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡರು ಕ್ಷೇತ್ರದ ಯಾವುದೇ ಗ್ರಾಮಕ್ಕೆ ಭೇಟಿ ನೀಡಿದರು ಕಾಂಗ್ರೆಸ್, ಬಿಜೆಪಿ ಪಕ್ಷಗಳನ್ನು ತೋರೆದ ಜೆಡಿಎಸ್ಗೆ ಸೇರ್ಪಡೆಯಾಗುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬುತ್ತಿದ್ದಾರೆ. ಈ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ಗಂಟು ಮೂಟ್ಟೆ ಕಟ್ಟುವ ಕೆಲಸ ಜನ ಮಾಡುತ್ತಾರೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.

ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಕಾಡಿಗೆನಹಳ್ಳಿ ಬಾಬು, ದರ್ಶನ್, ಅನಿಲ್ ಸೇರಿದಂತೆ ಅನೇಕ ಮುಖಂಡರುಗಳು ಕಾಂಗ್ರೆಸ್ ಹಾಗೂ ಬಿಜೆಪಿ ತೊರೆದು ಬುಧವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲೇ ಕ್ಷೇತ್ರದಲ್ಲಿ ಜೆಡಿಎಸ್ ಭರ್ಜರಿ ಪ್ರಚಾರ ಆರಂಭಿಸಿದೆ.
ಜೆಡಿಎಸ್ ಮನೆ ಮನೆ ಚುನಾವಣಾ ಪ್ರಚಾರದ ವೇಳೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯ ರಾಜಕಾಂತ್, ಮುಖಂಡರಾದ ಚನ್ನಬೈರೇಗೌಡ, ರೆಡ್ಡಿ, ಮುನಿಯಪ್ಪ ಹಾಗೂ ಅಣ್ಣಯಮ್ಮ ಮುಂತಾದವರು ಉಪಸ್ಥಿತರಿದ್ದರು.











Click it and Unblock the Notifications