ಚಿಂತಾಮಣಿಯಲ್ಲಿ ಪ್ರಸಾದ ಸೇವಿಸಿ ಯುವತಿ ಸಾವು, 6 ಮಂದಿ ಅಸ್ವಸ್ಥ
ಚಿಕ್ಕಬಳ್ಳಾಪುರ, ಜನವರಿ 26: ದೇವಾಲಯದಲ್ಲಿ ಪ್ರಸಾದ ಸೇವಿಸಿ ಓರ್ವ ಯುವತಿ ಮೃತಪಟ್ಟಿದ್ದು, ಆರು ಮಂದಿ ಅಸ್ವಸ್ಥರಾಗಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ.
ಚಿಂತಾಮಣಿಯ ಗಜಾನನ ವೃತ್ತದ ಬಳಿ ಇರುವ ಗಂಗಮ್ಮ ದೇವಾಲಯದಲ್ಲಿ ಈ ಘಟನೆ ಸಂಭವಿಸಿದೆ, ಪ್ರಸಾದ ಸೇವಿಸಿದ ಕವಿತಾ(28) ಮೃತಪಟ್ಟಿದ್ದಾರೆ. ಗಾನವಿ, ಶರಣಿ, ಗಂಗಾಧರ ಸೇರಿ ಇನ್ನೂ ಮೂರು ಮಂದಿಯನ್ನು ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ದೇವಾಲಯದಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗಿದ್ದ ಕೇಸರಿಬಾತ್ನ್ನು ಸ್ವೀಕರಿಸಿದ್ದರು ಎಂದು ತಿಳಿದುಬಂದಿದೆ. ಫುಡ್ ಪಾಯ್ಸನ್ನಿಂದ ಮೃತಪಟ್ಟಿದ್ದಾರೋ ಅಥವಾ ನಿಜವಾಗಿಯೂ ವಿಷಯವನ್ನು ಬೆರೆಸಲಾಗಿತ್ತೋ ಎನ್ನುವ ಕುರಿತು ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

ಚಾಮರಾಜನಗರದ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಈ ಘಟನೆ ನಡೆದಿದ್ದು ಜನರಲ್ಲಿ ಆತಂಕವನ್ನು ಸೃಷ್ಟಿ ಮಾಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ದೇವಾಲಯದಲ್ಲಿ ಪ್ರಸಾದ ಸ್ವೀಕರಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಮರಣೋತ್ತರ ಪರೀಕ್ಷೆಯ ವರದಿ ನಿರೀಕ್ಷಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

ಪದೇ ಪದೇ ಇಂತಹ ದುರಂತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸರ್ಕಾರ ಕೆಲವು ಮಾರ್ಗಸೂಚಿ ಹೊರಡಿಸುವ ಅಗತ್ಯವಿದೆ ಎಂಬುದು ನನ್ನ ಅಭಿಪ್ರಾಯ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.












Click it and Unblock the Notifications