ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 12 ಜನರ ದುರ್ಮರಣ
ಚಿಕ್ಕಬಳ್ಳಾಪುರ, ಅಕ್ಟೋಬರ್ 26: ಚಿಕ್ಕಬಳ್ಳಾಪುರ ನಗರದ ಮೂಲಕ ಹಾದು ಹೋಗುವ ರಾಷ್ಟೀಯ ಹೆದ್ದಾರಿ 44 ರಲ್ಲಿ ಮಂಜು ಕವಿದಿದ್ದ ಕಾರಣದಿಂದ ಟಾಟಾ ಸುಮೋ ಹಾಗೂ ಬಲ್ಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಚಿಕ್ಕಬಳ್ಳಾಪುರದ ಹೊರವೊಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಎದುರುಗಡೆಯೇ ಈ ದುರ್ಘಟನೆ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೊ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಸುಮೊದಲ್ಲಿದ್ದ ಹನ್ನೆರಡು ಮಂದಿ ಮೃತಪಟ್ಟಿದ್ದರೆ, ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಟಾಟಾ ಸುಮೋ ವಾಹನವು ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರದ ಕಡೆ ಹೋರಟಿತ್ತು. ಈ ಸಂದರ್ಭದ ರಸ್ತೆಯಲ್ಲಿ ಸಂಪೂರ್ಣ ದಟ್ಟ ಮಂಜು ಆವರಿಸಿದ್ದ ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ರಸ್ತೆ ಬದಿ ನಿಲ್ಲಿಸಿದ್ದ ಲಾರಿ ಸರಿಯಾಗಿ ಕಾಣಿಸಿಲ್ಲ. ಇದರಿಂದ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೊ ವಾಹನದ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣ ಮಾಡುತ್ತಿದ್ದ ಹದಿನೈದು ಜನರಲ್ಲಿ ಹನ್ನೆರಡು ಮಂದಿ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಪೂರ್ಣ ವಿಳಾಸ ಹಾಗೂ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ರಸ್ತೆ ಬದಿ ವಾಹನಗಳ ನಿಲುಗಡೆಯಿಂದ ಇಂತಹ ದುರ್ಘಟನೆಗಳು ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ರಾಷ್ಟೀಯ ಹೆದ್ದಾರಿ ಪಕ್ಕದಲ್ಲಿ ಯಾವುದೇ ತರಹದ ವಾಹನಗಳ ನಿಲುಗಡೆಗೆ ಅವಕಾಶ ನೀಡದಂತೆ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಅನೇಕ ವಾಹನ ಸವಾರರು ಅಗ್ರಹಿಸಿದ್ದಾರೆ.












Click it and Unblock the Notifications