ಸಾವಿನಲ್ಲೂ ರಾಜಕೀಯ ಬೇಳೆ ಬೇಯಿಸುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು: ಸುಧಾಕರ್
ಬೆಂಗಳೂರು, ಫೆಬ್ರವರಿ 23: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿ ಗ್ರಾಮದಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟದ ಘಟನೆ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಅಕ್ರಮ ಕಲ್ಲು ಕ್ವಾರಿ ಬಳಿ ಈ ಘಟನೆ ನಡೆದಿದ್ದು, ಸರ್ಕಾರದ ಬೇಜವಾಬ್ದಾರಿತನವೇ ಇದಕ್ಕೆ ಕಾರಣ ಎಂದು ವಿರೋಧಪಕ್ಷಗಳು ಆರೋಪಿಸಿವೆ.
ಈ ದುರ್ಘಟನೆ ನಡೆಯಲು ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಿದ ಸಚಿವ ಡಾ. ಕೆ ಸುಧಾಕರ್ ಕಾರಣ ಎಂದು ವಿರೋಧಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಈ ಆರೋಪಗಳನ್ನು ಸುಧಾಕರ್ ತಳ್ಳಿಹಾಕಿದ್ದಾರೆ. ತಮ್ಮ ವಿರುದ್ಧ ಆರೋಪ ಮಾಡುತ್ತಿರುವವರ ಮೇಲೆ ಅವರು ಕಿಡಿಕಾರಿದ್ದಾರೆ.
ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರೊಬ್ಬರು ಸುಧಾಕರ್ ವಿರುದ್ಧ ಆರೋಪಗಳನ್ನು ಮಾಡಿದ ಘಟನೆ ಕೂಡ ನಡೆದಿದೆ. ಸಚಿವ ಸುಧಾಕರ್ ಮತ್ತು ಅವರ ಸಂಬಂಧಿಕರ ಒಡೆತನದ ಸರ್ವೆ ನಂ 11ರಲ್ಲಿ 30 ಎಕರೆ ಜಮೀನು ಇದೆ. ಅವರೇ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದು, ಇದಕ್ಕೆ ಸುಧಾಕರ್ ನೇರ ಹೊಣೆ ಎಂದು ಆರೋಪಿಸಿದ್ದರು. ಆಗ ಸಚಿವರ ಬೆಂಬಲಿಗರು ಅವರ ಮೇಲೆ ಹಲ್ಲೆಗೆ ಮುಂದಾದರು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಮುಂದೆ ಓದಿ.

ಬೇರೆಡೆ ಸಾಗಿಸುವಾಗ ದುರಂತ
ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ವಾಸ್ತವಾಂಶ ಅರಿಯದೆ ಈ ರೀತಿ ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ. ನಿಯಮ ಬಾಹಿರವಾಗಿ ಜಿಲೆಟಿನ್ ಸಂಗ್ರಹಣೆ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ್ದ ಸಂದರ್ಭದಲ್ಲಿ ಅದನ್ನು ಬೇರೆಡೆ ಸಾಗಿಸುವಾಗ ಈ ದುರಂತ ಸಂಭವಿಸಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಎಂದಿಗೂ ಬೆಂಬಲ ನೀಡಿಲ್ಲ
ಅಕ್ರಮ ಗಣಿಗಾರಿಕೆ ಅಥವಾ ಇನ್ಯಾವುದೇ ರೀತಿಯ ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳಿಗೆ ನಾನು ಎಂದಿಗೂ ಬೆಂಬಲ ನೀಡಿಲ್ಲ ಮತ್ತು ಮುಂದೆಯೂ ನೀಡುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ದೊರಕಿಸುವುದು ನನ್ನ ಕರ್ತವ್ಯವಾಗಿದ್ದು ಆದಷ್ಟು ಬೇಗ ಈ ಕೆಲಸ ಮಾಡಲಿದ್ದೇನೆ ಎಂದು ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಲಿ
ಸಾವಿನ ಮನೆಯಲ್ಲೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮತ್ತು ಇನ್ನೊಬ್ಬರ ತೇಜೋವಧೆ ಮಾಡಲು ಯತ್ನಿಸುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ನಾಚಿಕೆಯಾಗಬೇಕು. ಈ ಘಟನೆಯ ಹಿಂದೆ ಯಾರೇ ಇರಲಿ ಅವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ಅವರು ತಿಳಿಸಿದ್ದಾರೆ.
Recommended Video

ಸುಧಾಕರ್ ಗಮನಕ್ಕೆ ಬಂದಿರಲಿಲ್ಲವೇ?
ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರುಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧ ಇದೆ. ವಿಧಾನಸೌಧದಿಂದ ಜಿಲ್ಲಾಮಟ್ಟದ ವರೆಗೆ ಎಲ್ಲರೂ ಇದರಲ್ಲಿ ಶಾಮೀಲಾಗಿದ್ದಾರೆ. ಚಿಕ್ಕಬಳ್ಳಾಪುರದ ಈ ಅಕ್ರಮ ಗಣಿಗಾರಿಕೆ, ಉಸ್ತುವಾರಿ ಸಚಿವ ಕೆ ಸುಧಾಕರ್ ಗಮನಕ್ಕೆ ಬಂದಿರಲಿಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.












Click it and Unblock the Notifications